ಬೀದರ್: ಪಶ್ಚಿಮ ಬಂಗಾಳದ ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆಗೈದಿರುವ ಘಟನೆ ಖಂಡಿಸಿ, ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ನಗರದಲ್ಲಿ ಶನಿವಾರ ಮೊಂಬತ್ತಿ ಬೆಳಗಿಸಿ, ಹೆಜ್ಜೆ ಹಾಕಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾ ಕಾರಾಗೃಹ ಸಮೀಪದ ಸಾಯಿಬಾಬಾ ಮಂದಿರದಿಂದ ಕೇಂದ್ರ ಬಸ್ ನಿಲ್ದಾಣ ಮಾರ್ಗವಾಗಿ ತಾಯಿ ಮತ್ತು ಮಗು ವೃತ್ತದ ವರೆಗೆ ಮೌನ ಮೆರವಣಿಗೆ ನಡೆಸಿದರು.ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷೆ ಉಲ್ಲಾಸಿನಿ ವಿಕ್ರಮ್ ಮುದಾಳೆ ಆಗ್ರಹಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶಕುಂತಲಾ ಬೆಲ್ದಾಳೆ, ಮುಖಂಡ ವಿಕ್ರಮ ಮುದಾಳೆ, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಪೀರಪ್ಪ ಔರಾದೆ, ಕಿರಣ ಪಾಟೀಲ, ಬಿಜೆಪಿ ಬೀದರ್ ನಗರ ಘಟಕದ ಅಧ್ಯಕ್ಷ ಶಶಿಧರ ಹೊಸಳ್ಳಿ, ಮಹಿಳಾ ಮೋರ್ಚಾ ನಗರ ಘಟಕದ ಅಧ್ಯಕ್ಷೆ ಯೋಗೇಶ್ವರಿ ಸೋನಕಾಂಬಳೆ, ಸೌಭಾಗ್ಯವತಿ, ಲುಂಬಿಣಿ ಗೌತಮ, ಮಾಯಾವತಿ ಕೋಟೆ ಮತ್ತಿತರರು ಪಾಲ್ಗೊಂಡಿದ್ದರು.