ಮೈಸೂರು: ಸರ್ಕಾರಿ ಶಾಲೆಯ ಮಕ್ಕಳು ಪೌರಾಣಿಕ ನಾಟಕ ಪ್ರದರ್ಶನ ಮಾಡಿ ಓದಿನಲ್ಲೂ, ಕಲೆಯಲ್ಲೂ ನಾವು ಮುಂದು ಎಂಬುದನ್ನು ಸಾಬೀತು ಮಾಡಿದ್ದಾರೆ.
ಚಿನ್ನಂಬಳ್ಳಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ದಕ್ಷ ಯಜ್ಞ ಎಂಬ ಪೌರಾಣಿಕ ನಾಟಕ ಪ್ರದರ್ಶನ ಮಾಡಿ, ಪ್ರೇಕ್ಷಕರ ಮನಗೆದ್ದರು.

ನಾಟಕದಲ್ಲಿ ನಂಜನಗೂಡು ಕ್ಷೇತ್ರ ಶಿಕ್ಷಣಾಧಿಕಾರಿ ಸಿ ಎನ್ ರಾಜು ಬಣ್ಣ ಹಚ್ಚಿ ಸೂತ್ರಧಾರಿಯ ಪಾತ್ರ ಮಾಡಿದರು.

ಈ ಸಂದರ್ಭ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ ಎನ್ ರಾಜು, ಸರ್ಕಾರಿ ಶಾಲಾ ಅವರಣದಲ್ಲಿ ಮಕ್ಕಳಿಂದ ಪೌರಾಣಿಕ ನಾಟಕ ಮಾಡಿಸುತ್ತಿರುವುದು ಒಳ್ಳೆಯ ಬೆಳವಣಿಗೆ. ಕಲೆ, ನಾಟ್ಯ, ಸಂಸ್ಕೃತಿ, ಸಾಹಿತ್ಯ, ಜಾನಪದ ಸಾಹಿತ್ಯ, ನಾಟಕ ಸಾಹಿತ್ಯ, ಎಲ್ಲವೂ ಕೂಡ ಈ ತಂತ್ರಜ್ಞಾನದ ಯುಗದಲ್ಲಿ ಕ್ಷೀಣಿಸುತ್ತಿರುವ ಈ ಸಂದರ್ಭದಲ್ಲಿ ಚಿನ್ನಂಬಳ್ಳಿ ಸರ್ಕಾರಿ ಶಾಲೆಯಲ್ಲಿ ದಕ್ಷಯಜ್ಞ ಎಂಬ ಪೌರಾಣಿಕ ನಾಟಕವನ್ನು ಪ್ರದರ್ಶನ ಮಾಡುತ್ತಿರುವುದು ಸಂತಸ ತಂದಿದೆ ಎಂದರು.
ಸರ್ಕಾರಿ ಶಾಲೆಗಳ ಬಗ್ಗೆ ಆಸಕ್ತಿ ಹೊಂದಿ, ಸರ್ಕಾರಿ ಶಾಲೆಗಳ ಬಲವರ್ಧನೆ ಆಗಬೇಕು. ಸರ್ಕಾರಿ ಶಾಲೆಗಳಲ್ಲಿ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಮಕ್ಕಳಿಗೆ ಗುಣಮಟ್ಟದ ಉತ್ತಮವಾದ ಶಿಕ್ಷಣವನ್ನು ನೀಡುತ್ತದೆ. ಶಿಕ್ಷಣ ಎಂದರೆ ಬರೀ ಪಾಠ ಬೋಧನೆ ಅಲ್ಲ. ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಕೂಡ ನಮ್ಮ ಸರ್ಕಾರಿ ಶಾಲೆಗಳು ಮೇಲುಗೈ ಸಾಧಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾಮಾಜಿಕ ಮತ್ತು ಪೌರಾಣಿಕ ನಾಟಕಗಳನ್ನು ಹಾಗೂ ಜಾನಪದ ಕಲೆಗಳನ್ನು ಹೊರ ತೆಗೆಯುವ ಕೆಲಸವನ್ನು ಸರ್ಕಾರಿ ಶಾಲೆಗಳು ಮಾಡುತ್ತಿವೆ. ಗ್ರಾಮೀಣ ಪ್ರತಿಭೆಗಳನ್ನು ಗ್ರಾಮಸ್ಥರು ಮತ್ತು ಶಿಕ್ಷಕರು ಅನಾವರಣ ಮಾಡುತ್ತಿರುವುದು ಮಾದರಿಯಾಗಿದೆ. ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಯಾವುದೇ ರಂಗದಲ್ಲೂ ಕಡಿಮೆ ಇಲ್ಲ. ದಯವಿಟ್ಟು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಎಂದು ಮನವಿ ಮಾಡಿದರು.
ಇದಕ್ಕೂ ಮುನ್ನ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಶಾಲಾ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಗ್ರಾಮದ ಮುಖಂಡರು, ಗ್ರಾಮ ಪಂಚಾಯಿತಿಗೆ ಸದಸ್ಯರು ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.