ಕೋಲಾರ (Kolar) ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಕೊತ್ತೂರು ಮಂಜುನಾಥ್ (Kotturu Manjunath) ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಕೆ ಆರೋಪದಲ್ಲಿ ಹಾಲಿ ಶಾಸಕರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಹೈಕೋರ್ಟ್ ಸೂಚನೆ ನೀಡಿರುವ ಬೆನ್ನಲ್ಲೇ ಶಾಸಕ ಮಂಜುನಾಥ್ ಮಾತನಾಡಿದ್ದು, ನನ್ನನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ (Congress) ಸೇರಿದಂತೆ ಎಲ್ಲಾ ಪಕ್ಷದ ನಾಯಕರೂ ಕಾಯುತ್ತಿದ್ದಾರೆ ಎಂದು ಕೋಲಾರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
![](https://pratidhvani.com/wp-content/uploads/2024/01/vijay-karnataka-99757753.jpg)
ಕೋಲಾರದಲ್ಲಿ ಮಾತನಾಡಿರುವ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್, ಜಾತಿಪ್ರಮಾಣ ಪತ್ರ ಕುರಿತು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ರಾಜ್ಯ ಸರ್ಕಾರ ಏನು ಕ್ರಮ ಕೈಗೊಳ್ಳುತ್ತೊ ಗೊತ್ತಿಲ್ಲ, ಆದರೆ ಮೇಲ್ಮನವಿ ಸಲ್ಲಿಕೆಗೂ ಕೋರ್ಟ್ ಅವಕಾಶ ನೀಡಿದೆ. 2008 ರಿಂದಲೂ ನನ್ನನ್ನು ರಾಜಕೀಯವಾಗಿ ಮುಗಿಸುವ ಷಡ್ಯಂತ್ರ ನಡೀತಿದೆ. ಆ ಕೆಲಸಕ್ಕೆ ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷದವರು ಒಂದಾಗಿದ್ದಾರೆ ಎಂದಿದ್ದಾರೆ.
![](https://pratidhvani.com/wp-content/uploads/2024/01/kothur-manjunathstandard-98116871-jpg.webp)
ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಕೊತ್ತೂರು ಮಂಜುನಾಥ್ ಪರಿಶಿಷ್ಟ ಜಾತಿಗೆ ಸೇರಿದ ಜಾತಿ ಪ್ರಮಾಣ ಪತ್ರ ಸಲ್ಲಿಕೆ ಮಾಡಿದ್ದಾರೆ. ಆದರೆ ಪರಿಶಿಷ್ಟ ಜಾತಿಯವರಿಗೆ ಸೇರಬೇಕಾದ ಹಕ್ಕನ್ನು ಕಸಿದುಕೊಂಡಿದ್ದಾರೆ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಪೀಠ ಅಭಿಪ್ರಾಯಪಟ್ಟಿತ್ತು. ಇದೀಗ ಸೂಕ್ತ ಕ್ರಮ ತೆಗೆದುಕೊಳ್ಳುವ ಅನಿವಾರ್ಯತೆ ಸರ್ಕಾರದ ಮೇಲಿದೆ. ಜೊತೆಗೆ ದ್ವಿಸದಸ್ಯ ಪೀಠಕ್ಕೂ ಮೇಲ್ಮನವಿ ಹೋಗುವುದಕ್ಕೆ ಅವಕಾಶ ನೀಡಿದ್ದು, ಶಾಸಕ ಸ್ಥಾನದಿಂದ ಅನರ್ಹ ಆಗುತ್ತಾ ಅನ್ನೋ ಆತಂಕ ಮನೆ ಮಾಡಿದೆ.