ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನವಜೋತ್ ಸಿಂಗ್ ಸಿಧು ತಮ್ಮ ರಾಜೀನಾಮೆಯನ್ನು ಹಿಂಪಡೆಯಲು ನಿರ್ಧರಿಸಿದ್ದಾರೆ. ಶುಕ್ರವಾರ ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಿದ ಬಳಿಕ ಸಿಧು ತಾವು ನೀಡಿರುವ ರಾಜೀನಾಮೆಯನ್ನು ಹಿಂಪಡೆದು ಪಂಜಾಬ್ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಮುಂದುವರೆಯಲು ನಿರ್ಧರಿಸಿದ್ದಾರೆ. ಪಕ್ಷದಲ್ಲಿ ಏನೇ ಸಮಸ್ಯೆ ಇದ್ದರು ಅದನ್ನು ಮುಂಬರುವ ದಿನಗಳಲ್ಲಿ ಬಗೆಹರಿಸುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಇತ್ತೀಚಿಗೆ ಪಂಜಾಬ್ ಕಾಂಗ್ರೆಸ್ನಲ್ಲಿ ನಡೆದ ರಾಜಕೀಯ ಮೇಲಾಟದಲ್ಲಿ ಅಂದಿನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ರಾಜೀನಾಮೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದ ಸಿಧು ನಂತರ ಕಾಂಗ್ರೆಸ್ ಹೈಕಮಾಂಡ್ ಹಿಂದುಳಿದ ಸಮುದಾಯದ ಚರಣಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಘೋಷಿಸಿತ್ತು.
ಮುಖ್ಯಮಂತ್ರಿ ಚನ್ನಿ ಅಧಿಕಾರ ಸ್ವೀಕರಿಸಿದ ನಂತರ ಸಂಪುಟ ರಚನೆ, ಡಿಜಿಪಿ ಮತ್ತು ಅಡ್ವೋಕೇಟ್ ಜನರಲ್ ನೇಮಕದಲ್ಲಿ ತಮ್ಮನ್ನು ಪರಿಗಣನೆಗೆ ತೆಗೆದುಕೊಳ್ಳಲಿಲ್ಲ ಎಂದು ಮುನಿಸಿಕೊಂಡಿದ ಸಿಧು ನಂತರ ಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿಢೀರ್ ಎಂದು (ಸೆಪ್ಟೆಂಬರ್ 28ರಂದು) ಟ್ವಿಟರ್ನಲ್ಲಿ ರಾಜೀನಾಮೆ ಪತ್ರವನ್ನು ಪೋಸ್ಟ್ ಮಾಡುವ ಮೂಲಕ ರಾಜೀನಾಮೆಯನ್ನು ಘೋಷಿಸಿದ್ದರು. ಆದರೆ, ಕಾಂಗ್ರೆಸ್ ಹೈಕಮಾಂಡ್ ಸಿಧು ರಾಜೀನಾಮೆಯನ್ನು ಅಂಗೀಕರಿಸಿರಲಿಲ್ಲ.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ರೊಂದಗೆ ಒಂದು ಘಂಟೆಗು ಅಧಿಕ ಕಾಲ ಚರ್ಚಿಸಿದ ಅವರು ರಾಜೀನಾಮೆ ಹಿಂಪಡೆಯಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
ಈ ವೇಳೆ ಪ್ರತಿಕ್ರಿಯಿಸಿದ ಹರೀಶ್ ರಾವತ್ ಸಿಧು ಪಂಜಾಬ್ ರಾಜ್ಯ ಘಟಕದ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ ಮತ್ತು ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಹೇಳಿದ್ದಾರೆ. ನಂತರ ಮಾತನಾಡಿದ ಸಿಧು ʻನಾನು ನನ್ನ ಕಾಳಜಿಯನ್ನು ರಾಹುಲ್ ಗಾಂಧಿಯವರ ಬಳಿ ಹೇಳಿಕೊಂಡಿದ್ದೇನೆ. ಅವುಗಳನ್ನು ರಾಹುಲ್ ಬಗೆಹರಿಸಿದ್ದಾರೆʼ ಎಂದು ರಾಹುಲ್ ಗಾಂಧಿ ಭೇಟಿಯ ನಂತರ ಪ್ರತಿಕ್ರಿಯಿಸಿದ್ದಾರೆ.
ವೇಣುಗೋಪಲ್ ಮತ್ತು ರಾವತ್ ಬೇಟಿಯ ಸಮಯದಲ್ಲಿ ಸಿಧು 18 ಅಂಶಗಳನ್ನು ಒಳಗೊಂಡ ಕಾರ್ಯಸೂಚಿಯ ಬಗ್ಗೆ ತಿಳಿಸಿದ್ದಾರೆ. ಯಾವೆಲ್ಲ ಕ್ರಮಗಳು ಬಾಕಿ ಉಳಿದಿವೆಯೋ ಅದನ್ನು ಆದಷ್ಟು ಬೇಗ ಬಗೆಹರಿಸಲಾಗುವುದು ಎಂದು ಹೈಕಮಾಂಡ್ ಭರವಸೆ ನೀಡಿದೆ.
ಇವುಗಳಲ್ಲಿ ಸರ್ಕಾರದ ಸಮಸ್ಯೆಗಳು ಮತ್ತು ಡ್ರಗ್ಸ್ ಮಾಫಿಯಾದಲ್ಲಿ ತೊಡಗಿರುವವರ ಮೇಲೆ ಕ್ರಮ ಜರುಗಿಸದ ಬಗ್ಗೆ ಸಿಧು ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ