ನವದೆಹಲಿ:
ದೇಶವನ್ನೇ ಬೆಚ್ಚಿಬೀಳಿಸಿದ್ದ ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ತನಿಖೆ ಚುರುಕುಗೊಂಡಿದ್ದು, ಕೇಂದ್ರ ತನಿಖಾ ದಳ (CBI) ಮತ್ತಷ್ಟು ಆರೋಪಿಗಳನ್ನು ಬಂಧಿಸಿದೆ. ಮಹಾರಾಷ್ಟ್ರದಲ್ಲಿ ಇಬ್ಬರನ್ನು ಬಂಧಿಸಿರುವ ಸಿಬಿಐ, ಕಳೆದ 24 ಗಂಟೆಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿ 14 ಕಡೆ ದಾಳಿ ನಡೆಸಿದೆ. ಇದರಿಂದ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಜೈಪುರ, ಗುರುಗ್ರಾಮ್ ಮತ್ತು ನಾಸಿಕ್ ಭಾಗಗಳಿಂದ ಐವರು ಆರೋಪಿಗಳನ್ನು ಬಂಧಿಸಲಾಗಿತ್ತು.
ಇದೀಗ ಅಹಿಲ್ಯಾನಗರದ ಡಾ. ಧನಂಜಯ್ ಲೋಕಂಡೆ ಹಾಗೂ ಪುಣೆಯ ಮನೀಷಾ ವಾಘಮಾರೆ ಎಂಬವರನ್ನು ಸಿಬಿಐ ವಶಕ್ಕೆ ಪಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಳಿಸಿರುವ ಸಿಬಿಐ, ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದ ಡಿಜಿಟಲ್ ಸಾಕ್ಷ್ಯಗಳು, ಮೊಬೈಲ್ಗಳು, ವಾಟ್ಸಾಪ್ ಚಾಟ್ಗಳು ಹಾಗೂ ಹಣಕಾಸು ವ್ಯವಹಾರಗಳ ಮಾಹಿತಿಯನ್ನು ಪರಿಶೀಲಿಸುತ್ತಿದೆ.

ಪರೀಕ್ಷೆಗೆ ಮುನ್ನ “ಗಸ್ ಪೇಪರ್” ಹೆಸರಿನಲ್ಲಿ ಪ್ರಶ್ನೆಪತ್ರಿಕೆಗಳನ್ನು ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲಾಗಿತ್ತು ಎಂಬ ಶಂಕೆ ವ್ಯಕ್ತವಾಗಿದೆ. ಕೆಲವು ವರದಿಗಳ ಪ್ರಕಾರ, 10 ಲಕ್ಷದಿಂದ 25 ಲಕ್ಷ ರೂಪಾಯಿವರೆಗೆ ಹಣ ಪಡೆದು ಪ್ರಶ್ನೆಪತ್ರಿಕೆಗಳನ್ನು ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ರಾಜಸ್ಥಾನದ ಸೀಕರ್ ಪ್ರದೇಶದ ಕೋಚಿಂಗ್ ಜಾಲ ಹಾಗೂ “ಪೇಪರ್ ಸಾಲ್ವರ್ ಗ್ಯಾಂಗ್” ಈ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪ್ರಶ್ನೆಪತ್ರಿಕೆಯ ಹಾರ್ಡ್ ಕಾಪಿಯನ್ನು ಕೈಬರಹದಲ್ಲಿ ಬರೆದು ವಿವಿಧ ರಾಜ್ಯಗಳಿಗೆ ಕಳುಹಿಸಲಾಗಿತ್ತು ಎಂಬ ಮಾಹಿತಿ ಕೂಡ ಲಭ್ಯವಾಗಿದೆ.
ಈ ಬೆಳವಣಿಗೆಗಳ ನಡುವೆ, ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆ ಮೇ 3ರಂದು ನಡೆದಿದ್ದ NEET-UG 2026 ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ರದ್ದುಪಡಿಸಿದೆ. ಮರು ಪರೀಕ್ಷೆ ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಇಲಾಖೆ ಈಗಾಗಲೇ ಘೋಷಿಸಿದೆ. ಪ್ರಕರಣ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಪ್ರತಿಪಕ್ಷಗಳು ಕೇಂದ್ರ ಸರ್ಕಾರ ಹಾಗೂ ಎನ್ಟಿಎ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿವೆ.






