ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಆರೋಪಿಗಳ ವಿರುದ್ಧ ನಡೆಯುತ್ತಿರುವ ವಿಚಾರಣೆಗೆ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಪ್ರಾಸಿಕ್ಯೂಷನ್ ಸಾಕ್ಷಿದಾರನೊಬ್ಬ, ತನ್ನ ಸಾಕ್ಷ್ಯವನ್ನು ಬದಲಾಯಿಸಲು ಅಪರಿಚಿತರು ಒತ್ತಡ ಹೇರಿದ್ದಾರೆ ಎಂದು ನ್ಯಾಯಾಲಯದಲ್ಲೇ ಹೇಳಿಕೆ ನೀಡಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ ಕಠಿಣ ಎಚ್ಚರಿಕೆ ನೀಡಿದೆ.ನಗರದ 58ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಮಂಗಳವಾರ ಪ್ರಕರಣದ ವಿಚಾರಣೆ ನಡೆಯಿತು. ಈ ವೇಳೆ 49ನೇ ಪ್ರಾಸಿಕ್ಯೂಷನ್ ಸಾಕ್ಷಿಯಾಗಿರುವ ಚಿತ್ರದುರ್ಗದ ದುರ್ಗಾ ಬಾರ್ ಆ್ಯಂಡ್ ರೆಸ್ಟೋರೆಂಟ್ನ ಕ್ಯಾಷಿಯರ್ ಹಾಗೂ ತುಮಕೂರಿನ ರಂಗಾಪುರ ನಿವಾಸಿ ಸಂದೀಪ್ ವಿಚಾರಣೆಗೆ ಹಾಜರಾದರು. ರೇಣುಕಾಸ್ವಾಮಿ ಹಾಗೂ ಆರೋಪಿಗಳು ಬಾರ್ಗೆ ಬಂದಿದ್ದ ವೇಳೆ ಅಲ್ಲಿ ಇದ್ದ ಕಾರಣ, ಸಂದೀಪ್ ಈ ಪ್ರಕರಣದ ಪ್ರಮುಖ ಸಾಕ್ಷಿದಾರರಾಗಿದ್ದಾರೆ.

ವಿಶೇಷ ಸರ್ಕಾರಿ ಅಭಿಯೋಜಕರ ಮುಖ್ಯ ಪರೀಕ್ಷೆ ಆರಂಭವಾಗುವ ಮುನ್ನವೇ, ಸಂದೀಪ್ ನ್ಯಾಯಾಲಯದ ಅನುಮತಿ ಪಡೆದು ಮಹತ್ವದ ವಿಷಯವೊಂದನ್ನು ತಿಳಿಸುವುದಾಗಿ ಹೇಳಿದರು. ಕೆಲ ಅಪರಿಚಿತರು ತನ್ನನ್ನು ಸಂಪರ್ಕಿಸಿ ಪ್ರಕರಣಕ್ಕೆ ಸಂಬಂಧಿಸಿದ ಹೇಳಿಕೆಯನ್ನು ಬದಲಾಯಿಸಲು ಪ್ರಯತ್ನಿಸಿದ್ದಾರೆ ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದರು.ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶೆ ಸುಜಾತಾ ಎಂ. ಸಾಂಬ್ರಾಣಿ, ಸಾಕ್ಷ್ಯವನ್ನು ತಿರುಚಲು ಅಥವಾ ನಾಶಪಡಿಸಲು ಯತ್ನಿಸುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಯಾವುದೇ ವ್ಯಕ್ತಿ ಸಾಕ್ಷಿದಾರರ ಮೇಲೆ ಪ್ರಭಾವ ಬೀರುವ ಪ್ರಯತ್ನ ನಡೆಸಿದರೆ ನ್ಯಾಯಾಲಯ ಅದನ್ನು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಂದೀಪ್ ಅವರು ನೀಡಿದ ಮೌಖಿಕ ಹೇಳಿಕೆಗೆ ಸಂಬಂಧಿಸಿದಂತೆ ಪ್ರತ್ಯೇಕ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ. ಅಲ್ಲದೆ, ವಿಚಾರಣೆ ಪೂರ್ಣಗೊಳ್ಳುವವರೆಗೆ ಅವರಿಗೆ ಅಗತ್ಯ ಪೊಲೀಸ್ ರಕ್ಷಣೆ ಒದಗಿಸುವಂತೆ ತನಿಖಾಧಿಕಾರಿಗೆ ಆದೇಶಿಸಲಾಗಿದೆ.

ವಿಚಾರಣೆ ವೇಳೆ ನ್ಯಾಯಾಧೀಶರು ಸಾಕ್ಷಿದಾರರಿಗೆ ಧೈರ್ಯ ತುಂಬಿ, “ಯಾರಿಗೂ ಹೆದರಬೇಡಿ. ನ್ಯಾಯಾಲಯ ನಿಮ್ಮ ರಕ್ಷಣೆಗೆ ನಿಂತಿದೆ. ನಿಮಗೆ ತಿಳಿದಿರುವ ಸತ್ಯವನ್ನು ನಿರ್ಭಯವಾಗಿ ಹೇಳಿ” ಎಂದು ಸೂಚಿಸಿದರು.ಪ್ರಕರಣದ ಮುಂದಿನ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಲಾಗಿದ್ದು, ಸಾಕ್ಷಿದಾರ ಸಲ್ಲಿಸುವ ಅಫಿಡವಿಟ್ ಆಧರಿಸಿ ಸಾಕ್ಷ್ಯ ತಿರುಚಲು ಯತ್ನಿಸಿದ ಆರೋಪಗಳ ಕುರಿತು ಪ್ರತ್ಯೇಕ ತನಿಖೆ ನಡೆಸುವ ಸಾಧ್ಯತೆ ಇದೆ. ಈ ಬೆಳವಣಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಮತ್ತಷ್ಟು ಮಹತ್ವ ಪಡೆದಿದೆ.






