ಪ್ರಯಾಗ್ ರಾಜ್ :ಏ.18: ಉತ್ತರ ಪ್ರದೇಶದ ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವೂ ಉತ್ತರ ಪ್ರದೇಶ ಪೊಲೀಸರಿಗೆ ನೋಟಿಸ್ ಜಾರಿ ನೀಡಿದೆ. ಯುಪಿ ಪೊಲೀಸ್ ಮಹಾನಿರ್ದೇಶಕರು ಮತ್ತು ಪ್ರಯಾಗ್ರಾಜ್ನ ಪೊಲೀಸ್ ಆಯುಕ್ತರಿಗೆ ನೋಟಿಸ್ ನೀಡಿದ್ದು, ನಾಲ್ಕು ವಾರಗಳಲ್ಲಿ ವರದಿ ನೀಡುವಂತೆ ಆಯೋಗ ತಿಳಿಸಿದೆ.
ಹತ್ಯೆಗೆ ಕಾರಣವಾದ ಎಲ್ಲಾ ಅಂಶಗಳು, ಮೃತರಿಗೆ ಸಂಬಂಧಿಸಿದ ವೈದ್ಯಕೀಯ ಪ್ರಮಾಣ ಪತ್ರ, ವಿಚಾರಣೆಯ ವರದಿ, ಮರಣೋತ್ತರ ಪರೀಕ್ಷೆಯ ವರದಿ, ಮರಣೋತ್ತರ ಪರೀಕ್ಷೆಯ ಸಿಡಿ, ವೀಡಿಯೊ, ಕ್ಯಾಸೆಟ್ ,ಮ್ಯಾಜಿಸ್ಟ್ರಿಯಲ್ ವಿಚಾರಣೆ ವರದಿ ಸೇರಿದಂತೆ ಎಲ್ಲಾ ಮಾಹಿತಿಯನ್ನು ವರದಿಯಲ್ಲಿ ಸಲ್ಲಿಸುವಂತೆ ತಿಳಿಸಲಾಗಿದೆ.

ಶನಿವಾರ ರಾತ್ರಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ನನ್ನು ತಪಾಸಣೆಗಾಗಿ ಪೊಲೀಸರು ಕರೆದೊಯ್ಯುತ್ತಿದ್ದಾಗ ಪತ್ರಕರ್ತರ ನೆಪದಲ್ಲಿ ಏಕಾಏಕಿ ದಾಳಿ ಮಾಡಿದ ಮೂವರು ಯುವಕರು ಕ್ಯಾಮರಾಗಳ ಮುಂದೆ ಶೂಟ್ ಮಾಡಿ, ಹತ್ಯೆಗೈದಿದ್ದರು.

ಉಮೇಶ್ ಪಾಲ್ ಮತ್ತು ಅವರ ಇಬ್ಬರು ಪೊಲೀಸ್ ಭದ್ರತಾ ಸಿಬ್ಬಂದಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಗುಜರಾತ್ ಮತ್ತು ಬರೇಲಿ ಜೈಲುಗಳಿಂದ ಇಬ್ಬರು ಆರೋಪಿಗಳನ್ನ ಪೊಲೀಸರ ಭದ್ರತೆಯಲ್ಲಿ ಪ್ರಯಾಗ್ರಾಜ್ಗೆ ಕರೆತರಲಾಗಿತ್ತು. ಆದ್ರೆ ಪೊಲೀಸರ ಸಮ್ಮುಖದಲ್ಲೆ ಹತ್ಯೆ ಮಾಡಿರುವ ಭಯಾನಕ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದವು.