ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಹಲವೆಡೆ ಸೋಮವಾರ ರಾಷ್ಟ್ರೀಯ ತನಿಖಾ ಸಂಸ್ಥೆಯ(ಎನ್ ಐ ಎ) ತಂಡ ದಾಳಿ ನಡೆಸಿದೆ.
ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪಿಗಳಿಗೆ ನೆರವಾದವರ ಪತ್ತೆ ಸಲುವಾಗಿ ದಾಳಿ ನಡೆಸಿದೆ ಎನ್ನಲಾಗಿದೆ.
ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ನಂದಾವರದಲ್ಲಿ ನಾಲ್ವರು ಯುವಕರನ್ನು ವಶಕ್ಕೆ ಪಡೆದ ಎನ್ಐಎ ಅಧಿಕಾರಿಗಳ ತಂಡ ಅವರನ್ನು ವಿಚಾರಣೆಗೆ ಒಳಪಡಿಸುತ್ತಿದೆ. ಆ ಯುವಕರ ಖಾತೆಯಿಂದ ಸಂಶಯಾಸ್ಪದ ರೀತಿಯಲ್ಲಿ ಹಣ ವರ್ಗಾವಣೆ ಆಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪಾಣೆಮಂಗಳೂರಿನ ಮತ್ತು ಮೆಲ್ಕಾರ್ ನ ಸೈಬರ್ ಸೆಂಟರ್ ಗಳಿಗೂ ಎನ್’ಐಎ ಅಧಿಕಾರಿಗಳು ಭೇಟಿ ನೀಡಿ ದಾಖಲೆಗಳನ್ನು ಕಲೆ ಹಾಕಿದ್ದಾರೆ ಎಂದು ಗೊತ್ತಾಗಿದೆ.
ನಿರ್ದಿಷ್ಟವಾಗಿ ಯಾವ ಪ್ರಕರಣಕ್ಕೆ ಸಂಬಂಧಿಸಿ ದಾಳಿ ನಡೆಸಲಾಗಿದೆ ಎಂಬುದನ್ನು ಎನ್ಐಎ ಇನ್ನೂ ಬಹಿರಂಗಪಡಿಸಿಲ್ಲ.