ಬೆಂಗಳೂರು: ವಿದ್ಯಾರ್ಥಿಗಳ ಪರೀಕ್ಷೆಗಳು ಪೂರ್ಣಗೊಳ್ಳುವವರೆಗೆ ವಿದ್ಯಾರ್ಥಿ ಬಸ್ ಪಾಸ್ನ ಮಾನ್ಯತಾ ಅವಧಿಯನ್ನು ವಿಸ್ತರಿಸುವಂತೆ ಎನ್ಎಸ್ಯುಐ ಮುಖಂಡ ಖಾಜಾ ಹುಸೇನ್ (ಕಾಜು) ಅವರು ಬಿಎಂಟಿಸಿ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಉಚಿತ ವಿದ್ಯಾರ್ಥಿ ಬಸ್ ಪಾಸ್ ಯೋಜನೆಯನ್ನು ಘೋಷಿಸಿರುವುದು ವಿದ್ಯಾರ್ಥಿ ಸಮುದಾಯಕ್ಕೆ ಅತ್ಯಂತ ಅನುಕೂಲಕರ ಹಾಗೂ ಸ್ವಾಗತಾರ್ಹ ಕ್ರಮವಾಗಿದೆ. ಆದರೆ ಬಿಎಂಟಿಸಿಯಿಂದ ವಿದ್ಯಾರ್ಥಿಗಳಿಗೆ ನೀಡಲಾಗಿರುವ ವಿದ್ಯಾರ್ಥಿ ಬಸ್ ಪಾಸ್ನ ಮಾನ್ಯತಾ ಅವಧಿಯು ದಿನಾಂಕ 30-06-2026ರಂದು ಮುಕ್ತಾಯಗೊಂಡಿದೆ. ಆದರೆ ವಿವಿಧ ವಿಶ್ವವಿದ್ಯಾಲಯಗಳು ಹಾಗೂ ಪದವಿ, ಸ್ನಾತಕೋತ್ತರ ಕಾಲೇಜುಗಳ ಪರೀಕ್ಷೆಗಳು ಜುಲೈ ಮತ್ತು ಆಗಸ್ಟ್ ತಿಂಗಳವರೆಗೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಪ್ರತಿದಿನ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಬಿಎಂಟಿಸಿ ಬಸ್ ಸೇವೆಯನ್ನು ಅವಲಂಬಿಸಿ ಸಂಚರಿಸುತ್ತಿದ್ದಾರೆ.

ವಿದ್ಯಾರ್ಥಿ ಬಸ್ ಪಾಸ್ನ ಅವಧಿ ಮುಕ್ತಾಯಗೊಂಡಿರುವ ಕಾರಣ ವಿದ್ಯಾರ್ಥಿಗಳು ಹೆಚ್ಚುವರಿ ಪ್ರಯಾಣ ವೆಚ್ಚವನ್ನು ಭರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಇದು ಹೆಚ್ಚಿನ ತೊಂದರೆಯನ್ನು ಉಂಟುಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅನೇಕ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ನಿಯಮಿತವಾಗಿ ಹಾಜರಾಗುವುದಕ್ಕೂ ಸಮಸ್ಯೆಯಾಗುತ್ತಿದೆ.

ಆದ್ದರಿಂದ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿ ಹಾಗೂ ಪ್ರಸ್ತುತ ನಡೆಯುತ್ತಿರುವ ಪರೀಕ್ಷಾ ಅವಧಿಯನ್ನು ಪರಿಗಣಿಸಿ, 30-06-2026ರಂದು ಮುಕ್ತಾಯಗೊಂಡಿರುವ ವಿದ್ಯಾರ್ಥಿ ಬಸ್ ಪಾಸ್ನ ಮಾನ್ಯತೆಯನ್ನು ಪರೀಕ್ಷೆಗಳು ಪೂರ್ಣಗೊಳ್ಳುವವರೆಗೆ ವಿಸ್ತರಿಸಿ, ವಿದ್ಯಾರ್ಥಿಗಳಿಗೆ ನಿರಾತಂಕವಾಗಿ ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು ಎಂದು ಎನ್ಎಸ್ಯುಐ ಮನವಿ ಮಾಡಿಕೊಂಡಿದೆ.






