ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಅಷ್ಟಾಗಿ ಪರಿಣಾಮ ಬೀರುವುದಿಲ್ಲ ಇನ್ನು ಎರಡರಿಂದ ಮೂರು ವಾರಗಳಲ್ಲಿ ತೀಓವ್ರತೆಯನ್ನ ಕಳೆದುಕೊಳ್ಳಲಿದೆ ಎಂದು ತಜ್ಷರು ಅಭಿಪ್ರಾಯಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಐಸಿಎಂಆರ್ ನಿರ್ದೇಶನದಂತೆ ರೋಗ ಲಕ್ಷಣ ಇರುವವರಿಗೆ ಮಾತ್ರ ಕೋವಿಡ್ ತಪಾಸಣೆಯನ್ನು ಮಾಡಲಾಗುವುದು. ಒಂದು ವೇಳೆ ಸೋಂಕಿತರು ಆಸ್ಪತ್ರೆಗೆ ದಾಖಲಾಗುವ ಸಂಖ್ಯೆ ಹೆಚ್ಚಾದರೆ ಮತ್ತೆ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.
ಮುಂದುವರೆದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ ಆದರೆ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಆಗಿರುವುದು ಸಮಾಧಾನಕರ ಸಂಗತಿ. ತಜ್ಷರು ವೈಜ್ಞಾನಿಕವಾಗಿ ಪರಿಶೀಲಿಸಿ ಅಭಿಪ್ರಾಯ ನೀಡಿದ್ದರಿಂದ ವಾರಾಂತ್ಯ ಕರ್ಪ್ಯೂವನ್ನು ತೆಗೆದುಹಾಕಲಾಗಿದೆ ಎಂದು ಹೇಳಿದ್ದಾರೆ.
ಜನರ ಜೀವವನ್ನು ಕಾಪಾಡುವುದು ಸರ್ಕಾರದ ಆದ್ಯ ಕೆಲಸ ಅದರಂತೆಯೇ ಜನರು ಕೋವಿಡ್ ಮಾರ್ಗಸೂಚಿಗಳನ್ನು ಸಹ ಪಾಲಿಸಬೇಕು. ಜನರು ಅನಗತ್ಯವಾಗಿ ಗುಂಪು ಸೇರುವುದು, ಒಳಾಂಗಣ ಹಾಗೂ ಹೊರಾಂಗಣ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ಮುಂದೂಡುವುದು ಉತ್ತಮ ಎಂದು ಸಚಿವರು ಮನವಿ ಮಾಡಿದ್ದಾರೆ.