ಕಸ್ತೂರಿ ರಂಗನ್ ವರದಿ ಜಾರಿ ವಿಚಾರವಾಗಿ ಮಲೆನಾಡಿನ ಜನರ ಆತಂಕ ಹಾಗೂ ಅಭಿಪ್ರಾಯಗಳನ್ನು ಆಲಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ತೀರ್ಥಹಳ್ಳಿಯಲ್ಲಿ ಶನಿವಾರ ನಡೆದ ಸಾರ್ವಜನಿಕ ಸಂವಾದದಲ್ಲಿ ವರದಿ ಜಾರಿಗೆ ವಿರೋಧ ವ್ಯಕ್ತವಾಯಿತು. ರೈತರು, ತಜ್ಞರು, ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.ಮಲೆನಾಡಿನ ಜನರ ಭೂಮಿ, ವಾಸಸ್ಥಳ ಹಾಗೂ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರಬಹುದೆಂಬ ಆತಂಕವನ್ನು ಹಲವರು ವ್ಯಕ್ತಪಡಿಸಿದರು.
ಈಗಾಗಲೇ ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಗೆ ಸಂಬಂಧಿಸಿದ ಹಲವು ಕಾಯ್ದೆಗಳು ಜಾರಿಯಲ್ಲಿದ್ದು, ಕಸ್ತೂರಿ ರಂಗನ್ ವರದಿ ಜಾರಿಯಾದರೆ ಮಲೆನಾಡಿನ ಜನರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಶಿವಮೊಗ್ಗ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ರಮೇಶ್ ಹೆಗಡೆ ಹೇಳಿದರು.ವರದಿಯಲ್ಲಿ ಆಸ್ತಿ ಹಕ್ಕಿಗೆ ತೊಂದರೆಯಾಗುವುದಿಲ್ಲ ಎಂದು ಹೇಳಲಾಗಿದ್ದರೂ, ಬಗರ್ಹುಕುಂ ಸೇರಿದಂತೆ ವಿವಿಧ ರೀತಿಯಲ್ಲಿ ಭೂಮಿ ಹೊಂದಿರುವವರಿಗೆ ಮುಂದಿನ ದಿನಗಳಲ್ಲಿ ಸಮಸ್ಯೆಯಾಗುವ ಆತಂಕವಿದೆ. ಈ ಕುರಿತು ಸ್ಪಷ್ಟತೆ ಅಗತ್ಯವಿದೆ ಎಂದು ಅವರು ಹೇಳಿದರು.

ಸಚಿವ ಮಧು ಬಂಗಾರಪ್ಪ ಮಾತನಾಡಿ, ಬಗರ್ಹುಕುಂ ಹಾಗೂ ‘ಉಳುವವನೇ ಭೂಮಿಯ ಒಡೆಯ’ ಯೋಜನೆಗಳ ಮೂಲಕ ಜನರಿಗೆ ಭೂಮಿ ಒದಗಿಸಲಾಗಿದೆ. ಇದೀಗ ಅದೇ ಭೂಮಿ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಮಲೆನಾಡಿನ ಜನರು ಅರಣ್ಯವನ್ನು ಉಳಿಸಿಕೊಂಡು ಬಂದಿದ್ದಾರೆ. ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸುವುದರ ಜೊತೆಗೆ, ಈ ಭಾಗದ ರೈತರ ಭೂಮಿಯ ಸಂಪೂರ್ಣ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ಅಗತ್ಯವಿದೆ. ಸರ್ವೇ ನಂಬರ್, ವಾಸದ ಜಾಗ ಸೇರಿದಂತೆ ಪ್ರತಿಯೊಂದು ವಿವರವನ್ನು ದಾಖಲಿಸಬೇಕು ಎಂದು ಸಲಹೆ ನೀಡಿದರು.
ಮಾಜಿ ಶಾಸಕ ಕಿಮ್ಮನೆ ರತ್ನಾಕರ ಮಾತನಾಡಿ, ರಾಜ್ಯದ ಹಿತದೃಷ್ಟಿಯಿಂದ ಕರ್ನಾಟಕದ ಎಲ್ಲ ಸಂಸದರು ಕಸ್ತೂರಿ ರಂಗನ್ ವರದಿ ಕುರಿತು ಒಗ್ಗಟ್ಟಿನ ನಿಲುವು ತಾಳಬೇಕು ಎಂದು ಸಲಹೆ ನೀಡಿದರು.ಕೃಷಿ ತಜ್ಞ ಕಮ್ಮರಡಿ ಪ್ರಕಾಶ್ ಮಾತನಾಡಿ, ಕಸ್ತೂರಿ ರಂಗನ್ ವರದಿ ಕುರಿತು ಮೂರು ದಿನಗಳ ವಿಶೇಷ ಅಧಿವೇಶನ ನಡೆಸುತ್ತಿರುವುದು ಮಹತ್ವದ ಹೆಜ್ಜೆಯಾಗಿದೆ. ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿರುವ ಆರು ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಳಗೊಂಡಂತೆ ಚರ್ಚೆ ನಡೆಸಿ ಒಮ್ಮತದ ಅಭಿಪ್ರಾಯ ರೂಪಿಸಬೇಕು. ಬಡ ರೈತರ ಹಿತ ಕಾಪಾಡಬೇಕು ಎಂದು ಹೇಳಿದರು.

ರೈತ ಮುಖಂಡ ರಾಜೇಂದ್ರ ಕಮ್ಮಳಿಗೆರೆ ಮಾತನಾಡಿ, ವರದಿ ಜಾರಿಯಿಂದ ಪರಿಸರ ಸಂರಕ್ಷಣೆಯ ಉದ್ದೇಶ ಈಡೇರುವುದಿಲ್ಲ ಎಂಬುದು ತಮ್ಮ ಅಭಿಪ್ರಾಯವಾಗಿದೆ. ಮಲೆನಾಡಿನ ಜನರ ಆತಂಕವನ್ನು ಕೇಂದ್ರ ಸರ್ಕಾರದ ಗಮನಕ್ಕೆ ಪರಿಣಾಮಕಾರಿಯಾಗಿ ತಲುಪಿಸಬೇಕು ಎಂದು ಹೇಳಿದರು.ಶಾಸಕ ಆರಗ ಜ್ಞಾನೇಂದ್ರ ಅವರು ಕೂಡ ವರದಿ ಜಾರಿಯಿಂದ ಮಲೆನಾಡಿನ ಜನರಲ್ಲಿ ಆತಂಕ ಉಂಟಾಗಿರುವುದನ್ನು ಸಭೆಯಲ್ಲಿ ಪ್ರಸ್ತಾಪಿಸಿದರು.ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಂಜುನಾಥ್ ಗೌಡ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಲೆನಾಡಿನ ಜನರೊಂದಿಗೆ ನೇರವಾಗಿ ಸಂವಾದ ನಡೆಸಿರುವುದು ಜನರ ಆತಂಕಗಳನ್ನು ಸರ್ಕಾರದ ಗಮನಕ್ಕೆ ತರಲು ಸಹಕಾರಿಯಾಗಿದೆ ಎಂದು ಹೇಳಿದರು.
ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಕುಳಿತು ಚರ್ಚೆ ನಡೆಸುವುದಕ್ಕಿಂತ ಸ್ಥಳೀಯರೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಅಭಿಪ್ರಾಯಗಳನ್ನು ಆಲಿಸುವ ಉದ್ದೇಶದಿಂದ ತೀರ್ಥಹಳ್ಳಿಗೆ ಬಂದಿರುವುದಾಗಿ ತಿಳಿಸಿದ್ದಾರೆ. ರೈತರ ಭೂಮಿ ಹಾಗೂ ಬದುಕಿನ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವುದು ಮುಖ್ಯವಾಗಿದೆ ಎಂದು ಹೇಳಿದ್ದಾರೆ. ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಮಲೆನಾಡಿನ ಭಾಗದಲ್ಲಿ ಈಗಾಗಲೇ ಕಾಡುಕೋಣ, ಆನೆ, ಕೋತಿ, ಕೊಳೆರೋಗ, ಎಲೆಚುಕ್ಕೆ ರೋಗ ಸೇರಿದಂತೆ ಹಲವು ಸಮಸ್ಯೆಗಳಿವೆ. ಇದರ ಜೊತೆಗೆ ಕಸ್ತೂರಿ ರಂಗನ್ ವರದಿ ಕುರಿತು ಆತಂಕವೂ ಎದುರಾಗಿದೆ. ತಮ್ಮ ಭಾಗದ ಹಲವು ಗ್ರಾಮಗಳು ವರದಿ ವ್ಯಾಪ್ತಿಗೆ ಒಳಪಡುತ್ತಿರುವ ಹಿನ್ನೆಲೆಯಲ್ಲಿ ಜನರ ಆತಂಕವನ್ನು ಒಟ್ಟಾಗಿ ದೂರ ಮಾಡಬೇಕಿದೆ ಎಂದು ಹೇಳಿದರು.
ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ವ್ಯಾಪ್ತಿಗೆ ಬರುವ ಪ್ರದೇಶಗಳ ಕುರಿತು ಕೇರಳ ಮಾದರಿಯಲ್ಲಿ ಭೌತಿಕ ಸಮೀಕ್ಷೆ ನಡೆಸಬೇಕು. ರೈತರ ವಾಸಸ್ಥಳ, ಕೃಷಿ ಭೂಮಿ, ಸರ್ವೇ ನಂಬರ್ ಹಾಗೂ ಸಂಬಂಧಿತ ದಾಖಲೆಗಳ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿ ಸರ್ಕಾರದ ಮೂಲಕ ಕೇಂದ್ರಕ್ಕೆ ಸಲ್ಲಿಸಬೇಕು ಎಂಬ ಸಲಹೆಗಳೂ ವ್ಯಕ್ತವಾದವು. ಈ ರೀತಿಯ ಭೌತಿಕ ಸಮೀಕ್ಷೆ ನಡೆಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ತಿಳಿಸಿದ್ದಾರೆ.





