ನವದೆಹಲಿ: ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(D.K Shivakumar) ಹೇಳಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಾವು ಮತಕಳ್ಳತನ ವಿರುದ್ಧದ ಹೋರಾಟ ಆರಂಭಿಸಿದ್ದೆವು. ಈಗ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಈ ದೇಶದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಬೇಕು ಎಂಬ ಸಂದೇಶ ನೀಡಲಾಗುತ್ತಿದೆ.

ದೇಶದ ಚುನಾವಣೆಗಳು ಈಗ ನ್ಯಾಯಸಮ್ಮತವಾಗಿಲ್ಲ. ಮತಕಳ್ಳತನ ಮಾಡಲಾಗುತ್ತಿದೆ. ಇದಕ್ಕೆ ಸಾವಿರಾರು ಉದಾಹರಣೆಗಳಿವೆ. ರಾಹುಲ್ ಗಾಂಧಿ ಅವರು ಈ ವಿಚಾರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದಾರೆ. ಇನ್ನು ಹಲವು ಬಾರಿ ಮಾಧ್ಯಮಗೋಷ್ಠಿ ಮೂಲಕ ದಾಖಲೆಗಳನ್ನು ಬಹಿರಂಗಗೊಳಿಸಿದ್ದಾರೆ. ಇಷ್ಟಾದರೂ ಚುನಾವಣಾ ಆಯೋಗದಿಂದ ಸರಿಯಾದ ಉತ್ತರ ಸಿಗುತ್ತಿಲ್ಲ. ಹೀಗಾಗಿ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಬಗ್ಗೆ ಜನರಿಗೆ ಅರಿವು ಮೂಡಿಸಲು ನಾವು ಬೀದಿಗಿಳಿದು ಹೋರಾಟ ಮಾಡುತ್ತಿದ್ದೇವೆ ಎಂದರು.

ಕರ್ನಾಟಕದ 4 ಸಾವಿರ ಕಾರ್ಯಕರ್ತರು ಭಾಗಿ
ದೆಹಲಿಯ ಪ್ರತಿಭಟನೆಗೆ ರಾಜ್ಯದಿಂದ ಆಗಮಿಸುವ 1500 ಕಾರ್ಯಕರ್ತರಿಗೆ ನಾವು ವಾಸ್ತವ್ಯದ ವ್ಯವಸ್ಥೆ ಕಲ್ಪಿಸಿದ್ದೇವೆ. ಸುಮಾರು 2 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ನಾಯಕರು ತಮ್ಮ ವ್ಯವಸ್ಥೆ ತಾವೇ ಮಾಡಿಕೊಂಡಿದ್ದಾರೆ. ಕೆಲವರು ವಿಮಾನ, ಮತ್ತೆ ಕೆಲವರು ರೈಲಲ್ಲಿ ಆಗಮಿಸಿದ್ದಾರೆ.

ಸುಮಾರು 3500 ರಿಂದ 4000 ಜನ ಪ್ರತಿಭಟನೆಗೆ ಬಂದಿದ್ದಾರೆ. ಮತಕಳ್ಳತನ ವಿರುದ್ಧ ರಾಜ್ಯದಲ್ಲಿ ನಡೆದ ಸಹಿಸಂಗ್ರಹ ಅಭಿಯಾನದಲ್ಲಿ 1.42 ಕೋಟಿ ಸಹಿ ಸಂಗ್ರಹ ಮಾಡಲಾಗಿದೆ. ಇಲ್ಲಿ ಸೇರಿರುವ ನಾಯಕರು, ಕಾರ್ಯಕರ್ತರೇ ಈ ಹೋರಾಟದ ಉತ್ಸಾಹಕ್ಕೆ ಸಾಕ್ಷಿ. ಇಲ್ಲಿರುವ ಪ್ರತಿಯೊಬ್ಬರೂ ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಉಳಿಸಿಕೊಳ್ಳಬೇಕು, ಮತದಾನದ ಹಕ್ಕು ಕಾಪಾಡಬೇಕು ಎಂದು ಬಂದಿದ್ದಾರೆ ಎಂದು ತಿಳಿಸಿದರು.

ದೆಹಲಿಗೆ ಬರುವ ವಾಹನಗಳನ್ನು ಬಿಜೆಪಿ ಸರ್ಕಾರ ತಡೆ ಹಿಡಿದಿದೆಯಂತೆ. ವಾಹನ ದೆಹಲಿಯೊಳಗೆ ಪ್ರವೇಶ ಮಾಡಲು ಅವಕಾಶ ನೀಡುತ್ತಿಲ್ಲ. ಯಾಕೆ ಈ ರೀತಿ ಮಾಡುತ್ತಿದ್ದಾರೆ ತಿಳಿಯುತ್ತಿಲ್ಲ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಯಾಕೆ ಗಾಬರಿಯಾಗುತ್ತಿದೆ ಗೊತ್ತಿಲ್ಲ. ನಮ್ಮ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗುಡುಗಿದರು.

ಸೋಲು, ಗೆಲುವಿಗೆ ಕಾಂಗ್ರೆಸಿಗರು ಯೋಚಿಸುವುದಿಲ್ಲ
ಸೋಲಿನ ಹತಾಶೆಯಿಂದ ಕಾಂಗ್ರೆಸ್ ಈ ರೀತಿ ಸಮಾವೇಶ ಮಾಡುತ್ತಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವರು ತಮ್ಮ ಖುಷಿಗೆ ಏನು ಬೇಕಾದರೂ ಮಾತನಾಡುತ್ತಾರೆ. ನಾವು ಕಾಂಗ್ರೆಸಿಗರು ಸೋಲು, ಗೆಲುವಿನ ಬಗ್ಗೆ ಯೋಚನೆ ಮಾಡುವುದಿಲ್ಲ. ಈ ದೇಶಕ್ಕೆ ಸ್ವಾತಂತ್ರ್ಯ ಹಾಗೂ ಸಂವಿಧಾನ ತಂದು ಕೊಟ್ಟಾಗ ನಮ್ಮ ಹಿರಿಯರು ಸಾಕಷ್ಟು ಪ್ರಾಣತ್ಯಾಗ ಮಾಡಿದ್ದಾರೆ. ಈ ದೇಶದ ಆರ್ಥಿಕ ತಜ್ಞನಿಗೆ ಸೋನಿಯಾ ಗಾಂಧಿ ಅವರು ಅಧಿಕಾರ ತ್ಯಾಗ ಮಾಡಿದರು. ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರು ದೇಶಕ್ಕಾಗಿ ಪ್ರಾಣವನ್ನೇ ಅರ್ಪಿಸಿದರು. ಜವಾಹರ್ ಲಾಲ್ ನೆಹರೂ, ಗಾಂಧಿಜಿ ಸೇರಿದಂತೆ ಅನೇಕ ಮಹನೀಯರು ಜೈಲುವಾಸ ಅನುಭವಿಸಿದರು. ನೂರು ವರ್ಷಗಳ ಹಿಂದೆ ಮಹಾತ್ಮಾ ಗಾಂಧಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿದರು. ಇಂದು ಪಕ್ಷ ಕಷ್ಟಕಾಲದಲ್ಲಿರುವಾಗ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಅಧ್ಯಕ್ಷರಾಗಿದ್ದಾರೆ ಎಂದರು.






