ನಟ ಪ್ರಕಾಶ್ ರಾಜ್ ಅವರ ಹೇಳಿಕೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ಹಾಗೂ ಸಾಮಾಜಿಕ ವಿಚಾರಗಳಲ್ಲಿ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಅವರು, ಈ ಬಾರಿ ರಾಮಾಯಣ ಕುರಿತು ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.ಕೇರಳ ಸಾಹಿತ್ಯ ಉತ್ಸವದಲ್ಲಿ ಮಾತನಾಡಿದ ವೇಳೆ, ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ವ್ಯಂಗ್ಯಾತ್ಮಕವಾಗಿ ವಿವರಿಸಲು ರಾಮಾಯಣದ ಉದಾಹರಣೆಯನ್ನು ಬಳಸಿದ ಅವರ ವಿಡಿಯೋ ವೈರಲ್ ಆಗಿದೆ. ಆದರೆ ಈ ಹೇಳಿಕೆಯನ್ನು ಹಲವರು ತಪ್ಪಾಗಿ ಅರ್ಥೈಸಿಕೊಂಡು ತೀವ್ರ ಟೀಕೆ ವ್ಯಕ್ತಪಡಿಸುತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಕೆಲವು ಬಳಕೆದಾರರು ಪ್ರಕಾಶ್ ರಾಜ್ ಹೇಳಿಕೆಯನ್ನು ವಿರೋಧಿಸಿ ಕಿಡಿಕಾರಿದ್ದಾರೆ. “ರಾಮನು ಉತ್ತರ ಭಾರತದವನು, ರಾವಣನು ದಕ್ಷಿಣ ಭಾರತದ ಆದಿವಾಸಿ” ಎಂಬ ರೀತಿಯ ಹೇಳಿಕೆಗಳನ್ನು ಉಲ್ಲೇಖಿಸಿ, ಇತಿಹಾಸವನ್ನು ತಪ್ಪಾಗಿ ನಿರೂಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕೆಲವರು ಈ ಹೇಳಿಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.ಇನ್ನೂ ಕೆಲ ನೆಟ್ಟಿಗರು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಲಾಗಿದೆ ಎಂದು ಅಭಿಪ್ರಾಯಪಟ್ಟಿದ್ದು, ಈ ವಿಷಯವನ್ನು ಟ್ವಿಟರ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ.

ಕೆಲವರು ಪ್ರೇಕ್ಷಕರ ಪ್ರತಿಕ್ರಿಯೆಯನ್ನೂ ಪ್ರಶ್ನಿಸಿ, ಕಾರ್ಯಕ್ರಮದಲ್ಲಿ ಯಾರೂ ವಿರೋಧ ವ್ಯಕ್ತಪಡಿಸದಿರುವುದನ್ನು ಟೀಕಿಸಿದ್ದಾರೆ.ಈ ನಡುವೆ, ವಿಷಯಕ್ಕೆ ಸಂಬಂಧಿಸಿದಂತೆ ಪ್ರಕಾಶ್ ರಾಜ್ ಅವರಿಂದ ಇನ್ನೂ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ಬಂದಿಲ್ಲ. ಅವರ ಹೇಳಿಕೆ ಮತ್ತು ಅದರ ವಿರುದ್ಧದ ಪ್ರತಿಕ್ರಿಯೆಗಳು ಮುಂದಿನ ದಿನಗಳಲ್ಲಿ ಇನ್ನಷ್ಟು ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.






