ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಜೈಲಿಗೆ ಭೇಟಿ ನೀಡಿ ಮಹಿಳಾ ಬ್ಯಾರಕ್ಗಳು, ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳು, ಆಹಾರದ ಗುಣಮಟ್ಟ ಹಾಗೂ ಮಕ್ಕಳ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ವೇಳೆ ಮಹಿಳಾ ಕೈದಿಗಳ ವಿವಿಧ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು.ಜೈಲಿನಲ್ಲಿ 200ಕ್ಕೂ ಅಧಿಕ ಮಹಿಳಾ ಕೈದಿಗಳಿದ್ದು, ಭೇಟಿ ನೀಡಿದ ದಿನ ಆರು ಮಂದಿ ಮಹಿಳಾ ಕೈದಿಗಳು ಬಿಡುಗಡೆಯಾಗಿದ್ದಾರೆ ಎಂದು ನಾಗಲಕ್ಷ್ಮೀ ಚೌಧರಿ ತಿಳಿಸಿದರು. ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳು, ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ಹಾಗೂ ಊಟದ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಜೈಲೂಟದ ಗುಣಮಟ್ಟ ತಿಳಿಯಲು ತಾವೇ ಊಟ ಮಾಡಿ ಪರಿಶೀಲಿಸಿರುವುದಾಗಿ ಹೇಳಿದರು.

ಮಹಿಳಾ ಕೈದಿಗಳಿಗೆ ಕಾನೂನು ನೆರವು ಹಾಗೂ ಪಬ್ಲಿಕ್ ಪ್ರಾಸಿಕ್ಯೂಟರ್ ವ್ಯವಸ್ಥೆ ಸೇರಿದಂತೆ ಹಲವು ವಿಚಾರಗಳ ಕುರಿತು ಪರಿಶೀಲನೆ ನಡೆಸಲಾಗಿದೆ. ಕೆಲವರಿಗೆ ಜಾಮೀನು ಮಂಜೂರಾಗಿದ್ದರೂ ಶ್ಯೂರಿಟಿ ನೀಡಲು ಸಾಧ್ಯವಾಗದೆ ಜೈಲಿನಲ್ಲೇ ಉಳಿಯುವ ಪರಿಸ್ಥಿತಿ ಇದೆ. ಹಣದ ಕೊರತೆಯಿಂದಲೂ ಕೆಲವರು ಬಿಡುಗಡೆಯಾಗಲು ಸಾಧ್ಯವಾಗುತ್ತಿಲ್ಲ. ಈ ವಿಚಾರವನ್ನು ಗೃಹ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.ಜೈಲಿನಲ್ಲಿ ಸುಮಾರು 8ರಿಂದ 10 ಮಂದಿ ಪುಟಾಣಿ ಮಕ್ಕಳಿದ್ದಾರೆ. ಮಕ್ಕಳಿಗಾಗಿ ಜೈಲಿನೊಳಗೆ ಶಾಲೆ ಇದ್ದು, ಮೂವರು ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಮಕ್ಕಳು ಕನ್ನಡ ಹಾಗೂ ಇಂಗ್ಲಿಷ್ನಲ್ಲಿ ಮಾತನಾಡುತ್ತಿದ್ದಾರೆ. ದಕ್ಷಿಣ ಆಫ್ರಿಕಾ ಮತ್ತು ನೈಜೀರಿಯಾದ ಮಕ್ಕಳು ಕೂಡ ಕನ್ನಡ ಹಾಡುಗಳನ್ನು ಹಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ನಾಗಲಕ್ಷ್ಮೀ ಚೌಧರಿ ಹೇಳಿದರು.

ಆರು ವರ್ಷದೊಳಗಿನ ಮಕ್ಕಳಿಗೆ ತಾಯಿಯೊಂದಿಗೆ ಜೈಲಿನಲ್ಲಿ ಇರಲು ಅವಕಾಶವಿದೆ. ಮಹಿಳಾ ಕೈದಿಗಳು ಜೈಲಿನೊಳಗೆ ವಿವಿಧ ಕೆಲಸಗಳನ್ನು ಮಾಡುತ್ತಿದ್ದು, ಮಹಿಳೆಯರು ಹಾಗೂ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ಜೈಲು ಆಡಳಿತದಿಂದ ಒದಗಿಸಲಾಗುತ್ತಿದೆ ಎಂದರು.ಮಹಿಳಾ ಕೈದಿಗಳು ಸೊಳ್ಳೆಗಳ ಸಮಸ್ಯೆ ಕುರಿತು ದೂರು ನೀಡಿದ್ದಾರೆ. ರಾತ್ರಿ ವೇಳೆ ಸೊಳ್ಳೆಗಳ ಕಾಟದಿಂದ ತೊಂದರೆಯಾಗುತ್ತಿದೆ ಎಂದು ತಿಳಿಸಿದ್ದಾರೆ. ಈ ಸಮಸ್ಯೆಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದು ನಾಗಲಕ್ಷ್ಮೀ ಚೌಧರಿ ಹೇಳಿದರು.

ಜೈಲಿನಲ್ಲಿರುವ ಕೆಲ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಪವಿತ್ರಾಗೌಡ ಸೇರಿದಂತೆ ಜೈಲಿನಲ್ಲಿರುವ ಎಲ್ಲ ಮಹಿಳಾ ಕೈದಿಗಳೊಂದಿಗೆ ಮಾತನಾಡಿರುವುದಾಗಿ ತಿಳಿಸಿದರು.“ಪವಿತ್ರಾಗೌಡ ಮಾತ್ರವಲ್ಲ, ಜೈಲಿನಲ್ಲಿರುವ ಎಲ್ಲ ಮಹಿಳಾ ಕೈದಿಗಳೂ ನಮಗೆ ಒಂದೇ. ಯಾರನ್ನೂ ಪ್ರತ್ಯೇಕವಾಗಿ ನೋಡಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು.ಈಗಾಗಲೇ ತಪ್ಪು ಮಾಡಿ ಜೈಲಿಗೆ ಬಂದಿರುವವರ ಬಗ್ಗೆ ಮತ್ತೆ ಮತ್ತೆ ಮಾತನಾಡುವುದರಿಂದ ಅವರ ಮಾನಸಿಕ ಸ್ಥಿತಿಯ ಮೇಲೂ ಪರಿಣಾಮ ಬೀರಬಹುದು. ಪವಿತ್ರಾಗೌಡ ಅವರು ಮಾನಸಿಕವಾಗಿ ಕುಗ್ಗಿರುವ ಸ್ಥಿತಿಯಲ್ಲಿದ್ದಾರೆ. ಹೀಗಾಗಿ ಎಲ್ಲ ಕೈದಿಗಳನ್ನೂ ಸಮಾನವಾಗಿ ಪರಿಗಣಿಸಲಾಗುತ್ತಿದೆ ಎಂದರು.ಜೈಲು ವ್ಯವಸ್ಥೆಯಲ್ಲಿ ಸಣ್ಣಪುಟ್ಟ ಲೋಪಗಳಿರಬಹುದು. ಅವುಗಳನ್ನು ಗುರುತಿಸಿ ಸರಿಪಡಿಸುವ ಉದ್ದೇಶದಿಂದ ನಿರಂತರವಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು.






