ನವದೆಹಲಿ: ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ “ಮದರ್ ಮೇರಿ ಕಮ್ಸ್ ಟು ಮಿ” ಆತ್ಮಕಥೆ ಪುಸ್ತಕದ ಮಾರಾಟ, ಪ್ರಸಾರ ಮತ್ತು ಪ್ರದರ್ಶನ ನಿಷೇಧಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.
ಪುಸ್ತಕದ ಮುಖಪುಟದಲ್ಲಿ ಲೇಖಕಿ ‘ಬೀಡಿ’ ಅಥವಾ ‘ಸಿಗರೇಟ್’ ಸೇದುತ್ತಿರುವ ಚಿತ್ರವನ್ನು ಪ್ರಕಟಿಸಲಾಗಿದ್ದು, ಅದು ಕಾನೂನಿಗೆ ವಿರುದ್ಧವಾಗಿದೆ ಎಂದು ಈ ಹಿಂದೆ ಕೇರಳ ಹೈಕೋರ್ಟ್ ಗೆ ರಾಜಸಿಂಹನ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆದರೆ ಕೇರಳ ಹೈಕೋರ್ಟ್ PIL ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ರಾಜಸಿಂಹನ್ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ನಿ ದ್ವಿಸದಸ್ಯ ಪೀಠ ವಜಾಗೊಳಿಸಿದೆ.
ಅರ್ಜಿ ವಜಾಗೊಳಿಸಿ ಪ್ರತಿಕ್ರಿಯಿಸಿರೋ ನ್ಯಾಯಪೀಠ “ಪ್ರಸಿದ್ಧ ಲೇಖಕಿ ಅರುಂಧತಿ ರಾಯ್ ಅವರು ಅಂತಹ ವಿಷಯಗಳನ್ನು ಪ್ರಚಾರ ಮಾಡಿಲ್ಲ. ಅಲ್ಲದೆ ಪುಸ್ತಕದ ಚಿತ್ರವು ನಗರದ ಯಾವುದೇ ಹೋರ್ಡಿಂಗ್ನಲ್ಲಿ ಇಲ್ಲ. ಪುಸ್ತಕವನ್ನು ತೆಗೆದುಕೊಂಡು ಓದುವವರು ಮಾತ್ರ ಅದನ್ನು ನೋಡುತ್ತಾರೆ. ಹಾಗೆ ಲೇಖಕರು ಮತ್ತು ಪ್ರಕಾಶಕ ಸಂಸ್ಥೆ ಪೆಂಗ್ವಿನ್ ಹಮಿಶ್ ಹ್ಯಾಮಿಲ್ಟನ್, ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ-2003ರ ಕಲಂ 5 ಅನ್ನು ಉಲ್ಲಂಘಿಸಿಲ್ಲ. ಹೀಗಾಗಿ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸೂಕ್ತ ಕಾರಣವಿಲ್ಲ ಎಂದು ತಿಳಿಸಿದೆ.





