ಬೆಂಗಳೂರು: ಸದ್ಯ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿರುವ ಬಿಡದಿ ಬಳಿ ರಾಜ್ಯ ಸರ್ಕಾರ ಕೈಗೆತ್ತಿಕೊಂಡಿರುವ ಟೌನ್ಶಿಪ್ ಯೋಜನೆ ವಿರುದ್ಧ ಕರ್ನಾಟಕ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿದೆ. ಮೈಸೂರಿನ ರಾಜೇಶ್ ಕೆ.ಬಿ. ಅವರು ಅರ್ಜಿ ಸಲ್ಲಿಸಿದ್ದು, ಯೋಜನೆಗಾಗಿ ಹೊರಡಿಸಿರುವ ಭೂಸ್ವಾಧೀನ ಅಧಿಸೂಚನೆಯನ್ನು ರದ್ದುಪಡಿಸುವಂತೆ ನ್ಯಾಯಾಲಯವನ್ನು ಕೋರಿದ್ದಾರೆ ಎಂದು ವರದಿಯಾಗಿದೆ.

ಯೋಜನೆಯ ಮೊದಲ ಹಂತದಲ್ಲಿ ಮೂರು ಗ್ರಾಮಗಳ ಸುಮಾರು 519 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಭೂಮಿ ಫಲವತ್ತಾದ ಕೃಷಿ ಭೂಮಿಯಾಗಿದ್ದು, ರೈತರ ಜೀವನೋಪಾಯಕ್ಕೆ ಹಾನಿಯಾಗಲಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಯೋಜನೆಯಿಂದ ಸಾವಿರಾರು ರೈತ ಕುಟುಂಬಗಳಿಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತವಾಗಿದೆ. ಜೊತೆಗೆ, ದೊಡ್ಡ ಪ್ರಮಾಣದಲ್ಲಿ ಮರಗಳನ್ನು ಕಡಿಯಬೇಕಾಗಬಹುದು ಎಂಬ ಕಾರಣಕ್ಕೆ ಪರಿಸರದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆಕ್ಷೇಪಿಸಿದ್ದಾರೆ.

ಭೂಸ್ವಾಧೀನವನ್ನು ವಿರೋಧಿಸಿ ಸ್ಥಳೀಯ ರೈತರು ಪ್ರತಿಭಟನೆ ನಡೆಸುತ್ತಿದ್ದು, ಅವರಿಗೆ ವಿವಿಧ ವಿರೋಧ ಪಕ್ಷಗಳು ಬೆಂಬಲ ಸೂಚಿಸಿವೆ. ರೈತರ ಅನುಮತಿ ಮತ್ತು ಸಮರ್ಪಕ ಪುನರ್ವಸತಿ ಕಲ್ಪಿಸಿದ ನಂತರವೇ ಯೋಜನೆ ಜಾರಿಗೊಳಿಸಬೇಕು ಎಂದುಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.






