ಉಡುಪಿ: ಪ್ರಧಾನಿ ನರೇಂದ್ರ ಮೋದಿ ಇನ್ನೇನು ಕೆಲವೇ ಕ್ಷಣಗಳಲ್ಲಿ ಕೃಷ್ಣನೂರು ಉಡುಪಿಗೆ ಭೇಟಿ ನೀಡಲಿದ್ದಾರೆ.

ಉಡುಪಿಯ ಐತಿಹಾಸಿಕ ಕ್ಷೇತ್ರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪವನ್ನು ಅನಾವರಣಗೊಳಿಸಲಿದ್ದಾರೆ. ಪ್ರಧಾನಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸಂಪೂರ್ಣ ಉಡುಪಿ ಕೇಸರಿಮಯವಾಗಿದೆ.

ಇನ್ನು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಪ್ರಧಾನಿ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಖುಷಿ ಹಂಚಿಕೊಂಡಿದ್ದಾರೆ. ʼಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆʼ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.









