ಯುವತಿಯ ಮೇಲೆ ಆ್ಯಸಿಡ್ ಎರಚಿದ ನಾಗೇಶ್ ಮೂತ್ರ ವಿಸರ್ಜನೆ ನೆಪದಲ್ಲಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಮತ್ತೆ ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಸ್ವಾಮೀಜಿ ವೇಷದಲ್ಲಿ ತಲೆಮರೆಸಿಕೊಂಡಿದ್ದ ನಾಗೇಶ್ ನನ್ನು ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆ ತಂದಿದ್ದರು. ಆದರೆ ಮತ್ತೆ ತಪ್ಪಿಸಿಕೊಳ್ಳುವ ಯತ್ನ ನಡೆಸಿ ಸಿಕ್ಕಿಬಿದ್ದಿದ್ದಾನೆ.
ನಾಗೇಶ್ನನ್ನು ಬಂಧಿಸಿ ಬೆಂಗಳೂರಿಗೆ ಕರೆತರುತ್ತಿದ್ದಾಗ ಮೂತ್ರ ವಿಸರ್ಜನೆ ಮಾಡಬೇಕು. ಗಾಡಿ ನಿಲ್ಲಿಸುವಂತೆ ಮನವಿ ಮಾಡಿದ್ದಾನೆ. ಇದಕ್ಕೆ ಮೊದಲು ಅವಕಾಶ ಕೊಡದ ಪೊಲೀಸರು ಬಳಿಕ ಆತನ ಒತ್ತಾಯಕ್ಕೆ ಮಣಿದು ಬೆಂಗಳೂರು ಕೆಂಗೇರಿ ಮೇಲ್ಸೇತುವೆ ಬಳಿಕ ಗಾಡಿ ನಿಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಅಷ್ಟೇ ಅಲ್ಲದೆ, ಆತನನ್ನು ಹಿಡಿಯಲು ಹೋದ ಪೊಲೀಸ್ ಕಾನ್ಸ್ಟೇಬಲ್ ಮೇಲೆಯೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಇನ್ಸ್ಪೆಕ್ಟರ್ ಪ್ರಶಾಂತ್ ಅವರು ಗುಂಡು ಹಾರಿಸುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಆದರೂ ಮತ್ತೆ ತಪ್ಪಿಸಿಕೊಳ್ಳಲು ಯತ್ನಿಸಿದ ನಾಗೇಶ್ ಮೇಲೆ ಗುಂಡು ಹಾರಿಸಿದ್ದಾರೆ. ಸದ್ಯ ಆತನನ್ನು ಬಂಧಿಸಿ ಆಸ್ಪತ್ರೆಗೆ ಕರೆತಂದಿದ್ದಾರೆ.
ಆರೋಪಿ ನಾಗೇಶ್ನ ಬಲದ ಕಾಲಿಗೆ ಗುಂಡು ತಗುಲಿದ್ದು, ಸದ್ಯ ರಾಜರಾಜೇಶ್ವರಿ ಪ್ರಾಥಮಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಗದ್ದಲದ ವೇಳೆ ಆರೋಪಿ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ್ದು, ಅವರಿಗೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.