ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಹಲಸೂರು ಗೇಟ್ ಪೊಲೀಸರು ಶನಿವಾರ (ಆಗಸ್ಟ್ 12) ವಶಕ್ಕೆ ಪಡೆದಿದ್ದಾರೆ.
ಬಿಬಿಎಂಪಿ ಅಗ್ನಿ ದುರಂತದಲ್ಲಿ ನಕಲಿ ಬಿಲ್ ಮೂಲಕ ಹಣ ಬಿಡುಗಡೆ ಮಾಡಿರುವ ಪ್ರಭಾವಿ ವ್ಯಕ್ತಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಬಿಬಿಎಂಪಿಯ ಅಧಿಕಾರಿಗಳು, ಪೊಲೀಸರು ಸೇರಿದಂತೆ ಮೂರು ತಂಡಗಳಿಂದ ಪ್ರತ್ಯೇಕ ತನಿಖೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಎಂಜಿನಿಯರ್ ಕೆ.ಪ್ರಹ್ಲಾದ್ ಶನಿವಾರ ಹಲಸೂರು ಗೇಟ್ ಪೊಲೀಸ್ ಠಾಣೆಗೆ ಆಗಮಿಸಿ ದೂರು ದಾಖಲಿಸಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 338ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳದಲ್ಲಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಇಬ್ಬರು ಎಂಜಿನಿಯರ್ಗಳು ಮತ್ತು ಒಬ್ಬ ಡಿ ಗ್ರೂಪ್ ಉದ್ಯೋಗಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆದರೆ ಪೊಲೀಸರು ಮೂವರ ಗುರುತನ್ನು ಬಹಿರಂಗಪಡಿಸಿಲ್ಲ. ಘಟನೆಯ ನಂತರ ಮೂವರು ಒಟ್ಟಿಗೆ ಅಲ್ಲಿಂದ ಓಡಿದ್ದು ಏಕೆ ಎಂದು ಪ್ರಶ್ನಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಪ್ರಕರಣಕ್ಕೆ ಸಂಬಂಧಿಸಿ ಬಿಬಿಎಂಪಿ ಡಾಂಬರು ಮತ್ತು ಸಿಮೆಂಟ್ ಸೇರಿದಂತೆ ಇತರ ರಾಸಾಯನಿಕ ವಿಭಾಗಗಳಲ್ಲೂ ಸಹ ತನಿಖೆ ಮಾಡಲಾಗುತ್ತಿದೆ. ನಿರ್ದಿಷ್ಟ ಶಾಖೆಯಲ್ಲಿ ಡಾಂಬರು ಸಂಬಂಧಿತ ಪರೀಕ್ಷೆ ನಡೆಸಲಾಯಿತು. ಈ ಸಂಬಂಧ ಹಲಸೂರು ಗೇಟ್ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಈ ಘಟನೆಯಲ್ಲಿ ಗಾಯಗೊಂಡ 9 ಮಂದಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಒಂಬತ್ತು ಜನರಲ್ಲಿ ಒಬ್ಬರಿಗೆ ಶೇ 30ರಿಂದ ಶೇ 40ರಷ್ಟು ಸುಟ್ಟ ಗಾಯಗಳಾಗಿವೆ. ಕೆಲವರಿಗೆ ದೇಹದ ಶೇ 20 ಭಾಗ ಸುಟ್ಟಿದೆ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಬಂಧನ | ವರ್ಷದವರೆಗೆ ಜಾಮೀನು ಇಲ್ಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನಿರ್ದೇಶನದ ಮೇರೆಗೆ ಶಕ್ರವಾರ ರಾತ್ರಿ ಒಂಬತ್ತು ಮಂದಿಯನ್ನು ತೀವ್ರ ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಬಿಬಿಎಂಪಿ ಕಚೇರಿಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಯಬೇಕು ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಆಗ್ರಹಿಸಿದ್ದಾರೆ.