ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಭಾರೀ ಗುಡ್ ನ್ಯೂಸ್ ನೀಡಿದೆ. ಹಲವು ತಿಂಗಳುಗಳಿಂದ ಬಾಕಿ ಉಳಿದಿದ್ದ ವೇತನ ಹಿಂಬಾಕಿ ಪಾವತಿಗೆ ಸರ್ಕಾರ ಅಂತಿಮವಾಗಿ ಅನುಮೋದನೆ ನೀಡಿದ್ದು, ಒಟ್ಟು ₹1271 ಕೋಟಿ ಬಿಡುಗಡೆಗೆ ಆದೇಶ ಹೊರಡಿಸಿದೆ.
ಸಾರಿಗೆ ನೌಕರರು ಕಳೆದ ಹಲವು ತಿಂಗಳುಗಳಿಂದ ಹಿಂಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಈ ಹಿನ್ನೆಲೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಮೊದಲ ಹಂತದಲ್ಲಿ ₹450 ಕೋಟಿ ಬಿಡುಗಡೆ ಮಾಡಲಾಗಿದೆ. 2021ರ ಜನವರಿ 1ರಿಂದ 2023ರ ಫೆಬ್ರವರಿ 28ರವರೆಗಿನ 26 ತಿಂಗಳ ವೇತನ ಹಿಂಬಾಕಿ ಮೊತ್ತವನ್ನು ಪಾವತಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಈ ನಿರ್ಧಾರದಿಂದ KSRTC, BMTC, NWKRTC ಹಾಗೂ KKRTC ನೌಕರರಿಗೆ ದೊಡ್ಡ ಮಟ್ಟದ ಆರ್ಥಿಕ ನೆರವು ದೊರೆಯಲಿದೆ.
ವೇತನ ಪರಿಷ್ಕರಣೆ ಹಾಗೂ ಬಾಕಿ ಹಣ ಬಿಡುಗಡೆ ವಿಚಾರವಾಗಿ ಹಲವು ಬಾರಿ ಪ್ರತಿಭಟನೆ ನಡೆಸಿದ್ದ ಸಾರಿಗೆ ನೌಕರರಿಗೆ ಇದೀಗ ಸರ್ಕಾರದ ಈ ಘೋಷಣೆ ಸಿಹಿಸುದ್ದಿಯಾಗಿ ಪರಿಣಮಿಸಿದೆ. ನೌಕರರ ಸಂಘಟನೆಗಳು ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದು, ಉಳಿದ ಮೊತ್ತವನ್ನೂ ಶೀಘ್ರ ಬಿಡುಗಡೆ ಮಾಡುವಂತೆ ಮನವಿ ಮಾಡಿವೆ.






