ಅಕ್ಕಿ ವಿತರಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮಾಡುತ್ತಿರುವ ರಾಜಕೀಯ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ. ರಾಜ್ಯ ಸರ್ಕಾರಕ್ಕೆ ಹೆಚ್ಚಿನ ವಿತರಣೆಗೆ #FCI ನಿರಾಕರಿಸಿರುವುದು ಬಿಜೆಪಿಯ ಬಡವರ ವಿರೋಧಿ ಹಾಗೂ ಪ್ರಧಾನಿಯ ಶತ್ರುತ್ವ ನೀತಿ ಬಯಲು ಮಾಡಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾರ್ಡ್ನ ಅಡಿಯಲ್ಲಿ ರಾಜ್ಯದ 1.28 ಕೋಟಿ ಕುಟುಂಬದ ಸುಮಾರು 4.42 ಕೋಟಿ ಜನರು ಫಲಾನುಭವಿಗಳಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಇದಕ್ಕೆ ಬೇಕಾಗುವ ₹11,000 ಕೋಟಿ ನೀಡಲು ಸಿದ್ಧವಿದೆ. ಆದರೂ ಮೋದಿ ಸರ್ಕಾರ ಭಾರತೀಯ ಆಹಾರ ನಿಗಮಕ್ಕೆ ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ನೀಡದಂತೆ ನಿರ್ದೇಶನ ನೀಡಿದೆ.ಭಾರತೀಯ ಆಹಾರ ನಿಗಮದ ಬಳಿ ಹೆಚ್ಚುವರಿ ಅಕ್ಕಿ ದಾಸ್ತಾನು ಇದೆ. ಆದರೂ FCI ಮುಕ್ತ ಮಾರುಕಟ್ಟೆಯಲ್ಲಿ ದೊಡ್ಡ ವ್ಯಾಪಾರಿಗಳಿಗೆ ಅಕ್ಕಿ ಮಾರಲು ಮುಂದಾಗಿದ್ದು, ಕರ್ನಾಟಕ ರಾಜ್ಯಕ್ಕೆ ನೀಡಲು ಸಿದ್ಧವಿಲ್ಲ. ಇದು ಭ್ರಷ್ಟ ಬಿಜೆಪಿಯನ್ನು ಬಡಿದೊಡಿಸಿದ ಪರಿಶಿಷ್ಟ ಜಾತಿ, ಪಂಗಡ, ಒಬಿಸಿ ಮತ್ತು ಬಡವರ ವಿರುದ್ಧ ಬಿಜೆಪಿ ಹಾಗೂ ಮೋದಿ ಸರ್ಕಾರಕ್ಕೆ ಇರುವ ದ್ವೇಷವನ್ನು ತೋರುತ್ತಿದೆ ಎಂದು ಗುಡುಗಿದ್ದಾರೆ.

ಇಲ್ಲಿರುವ ಪ್ರಮುಖ ಪ್ರಶ್ನೆ ಎಂದರೆ,
- ತನ್ನ ಸೋಲಿನಿಂದಾಗಿ ಜನರಿಗೆ ಅನ್ನ ನಿರಾಕರಿಸುವಷ್ಟರ ಮಟ್ಟಿಗೆ ಬಿಜೆಪಿ ಹಾಗೂ ಪ್ರಧಾನಿ ಮೋದಿ ಕುರುಡರಾಗಿದ್ದಾರಾ?
- FCI ಮುಕ್ತ ಮಾರುಕಟ್ಟೆಯಲ್ಲಿ ದೊಡ್ಡ ವ್ಯಾಪಾರಿಗಳಿಗೆ ಅಕ್ಕಿ ಮಾರಲು ಸಿದ್ಧವಿದೆ. ಆದರೆ, ರಾಜ್ಯಕ್ಕೆ ಉತ್ತಮ ದರದಲ್ಲಿ ಅಕ್ಕಿ ನೀಡಲು ನಿರ್ಬಂಧ ಹೇರಿರುವುದೇಕೆ?
ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಬಡ ಕುಟುಂಬಗಳಿಗೆ ಉಚಿತ ಅಕ್ಕಿ ನೀಡಬಾರದು ಎಂಬ ಒಂದೇ ಉದ್ದೇಶದಿಂದ ಈ ತೀರ್ಮಾನ ಮಾಡಿದೆಯಲ್ಲವೇ?
- ಕಾಂಗ್ರೆಸ್ ಸರ್ಕಾರ FCI ಗೆ ಹೆಚ್ಚುವರಿ ಅಕ್ಕಿ ನೀಡುವಂತೆ ಕೇಳಿದ ನಂತರ ಕೇಂದ್ರ ಸರ್ಕಾರವು ಕೇವಲ ಮುಕ್ತ ಮಾರುಕಟ್ಟೆಯಲ್ಲಿ ದೊಡ್ಡ ವ್ಯಾಪಾರಿಗಳಿಗೆ ಮಾತ್ರ ಮಾರಾಟ ಮಾಡುವಂತೆ ನಿರ್ದೇಶನ ನೀಡಿರುವುದು ಸ್ವಲ್ಪ ಅತಿಯಾದ ಕಾಕತಾಳೀಯವಲ್ಲವೇ?
- ಬಿಜೆಪಿ ಹಾಗೂ ಮೋದಿ ಸರ್ಕಾರದ ಬೆಂಬಲವಿರುವ ದೊಡ್ಡ ವ್ಯಾಪಾರಿಗಳ ಕೂಟ ಬಡವರ ಅಕ್ಕಿಯನ್ನು ಕಸಿಯಲು ಮುಂದಾಗಿದೆಯೇ?
- ಕರ್ನಾಟಕ ರಾಜ್ಯದ ಸಂಸದರು, ಕೇಂದ್ರದ ಮಂತ್ರಿಗಳು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಕಂಡು ಮೌನವಾಗಿರುವುದೇಕೆ? ಇಷ್ಟಾದರೂ ಅವರು ಸಂಸದ ಹಾಗೂ ಸಚಿವ ಸ್ಥಾನದಲ್ಲಿ ಒಂದು ದಿನ ಮುಂದುವರಿಯಲು ಯೋಗ್ಯರೇ? ರಾಜ್ಯದ ಆರೂವರೆ ಕೋಟಿ ಜನರಿಗೆ ದ್ರೋಹ ಬಗೆದಿರುವ ಅವರು ಕೂಡಲೇ ಯಾಕೆ ರಾಜೀನಾಮೆ ನೀಡಬಾರದು?
- ರಾಜ್ಯ ಬಿಜೆಪಿ ನಾಯಕರು ಬಡವರು, ಎಸ್ ಸಿ, ಎಸ್ ಟಿ, ಒಬಿಸಿ ಬಡ ಕುಟುಂಬಗಳಿಗೆ ಅಕ್ಕಿ ನಿರಾಕರಿಸಿರುವ ವಿಚಾರದಲ್ಲಿ ಬಾಯಿಗೆ ಬೀಗ ಹಾಕಿಕೊಂಡಿರುವುದು ಏಕೆ? ಅವರ ಮೌನದ ಮೂಲಕ ಮೋದಿ ಸರ್ಕಾರ FCI ಗೆ ಅಕ್ಕಿ ನೀಡದಂತೆ ನಿರ್ದೇಶನ ನೀಡಲು ಒತ್ತಡ ಏರಿದ್ದು ಇವರೇ ಎಂದು ಸಾಬೀತುಪಡಿಸುತ್ತಿದೆಯೆ?
- ಮೋದಿ ಸರ್ಕಾರದ ಕರ್ನಾಟಕ ಹಾಗೂ ಬಡವರ ವಿರೋಧಿ ನೀತಿ ಬಗ್ಗೆ ಬಿಜೆಪಿಯ ಬಿ ಟೀಮ್ ಆಗಿರುವ ಜೆಡಿಎಸ್ ಯಾಕೆ ಮೌನವಾಗಿದೆ?
ಕನ್ನಡಿಗರಿಗೆ ಉತ್ತರ ಬೇಕಿದೆ ಎಂದು ಪ್ರಶ್ನಿಸಿದ್ದಾರೆ .