
ಮಡಿಕೇರಿ ;ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರು 20 ಕೋಟಿ ರೂಪಾಯಿ ಲಂಚ ಕೇಳಿದ್ದಾರೆ ಎಂಬ ಆಡಿಯೋ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಪೊನ್ನಣ್ಣ, “ಲೋಕಾಯುಕ್ತ ಸಂಸ್ಥೆ ಸರ್ಕಾರದ ಅಧೀನದಲ್ಲಿಲ್ಲ. ಅದು ಕಾನೂನುಬದ್ಧವಾಗಿ ರಚನೆಯಾಗಿರುವ ಸ್ವತಂತ್ರ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ ತಮ್ಮ ವಿರುದ್ಧ ತನಿಖೆ ನಡೆಸುತ್ತಿರುವವರ ವಿರುದ್ಧವೇ ಆರೋಪ ಮಾಡುವುದು ಸರಿಯಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೊಡಗಿನ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ಶನಿವಾರ ನಡೆದ ಕೊಡವ ಸಾಹಿತ್ಯ ಅಕಾಡೆಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ಹಲವು ವಿಷಯಗಳ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಕುಮಾರಸ್ವಾಮಿ ಅವರು ಇನ್ನಷ್ಟು ಆಡಿಯೋಗಳನ್ನು ಬಿಡುಗಡೆ ಮಾಡಿದರೆ ಹಲವು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಪೊನ್ನಣ್ಣ, “ಆಡಿಯೋಗಳನ್ನು ಬಿಡುಗಡೆ ಮಾಡಲಿ, ರಾಜೀನಾಮೆ ಕೊಡುವವರು ಕೊಡಲಿ” ಎಂದು ವ್ಯಂಗ್ಯವಾಡಿದರು.
ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಹೈಕೋರ್ಟ್ಗೆ ಸಲ್ಲಿಸಲಾಗಿರುವ ರಿಟ್ ಅರ್ಜಿ ಕುರಿತು ಮಾತನಾಡಿದ ಅವರು, “ಈ ವಿಷಯದ ಸಾಧಕ-ಬಾಧಕಗಳ ಬಗ್ಗೆ ನಾವು ಚರ್ಚಿಸಿದ್ದೇವೆ” ಎಂದು ತಿಳಿಸಿದರು.
ಮೈಸೂರಿನಲ್ಲಿ ಮುಖ್ಯಮಂತ್ರಿ ನಿವಾಸದಲ್ಲಿ ಸಚಿವರು ಮತ್ತು ಶಾಸಕರೊಂದಿಗೆ ನಡೆದ ಸಭೆ ಕುರಿತು ಮಾತನಾಡಿದ ಪೊನ್ನಣ್ಣ, “ನಾನು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ. ಲೋಕಾಯುಕ್ತ ಎಫ್ಐಆರ್ ದಾಖಲಾಗಿದೆ ಮತ್ತು ಸಿಬಿಐ ತನಿಖೆಗೆ ಒಳಪಡಿಸುವಂತೆ ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಇವುಗಳ ಬಗ್ಗೆ ಸಮಾಲೋಚನೆ ನಡೆಸುವುದು ಸಹಜವಲ್ಲವೇ?” ಎಂದು ಪ್ರಶ್ನಿಸಿದರು.
ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣಗಳಿಗೆ ಸೂಕ್ತವಾಗಿ ಸ್ಪಂದಿಸಬೇಕಾಗುತ್ತದೆ. ಒಟ್ಟಿನಲ್ಲಿ ಮುಖ್ಯಮಂತ್ರಿಯವರ ವಿರುದ್ಧ ಎಲ್ಲಾ ರೀತಿಯ ರಾಜಕೀಯ ಷಡ್ಯಂತ್ರಗಳು ನಡೆಯುತ್ತಿವೆ. ಇವುಗಳನ್ನೆಲ್ಲಾ ಎದುರಿಸಬೇಕಾಗುತ್ತದೆ” ಎಂದು ಪೊನ್ನಣ್ಣ ಹೇಳಿದರು.
ಕಾರ್ಯಕ್ರಮದ ನಂತರ, ಚೇರಂಬಾಣೆಯ ಕೊಡವ ಸಮಾಜದಲ್ಲಿ ನಡೆದ ಕೊಡಗಿನ ಆದಿಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿಯವರ 157ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪೊನ್ನಣ್ಣ ಭಾಗವಹಿಸಿದರು. ಈ ಸಂದರ್ಭದಲ್ಲಿ ಕೊಡವ ಸಮುದಾಯದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.