ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರ ಆರೋಪಿಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಬೆಂಗಳೂರಿನ ಸಿಸಿಹೆಚ್ 42 ಕೋರ್ಟ್ ಅನುಮತಿ ನೀಡಿದೆ.

ಪ್ರದೋಷ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು ಕೋರ್ಟ್ ವಿಚಾರಣೆ ನಡೆಸಿ ಅಂಗೀಕರಿಸಿದೆ. ಇದರೊಂದಿಗೆ ಇನ್ನು ಮುಂದೆ ಅವರು ಪ್ರಕರಣದ ಆರೋಪಿಯಾಗಿರುವ ಬದಲು, ಪ್ರಾಸಿಕ್ಯೂಷನ್ ಪರ ಸಾಕ್ಷಿಯಾಗಿ ನ್ಯಾಯಾಲಯದ ಮುಂದೆ ಹೇಳಿಕೆ ನೀಡಲಿದ್ದಾರೆ.

ಕೋರ್ಟ್ ಕೆಲವು ಪ್ರಮುಖ ನಿಬಂಧನೆಗಳೊಂದಿಗೆ ಪ್ರದೋಷ್ಗೆ ಮಾಫಿ ಸಾಕ್ಷಿಯಾಗಲು ಅವಕಾಶ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ತಿಳಿದಿರುವ ಎಲ್ಲಾ ವಿಚಾರಗಳನ್ನು ನ್ಯಾಯಾಲಯದ ಮುಂದೆ ಸತ್ಯವಾಗಿ ಹೇಳಬೇಕಿದ್ದು, ಯಾವುದೇ ಮಾಹಿತಿಯನ್ನು ಮುಚ್ಚಿಡಬಾರದು ಹಾಗೂ ಸುಳ್ಳು ಹೇಳಿಕೆ ನೀಡಬಾರದು ಎಂದು ಸೂಚಿಸಲಾಗಿದೆ.

ಪ್ರದೋಷ್ ನೀಡುವ ಹೇಳಿಕೆ ಪ್ರಕರಣದ ತನಿಖೆ ಮತ್ತು ವಿಚಾರಣೆಯಲ್ಲಿ ಮಹತ್ವದ ಪಾತ್ರ ವಹಿಸುವ ಸಾಧ್ಯತೆ ಇದೆ. ವಿಶೇಷವಾಗಿ ದರ್ಶನ್ ಹಾಗೂ ಪ್ರಕರಣದ ಇತರ ಆರೋಪಿಗಳ ವಿರುದ್ಧ ಅವರು ನೀಡುವ ಸಾಕ್ಷ್ಯಗಳು ವಿಚಾರಣೆಯ ಮೇಲೆ ಪರಿಣಾಮ ಬೀರಬಹುದು.

ಮಾಫಿ ಸಾಕ್ಷಿಯಾಗಿ ಪರಿಗಣಿಸಿದರೂ ಪ್ರದೋಷ್ಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿಲ್ಲ. ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವವರೆಗೆ ಅವರು ಜೈಲಿನಲ್ಲೇ ಇರಬೇಕು ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೇ ನ್ಯಾಯಾಲಯದ ಮುಂದೆ ನೀಡುವ ಹೇಳಿಕೆಯಲ್ಲಿ ತಪ್ಪು ಮಾಹಿತಿ ನೀಡಿದರೆ ಅಥವಾ ಸತ್ಯವನ್ನು ಮರೆಮಾಚಿದರೆ ಮತ್ತೆ ಅವರನ್ನು ಆರೋಪಿಯಾಗಿ ಪರಿಗಣಿಸುವ ಸಾಧ್ಯತೆ ಇದೆ ಎಂದು ಕೋರ್ಟ್ ಎಚ್ಚರಿಕೆ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳಾಗಿದ್ದಾರೆ. ಇದೀಗ ಪ್ರದೋಷ್ ಮಾಫಿ ಸಾಕ್ಷಿಯಾಗಿ ಬದಲಾಗಿರುವುದರಿಂದ ಉಳಿದ ಆರೋಪಿಗಳ ವಿರುದ್ಧದ ವಿಚಾರಣೆಯಲ್ಲಿ ಅವರ ಹೇಳಿಕೆ ಮತ್ತು ಸಾಕ್ಷ್ಯಗಳು ನಿರ್ಣಾಯಕವಾಗುವ ಸಾಧ್ಯತೆ ಇದೆ.







