ಮೈಸೂರು : ಪ್ರಧಾನಿ ಮೋದಿ ಏಪ್ರಿಲ್ 9ರಂದು ಬಂಡಿಪುರಕ್ಕೆ ಆಗಮಿಸುತ್ತಿದ್ದಾರೆ. ಹುಲಿ ಯೋಜನೆಗೆ 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮೂರು ದಿನಗಳ ಕಾರ್ಯಕ್ರಮ ಆಯೋಜಿಸಲಾಗಿದ್ದು ಈ ಕಾರ್ಯಕ್ರಮಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಅಲ್ಲದೇ ಬಂಡಿಪುರದಲ್ಲಿ ಪ್ರಧಾನಿ ಮೋದಿ ಸಫಾರಿ ಮಾಡುವವರಿದ್ದು ಈ ಹಿನ್ನೆಲೆಯಲ್ಲಿ ಸೂಕ್ತ ತಯಾರಿಯನ್ನು ಮಾಡಲಾಗ್ತಿದೆ.
ಪ್ರಧಾನಿ ಮೋದಿ ಬಂಡಿಪುರ ಭೇಟಿ ಹಿನ್ನೆಲೆಯಲ್ಲಿ ಬಂಡಿಪುರದಲ್ಲಿ ಪ್ರಯಾಣಿಕರಿಗೆ ಸಂಚಾರ ಮಾರ್ಗದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಇಂದು ಸಂಜೆ 4 ಗಂಟೆಯಿಂದ ಏಪ್ರಿಲ್ 9ರ ಮಧ್ಯಾಹ್ನ 12ರವರೆಗೆ ಬಂಡೀಪುರ ಮಾರ್ಗದಿಂದ ತಮಿಳುನಾಡಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 181 ಮತ್ತು 766ರಲ್ಲಿ (ಊಟಿ ರಸ್ತೆ) ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಸರ್ಕಾರಿ ಬಸ್ ಮತ್ತು ಸರ್ಕಾರಿ ವಾಹನಗಳಿಗೆ ಈ ನಿಯಮಗಳು ಅನ್ವಯವಾಗೋದಿಲ್ಲ. ಇದನ್ನು ಹೊರತುಪಡಿಸಿ ಮಿಕ್ಕ ಎಲ್ಲಾ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಭದ್ರತೆ ಹಾಗೂ ರಸ್ತೆ ನಿರ್ವಹಣೆಗೆ ಸೂಕ್ತ ತಯಾರಿ ಅಗತ್ಯವಿರುವ ಹಿನ್ನೆಲೆಯಲ್ಲಿಚಾಮರಾಜನಗರ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಗುರುವಾರ ಆದೇಶ ಹೊರಡಿಸಿದ್ದಾರೆ.
ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ನಿನ್ನೆಯಿಂದಲೇ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಮಾತ್ರವಲ್ಲದೇ ಬಂಡೀಪುರ ವ್ಯಾಪ್ತಿಯ ಎಲ್ಲಾ ಹೋಂಸ್ಟೇ, ರೆಸಾರ್ಟ್, ಲಾಡ್ಜ್ಗಳಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ನಿರ್ಬಂಧಿಸಲಾಗಿದೆ .