ಮಹಾರಾಷ್ಟ್ರದ ಸಚಿವರು ಡಿಸೆಂಬರ್ 6ರಂದು ಬೆಳಗಾವಿಗೆ ಭೇಟಿ ನೀಡುತ್ತಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳ ಸದಸ್ಯರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ಜಮಾವಣೆಯಾದ ಕಾರ್ಯಕರ್ತರು ಮಹಾ ಸಚಿವರ ವಿರುದ್ದ ಘೋಷಣೆಗಳನ್ನ ಕೂಗಿದರು ಮತ್ತು ರಾಜ್ಯ ಸರ್ಕಾರ ಈ ವಿಚಾರದಲ್ಲಿ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದವು.
ಇನ್ನು ಬೆಂಗಳೂರಿನಿಂದ ಬೆಳಗಾವಿಯತ್ತ ಮುಖ ಮಾಡಿರುವ ಕನ್ನಡ ಪರ ಒಕ್ಕೂಟದ ಸದಸ್ಯರು ಮಂಗಳವಾರ ಪ್ರತಿಭಟನೆಯನ್ನ ತೀವ್ರಗೊಳಿಸುವ ನಿರೀಕ್ಷೆಯಿದೆ.
ಇನ್ನು ಮಹಾರಾಷ್ಟ್ರದ ಸಚಿವರಾದ ಚಂದ್ರಕಾಂತ್ ಪಾಟೀಲ್, ಶಂಭುರಾಜ್ ದೇಸಾಯಿ, ಸಂಸದ ಧೈರ್ಯಶೀಲ ಮಾನೆ ಡಿಸೆಂಬರ್ 6 ಮಂಗಳವಾರದಂದು ಬೆಳಗಾವಿಗೆ ಭೇಟಿ ನೀಡುತ್ತಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಹಾ ಸಚಿವರಿಗೆ ಬೆಳಗಾವಿಗೆ ಬರಲು ಅವಕಾಶ ನೀಡಬಾರದು ಎಂದು ಕನ್ನಡ ಪರ ಸಂಘಟನೆಯ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.