ರಾಜ್ಯದ ಕಾರಾಗೃಹಗಳಲ್ಲಿ ಸುಮಾರು 15 ಸಾವಿರ ಕೈದಿಗಳಿದ್ದಾರೆ. ಕೈದಿಗಳಿಗೆ ಕೂಲಿ ಮೊತ್ತವನ್ನು 200 ರೂ. ನಿಂದ ಸ್ವಲ್ಪ ಹೆಚ್ಚಳ ಮಾಡುವ ಕುರಿತು ಪ್ರಸ್ತಾವನೆ ಮಾಡಲಾಗಿದೆಯೇ ಹೊರತು, ಈವರೆಗೆ ಆದೇಶ ಹೊರಡಿಸಿಲ್ಲ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಜೈಲಿನಲ್ಲಿ ಪ್ರತಿ ಕೈದಿಯೂ ಕೆಲಸ ಮಾಡಬೇಕಾಗುತ್ತದೆ. ವಿವಿಧ ಕೆಲಸಗಳ ಮೂಲಕ ಕೈದಿಗಳ ಖಿನ್ನತೆ ಹೋಗಲಾಡಿಸಿ ಅವರ ಮನಃಪರಿವರ್ತನೆ ಮಾಡುವುದು ಇದರ ಉದ್ದೇಶ. ಈ ಮೂಲಕ ಇಲಾಖೆಗೆ ಆದಾಯವೂ ಬರುತ್ತಿದೆ. ಕೈದಿಯಾದ ಮಾತ್ರಕ್ಕೆ ಅವರಿಂದ ಜೀತ ಮಾಡಿಸಿಕೊಳ್ಳುವ ಹಕ್ಕು ಯಾವ ಸರ್ಕಾರಕ್ಕೂ ಇಲ್ಲ ಎಂದು ಹೇಳಿದ್ದಾರೆ.
ಈ ಕಾರಣಕ್ಕಾಗಿ ಅವರಿಂದಲೇ ಬರುತ್ತಿರುವ ಲಾಭ ಬಳಸಿ ಅವರಿಗೆ ಸ್ವಲ್ಪ ಕೂಲಿ ಹೆಚ್ಚಿಸುವ ಯೋಚನೆ ಮಾಡಲಾಗಿದೆ. ಆದರೆ ಈ ಬಗ್ಗೆ ತಪ್ಪು ಸಂದೇಶ ಹರಡುವುದು ಕಂಡುಬಂದಿದೆ. ಈ ರೀತಿ ತಪ್ಪು ಸಂದೇಶ ಹರಡುವುದು ಸಮಾಜದ ಹಿತದೃಷ್ಟಿಯಿಂದ ಸರಿಯಲ್ಲ ಎಂದು ತಿಳಿಸಿದ್ದಾರೆ.