
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ(Bangladesh Prime Minister Sheikh Hasina to resign) ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನಕಾರರು ಮತ್ತು ಆಡಳಿತಾರೂಢ ಅವಾಮಿ ಲೀಗ್ನ ಬೆಂಬಲಿಗರ ನಡುವೆ ನಡೆದ ಭೀಕರ ಘರ್ಷಣೆಯಲ್ಲಿ 14 ಪೊಲೀಸರು ಸೇರಿದಂತೆ ಸುಮಾರು 100 ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ. ಇಸ್ಕಾನ್ (Iscon) ಮತ್ತು ಕಾಳಿ ದೇವಾಲಯಗಳು( Kali Temples) ಸೇರಿದಂತೆ ಹಿಂದೂ ದೇವಾಲಯ ಹಾಗೂ ಮನೆಗಳನ್ನು ಗುರಿಯಾಗಿಸಲಾಗಿದೆ. ಇದರಿಂದಾಗಿ ಭಕ್ತರು ಪರದಾಡಬೇಕಾಯಿತು. ಹಿಂಸಾಚಾರದಲ್ಲಿ ಒಬ್ಬ ಹಿಂದೂ ಕೂಡ ಸಾವನ್ನಪ್ಪಿದ್ದಾನೆ.

ವಿವಾದಾತ್ಮಕ ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು. 1971ರ ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಹೋರಾಡಿದ ಮಾಜಿ ಸೈನಿಕರ ಸಂಬಂಧಿಕರಿಗೆ ಈ ಕೋಟಾ ವ್ಯವಸ್ಥೆಯಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಶೇ.30ರಷ್ಟು ಮೀಸಲಾತಿಯನ್ನು ನೀಡಲಾಯಿತು.
ಭಾರತೀಯರು ಮನೆಯಿಂದ ಆಚೆ ಬಾರದಂತೆ ಸೂಚನೆ ನೀಡಲಾಗಿದೆ. ಹಿಂಸಾಚಾರದ ಪರಿಣಾಮವಾಗಿ ಅಧಿಕಾರಿಗಳು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದರು ಮತ್ತು ಅನಿರ್ದಿಷ್ಟ ರಾಷ್ಟ್ರವ್ಯಾಪಿ ಕರ್ಫ್ಯೂ ವಿಧಿಸಲಾಗಿದೆ. ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ವ್ಯವಸ್ಥೆ ವಿಚಾರವಾಗಿ ಗದ್ದಲ ಎದ್ದಿರುವ ಹಿನ್ನೆಲೆಯಲ್ಲಿ ಶೇಖ್ ಹಸೀನಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.300ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ.

ದೇಶಾದ್ಯಂತ ವಿಧ್ವಂಸಕ ಕೃತ್ಯಗಳಲ್ಲಿ ತೊಡಗುವವರು ವಿದ್ಯಾರ್ಥಿಗಳಲ್ಲ ಆದರೆ ಭಯೋತ್ಪಾದಕರು ಎಂದು ಪ್ರಧಾನಿ ಹಸೀನಾ ಹೇಳಿದ್ದಾರೆ. ಇದೀಗ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವವರು ವಿದ್ಯಾರ್ಥಿಗಳಲ್ಲ, ರಾಷ್ಟ್ರವನ್ನು ಅಸ್ಥಿರಗೊಳಿಸಲು ಹೊರಟಿರುವ ಭಯೋತ್ಪಾದಕರು. ಅವರನ್ನು ದೃಡವಾಗಿ ನಿಗ್ರಹಿಸುವಂತೆ ದೇಶವಾಸಿಗಳಿಗೂ ಮನವಿ ಮಾಡಿದ್ದಾರೆ.






