PSI ಪರೀಕ್ಷೆಯಲ್ಲಿ ನಡೆದ ಅಕ್ರಮ ಆರೋಪದ ಹಿನ್ನಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆಗ್ರಹಿಸಿ ವಿಧಾನಸೌಧದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಗುರುವಾರ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
ಪ್ರತಿಭಟನೆಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,ಇವತ್ತು ಕೆಪಿಸಿಸಿ ವತಿಯಿಂದ ಪ್ರತಿಭಟನೆ ಮಾಡಿದ್ದೇವೆ. ವಿಧಾನಸಭೆಯಲ್ಲೂ ಇದನ್ನು ಪ್ರಸ್ತಾಪಿಸಿದ್ದೆವೆ. 300 ಕ್ಕೂ ಹೆಚ್ಚು ಜನರ ಬಳಿ ದುಡ್ಡು ತಗಂಡು ಅಕ್ರಮ ಮಾಡಿದ್ದಾರೆ ಎಂದು ಆರೋಪಿಸಿದರು. PSI ಪರೀಕ್ಷೆ ಹಗರಣ ನಡೆದಿರುವುದು ಸಾಬೀತಾಗಿದೆ. ಈ ಕಾರಣಕ್ಕಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು. ಪ್ರಕರಣದ ತನಿಖೆ ಹಾಕಿ ನ್ಯಾಯಾಧೀಶರ ಮೂಲಕ ನಡೆಸಬೇಕು. ಈ ಪ್ರತಿಭಟನೆ ಇಲ್ಲಿಗೆ ನಿಲ್ಲೋದಿಲ್ಲ. ಪ್ರತಿಭಟನೆ ನಿರಂತರವಾಗಿ ಮಾಡ್ತೀವಿ ಎಂದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿ, ಸಿ ಆರ್ ಪಿ ಸಿ ಸೆಕ್ಷನ್ 164 ಅನ್ವಯ ಮ್ಯಾಜಿಸ್ಟ್ರೇಟ್ ಮುಂದೆ ಅಮೃತ ಪೌಲ್ ಹೇಳಿಕೆ ಕೊಡಬೇಕು. ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ, ಯಾರು ಯಾವ ಕಚೇರಿಯಲ್ಲಿ ಭೇಟಿಯಾಗಿದ್ದರು ಎಲ್ಲ ಹೊರ ಬರಬೇಕು ಎಂದು ಆಗ್ರಹಿಸಿದರು.