ಸಂಸದ ರಾಹುಲ್ ಗಾಂಧಿ(Rahul Gandhi) ಕೇರಳದ ವಯನಾಡು ಹಾಗೂ ಉತ್ತರ ಪ್ರದೇಶದ ರಾಯ್ ಬರೇಲಿ ಸೇರಿದಂತೆ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಯಾವ ಕ್ಷೇತ್ರ ಉಳಿಸಿಕೊಳ್ಳಲಿದ್ದಾರೆ ಎಂಬ ಚರ್ಚೆ ಶುರುವಾಗಿದೆ.
ರಾಹುಲ್ ಗಾಂಧಿ ವಯನಾಡ್ ಬಿಟ್ಟು ರಾಯ್ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಬಹುದು ಎಂದು ಹೇಳಲಾಗುತ್ತಿದೆ. ಈ ಕುರಿತು ಕಾಂಗ್ರೆಸ್ ನ ಕಾರ್ಯಕಾರಿ ಸಮಿತಿಯಲ್ಲಿ ಚರ್ಚೆ ನಡೆಯುತ್ತಿವೆ. ಜೂನ್ 17ಕ್ಕೂ ಮುನ್ನ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ರಾಹುಲ್ ಹೇಳಿದ್ದಾರೆ.
ರಾಹುಲ್ ಗಾಂಧಿ ಎರಡನೇ ಬಾರಿಗೆ ವಯನಾಡಿನ ಸಂಸದರಾಗಿದ್ದು, ವಯನಾಡಿನ ಜನತೆ ತಮ್ಮ ಪ್ರತಿನಿಧಿಯನ್ನಾಗಿ ಬಯಸುತ್ತಿದ್ದಾರೆ. ಆದರೆ, ರಾಯ್ ಬರೇಲಿ ಕ್ಷೇತ್ರ ಉಳಿಸಿಕೊಳ್ಳಲು ಒತ್ತು ನೀಡಲಾಗುತ್ತಿದೆ ಎನ್ನಲಾಗಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನವನ್ನು ವಹಿಸುವಂತೆ ರಾಹುಲ್ ಗಾಂಧಿ ಅವರಿಗೆ ಸಿಡಬ್ಲ್ಯುಸಿ ಸರ್ವಾನುಮತದಿಂದ ಮನವಿ ಮಾಡಿದೆ. ವಿರೋಧ ಪಕ್ಷದ ನಾಯಕರಾಗುವುದಕ್ಕೂ ಮುನ್ನ ಒಂದು ಕ್ಷೇತ್ರಕ್ಕೆ ರಾಹುಲ್ ರಾಜೀನಾಮೆ ಸಲ್ಲಿಸಲಿದ್ದಾರೆ. ಒಬ್ಬರು ಕೇವಲ ಒಂದು ಕಡೆ ಮಾತ್ರ ಸಂಸದರಾಗಿ ಉಳಿಯುವುದು ನಿಯಮ. ಹೀಗಾಗಿ ಎರಡೂ ಕಡೆ ಗೆದ್ದಿರುವ ರಾಹುಲ್ ಒಂದು ಕ್ಷೇತ್ರ ಉಳಿಸಿಕೊಳ್ಳಲಿದ್ದಾರೆ.
ಕೇರಳದ ಕಾಂಗ್ರೆಸ್ ನಾಯಕರು ವಯನಾಡ್ ಉಳಿಸಿಕೊಳ್ಳಲು ರಾಹುಲ್ ಗೆ ಒತ್ತಡ ಹೇರುತ್ತಿದ್ದಾರೆ. ರಾಹುಲ್ ತ್ಯಜಿಸಿದ ಕ್ಷೇತ್ರದಲ್ಲಿ ಸ್ಪರ್ಧಿಸಲು ಪ್ರಿಯಾಂಕಾ ಗಾಂಧಿಯನ್ನು ಕಣಕ್ಕಿಳಿಸಬಹುದು ಎನ್ನಲಾಗುತ್ತಿದೆ. ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ 6,87,649 ಮತಗಳನ್ನು ಗಳಿಸಿ ಭರ್ಜರಿಯಾಗಿ ಗೆಲುವು ಸಾಧಿಸಿದ್ದರು. ಅವರ ಪ್ರತಿಸ್ಪರ್ಧಿ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ಕೇವಲ 2,97,619 ಮತ ಗಳಿಸಿ, 3,90,030 ಮತಗಳ ಅಂತರದಿಂದ ಸೋಲು ಕಂಡಿದ್ದರು.