ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಏಷ್ಯಾಕಪ್ ನಿಂದ ಹೊರಗುಳಿಯಲಿದ್ದಾರೆ.
ರಾಹುಲ್ ದ್ರಾವಿಡ್ ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್ ಟೂರ್ನಿಗೆ ತಂಡದ ಜೊತೆ ತೆರಳುವುದಿಲ್ಲ ಎಂದು ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ತಿಳಿಸಿದೆ. ಈ ಮೂಲಕ ಏಷ್ಯಾಕಪ್ ಆರಂಭಕ್ಕೂ ಮುನ್ನವೇ ಭಾರತಕ್ಕೆ ದೊಡ್ಡ ಆಘಾತ ಉಂಟಾದಂತಾಗಿದೆ.
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿದಿದ್ದರು. ರಾಹುಲ್ ಅನುಪಸ್ಥಿತಿ ನಡುವೆಯೂ ಕೆ.ಎಲ್. ರಾಹುಲ್ ನೇತೃತ್ವದ ತಂಡ 3-0 ಅಂತರದಲ್ಲಿ ಸರಣಿ ಕ್ಲೀನ್ ಸ್ವೀಪ್ ಮಾಡಿತ್ತು.
ಬಿಡುವಿಲ್ಲದ ಅಂತಾರಾಷ್ಟ್ರೀಯ ವೇಳಾಪಟ್ಟಿಯಿಂದಾಗಿ ದ್ರಾವಿಡ್, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಮತ್ತು ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಸೇರಿದಂತೆ ಸಿಬ್ಬಂದಿಗೆ ಆಯ್ಕೆ ಸಮಿತಿಯು ವಿಶ್ರಾಂತಿ ನೀಡಿತ್ತು.
ಭಾರತ ತಂಡ ಆಗಸ್ಟ್ 28 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಆಡುವ ಮೂಲಕ ಏಷ್ಯಾ ಕಪ್ನಲ್ಲಿ ಅಭಿಯಾನ ಆರಂಭಿಸಲಿದೆ.
ಕಳೆದ ವರ್ಷ ಯುಎಇಯಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ನಲ್ಲಿ ಬಾಬರ್ ಅಜಮ್ ತಂಡದ ವಿರುದ್ಧ 10 ವಿಕೆಟ್ ಸೋಲಿಗೆ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಕಾತುರವಾಗಿದೆ.