ನವದೆಹಲಿ: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ರಾಜಸ್ಥಾನದಲ್ಲಿ ಕೆಲವು ಕಾಂಗ್ರೆಸ್ ನಾಯಕರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ ಒಂದು ದಿನದ ಬಳಿಕ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತನಿಖಾ ಸಂಸ್ಥೆಯ ವಿರುದ್ಧ ಕಿಡಿಕಾರಿದ್ದಾರೆ. ಬೀದಿನಾಯಿಗಿಂತ ಹೆಚ್ಚಾಗಿ ಜಾರಿ ನಿರ್ದೇಶನಾಲದ ಅಧಿಕಾರಿಗಳೇ ತಿರುಗಾಡ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ. ಜೈಪುರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೆಹ್ಲೋಟ್, “ನಾಯಿಗಳಿಗಿಂತಲೂ ಹೆಚ್ಚಾಗಿ ಜಾರಿ ನಿರ್ದೇಶನಾಲಯವು ದೇಶದಲ್ಲಿ ಓಡಾಡುತ್ತಿದೆ” ಎಂದು ವಿವಾದಿತ ಹೇಳಿಕೆ ನೀಡಿದ್ದಾರೆ. ಇದಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಸರ್ಕಾರ ಅದರಲ್ಲೂ ರಾಜಸ್ಥಾನ ಸರ್ಕಾರದ ಗ್ಯಾರಂಟಿ ಮಾಡೆಲ್ಅನ್ನು ಅನುಸರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ನಾನು ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಮುಖ್ಯಸ್ಥರಿಂದ ಸಮಯ ಕೋರಿದೆ, ಆದರೆ ಈಗ ಇವು ರಾಜಕೀಯ ಅಸ್ತ್ರವಾಗಿ ಮಾರ್ಪಟ್ಟಿವೆ. ಮೋದಿ ಅವರಿಗೆ ಕೌಂಟ್ಡೌನ್ ಪ್ರಾರಂಭವಾಗಿದೆ ಎನ್ನುವುದು ತಿಳಿದಿಲ್ಲ ಅವರು ಈಗ ನಮ್ಮ ‘ಗ್ಯಾರಂಟಿ ಮಾದರಿ’ಯನ್ನು ಅನುಸರಿಸುತ್ತಿದ್ದಾರೆ” ಎಂದು ಗೆಹ್ಲೋಟ್ ಹೇಳಿದ್ದಾರೆ.
ಗುರುವಾರ, ಜಾರಿ ನಿರ್ದೇಶನಾಲಯವು ಜೈಪುರ ಮತ್ತು ಸಿಕರ್ನಲ್ಲಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಅವರ ನಿವಾಸ ಹಾಗೂ ಕಚೇರಿಯ ಮೇಲೆ ದಾಳಿ ನಡೆಸಿದ್ದು, ಆಪಾದಿತ ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣದ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಮತ್ತು ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಮಗನಿಗೆ ಸಮನ್ಸ್ ನೀಡಲಾಗಿದೆ.