ರಾಜಸ್ಥಾನ ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಚುನಾವಣಾ ಪ್ರಚಾರಕ್ಕೆ ಇಂದು ತೆರೆ ಬಿದಿದ್ದು, ನವೆಂಬರ್ 25ಕ್ಕೆ ಮತದಾನ ನಡೆಯಲಿದೆ.
ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಅಧಿಕಾರವನ್ನು ಉಳಿಸಿಕೊಳ್ಳಲು ರಣತಂತ್ರ ರೂಪಿಸಿದೆ. ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಅಶೋಕ್ ಗೆಹ್ಲೋಟ್ ಸರ್ಕಾರದ ಕಾರ್ಯಗಳು ಮತ್ತು ಕಾರ್ಯಕ್ಷಮತೆಯನ್ನು ಜನರ ಬಳಿ ಮನವರಿಕೆ ಮಾಡಿಕೊಡುತ್ತಿದೆ. ಮುಖ್ಯವಾಗಿ ಪಕ್ಷವು ಮತ್ತೆ ಅಧಿಕಾರ ಹಿಡಿದರೆ ಏಳು ಗ್ಯಾರಂಟಿಗಳನ್ನು ಜಾರಿಗೊಳಿಸುವುದಾಗಿ ಘೋಷಿಸಿದೆ. ಆದರೆ ಬಿಜೆಪಿ ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ಧ ಕಿಡಿಕಾರುತ್ತಾ ಮಹಿಳೆಯರ ಸುರಕ್ಷತೆ, ಭ್ರಷ್ಟಾಚಾರ ಇತ್ಯಾದಿ ಕುರಿತು ಹೆಚ್ಚು ಗಮನ ಕೊಟ್ಟಿದ್ದು ಕಾಂಗ್ರೆಸ್ ಮತವನ್ನು ಹೊಡೆಯುವ ತಂತ್ರವನ್ನು ಮಾಡಿದೆ.
ರಾಜಸ್ಥಾನದಲ್ಲಿ ಒಟ್ಟು 200 ವಿಧಾನಸಭಾ ಕ್ಷೇತ್ರಗಳಿದ್ದು, 199 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಉಳಿದ ಶ್ರೀಗಂಗಾನಗರದ ಕರಣಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೊನೂರ್ ನಿಧನರಾಗಿದ್ದು, ಈ ಒಂದು ಕ್ಷೇತ್ರದ ಚುನಾವಣೆ ಮುಂದೂಡಲಾಗಿದೆ. 199 ವಿಧಾನಸಭಾ ಕ್ಷೇತ್ರಗಳಲ್ಲಿ 5,25,38,105 ಮತದಾರರಿದ್ದಾರೆ.
ರಾಜಸ್ಥಾನ ಕಾಂಗ್ರೆಸ್ ಪಕ್ಷದ ಪರ ಸ್ಟಾರ್ ಪ್ರಚಾರಕರಾದ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಇತರರು ಸರಣಿ ಚುನಾವಣಾ ಸಭೆಗಳನ್ನು ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ಚುನಾವಣಾ ಪ್ರಚಾರದ ನೇತೃತ್ವ ವಹಿಸಿದ್ದರು ಮತ್ತು ಅನೇಕ ಸಭೆಗಳನ್ನು ನಡೆಸಿದ್ದಾರೆ. ಜೊತೆಗೆ ಬಿಕಾನೇರ್ ಮತ್ತು ಜೈಪುರದಲ್ಲಿ ರೋಡ್ ಶೋ ಕೂಡ ನಡೆಸಿದ್ದಾರೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ಸ್ಮೃತಿ ಇರಾನಿ ಮತ್ತು ರಾಜನಾಥ್ ಸಿಂಗ್, ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ (ಉತ್ತರ ಪ್ರದೇಶ), ಶಿವರಾಜ್ ಸಿಂಗ್ ಚೌಹಾಣ್ (ಮಧ್ಯಪ್ರದೇಶ) ಮತ್ತು ಹಿಮಂತ ಬಿಸ್ವಾ ಶರ್ಮಾ (ಅಸ್ಸಾಂ) ಸೇರಿದಂತೆ ಅನೇಕ ನಾಯಕರು ವಿವಿಧ ಕ್ಷೇತ್ರಗಳಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿ ಮತ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ನವೆಂಬರ್ 23 ಸಂಜೆ 6 ಗಂಟೆಗೆ ಪ್ರಚಾರ ಮುಕ್ತಾಯವಾಗಿದೆ ಎಂದು ಚುನಾವಣಾ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನವೆಂಬರ್ 25 ರಂದು ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.