ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ವಿ.ಸೋಮಣ್ಣ, ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಡಾ.ಕೆ.ಸುಧಾಕರ್ಗೆ ಪುನರ್ಜನ್ಮ ಕೊಟ್ಟ ಲೋಕಸಭಾ ಚುನಾವಣೆ.
ಹಾಗಾದ್ರೆ, ಈ ಐವರು ನಾಯಕರಿಗೆ ಆಗಿದ್ದೇನು?
ಐವರು ಪ್ರಮುಖ ನಾಯಕರ ಪುನರ್ಜನ್ಮದ ಕಂಪ್ಲೀಟ್ ಡೀಟೈಲ್ಸ್.
- ಜಗದೀಶ್ ಶೆಟ್ಟರ್ :- ಮಾಜಿ ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಣೆ ಮಾಡಿ, ಬಿಜೆಪಿಯ ಹಿರಿಯ ರಾಜ್ಯ ನಾಯಕರ ಪಟ್ಟಿಯಲ್ಲಿ ಅಗ್ರಗಣ್ಯ ಸ್ಥಾನದಲ್ಲಿದ್ರೂ ಜಗದೀಶ್ ಶೆಟ್ಟರ್ಗೆ, 2023 ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಮಿಸ್ ಆಗಿತ್ತು. ಅಂದು ಅವರು ಬಿಜೆಪಿ ತೊರೆದು, ಕಾಂಗ್ರೆಸ್ಗೆ ಹೋಗಿ, ಹುಬ್ಬಳ್ಳಿ- ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದು, 36 ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ರು. ಬಳಿಕ ಕಾಂಗ್ರೆಸ್ ಪಕ್ಷ ಅವರನ್ನು ಹಿರಿತನದ ಆಧಾರದ ಮೇಲೆ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿತ್ತು. ಬದಲಾದ ರಾಜಕೀಯ ಸನ್ನಿವೇಶ ಹಾಗೂ ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಕಾಂಗ್ರೆಸ್ ತೊರೆದು, ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆ ಆಗಿದ್ದರು.
ಈಗ ನಡೆದ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ರು. ಮೊದಲಿಗೆ ಬೆಳಗಾವಿ ಕ್ಷೇತ್ರದಲ್ಲಿ ಶೆಟ್ಟರ್ ವಿರುದ್ಧ ಗೋಬ್ಯಾಕ್ ಅಭಿಯಾನ ಶುರುವಾದ್ರೂ, ದಿನ ಕಳೆದಂತೆ ಅದನ್ನೆಲ್ಲಾ ಸರಿ ಮಾಡಿಕೊಂಡ ಶೆಟ್ಟರ್ ಬರೋಬ್ಬರಿ 1,78,437 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ವಿರುದ್ಧ ಗೆಲುವು ಸಾಧಿಸಿ ರಾಜಕೀಯವಾಗಿ ಪುನರ್ಜನ್ಮ ಪಡೆದಿದ್ದಾರೆ.
- ಗೋವಿಂದ ಕಾರಜೋಳ :- ಮಾಜಿ ಉಪ- ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಣೆ ಮಾಡಿದ್ದ ಗೋವಿಂದ ಕಾರಜೋಳ, 2023 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದು, ಕಾಂಗ್ರೆಸ್ನ ಆರ್. ಬಿ.ತಿಮ್ಮಾಪುರ ವಿರುದ್ಧ ಸೋಲುಂಡಿದ್ರು. ಇದೀಗ ಬಿಜೆಪಿ ಅವರನ್ನು ಗುರುತಿಸಿ, ದಲಿತ ಸಮುದಾಯಕ್ಕೆ ಮಾನ್ಯತೆ ನೀಡಬೇಕೆಂಬ ಆಧಾರದ ಮೇಲೆ ಅವರಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿತ್ತು. ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಕಾರಜೋಳ ಬಾಗಲಕೋಟೆ ಜಿಲ್ಲೆಯನ್ನು ಬಿಟ್ಟು ಚಿತ್ರದುರ್ಗ ಜಿಲ್ಲೆಗೆ ವಲಸೆ ಬಂದು ಮ್ಯಾಜಿಕ್ ಮಾಡಿದ್ದು, ಅವರೀಗ ರಾಜಕೀಯವಾಗಿ ಪುನರ್ಜನ್ಮ ಪಡೆದಿದ್ದಾರೆ.
ಕಾಂಗ್ರೆಸ್ನ ಬಿ.ಎನ್.ಚಂದ್ರಣ್ಣ ವಿರುದ್ಧ 48,121 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದು, ರಾಜಕೀಯವಾಗಿ ಇದೇ ಮೊದಲ ಬಾರಿಗೆ ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟು ಮರುಜನ್ಮ ಪಡೆದಿದ್ದಾರೆ.
- ವಿ.ಸೋಮಣ್ಣ :- 2023 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎರಡೆರಡು ವಿಧಾನಸಭಾ ಕ್ಷೇತ್ರಗಳಲ್ಲಿ ಕಣಕ್ಕಿಳಿದು, ಎರಡು ಕ್ಷೇತ್ರಗಳಲ್ಲಿ ಸೋಲು ಕಂಡಿದ್ದ ವಿ.ಸೋಮಣ್ಣ ರಾಜಕೀಯವಾಗಿ ಈಗ ಮರುಜನ್ಮ ಪಡೆದಿದ್ದಾರೆ. 2023 ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ಹಾಗೂ ಚಾಮರಾಜನಗರ ಜಿಲ್ಲೆಯ ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅವರು ಕಣಕ್ಕಿಳಿದಿದ್ರು. ಅಂದು ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 8-10 ಸಾವಿರ ಮತಗಳ ಅಂತರದಿಂದ ವಿ.ಸೋಮಣ್ಣ ಕಾಂಗ್ರೆಸ್ನ ಪುಟ್ಟರಂಗಶೆಟ್ಟಿ ವಿರುದ್ಧ ಸೋಲುಂಡಿದ್ದು, ವರುಣಾ ಕ್ಷೇತ್ರದಲ್ಲಿ ಅವರು ಎದುರಿಸಿದ್ದು, ಇಂದಿನ ಸಿಎಂ ಸಿದ್ಧರಾಮಯ್ಯರನ್ನ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 40 ಸಾವಿರ ಮತಗಳ ಅಂತರದಿಂದ ವಿ.ಸೋಮಣ್ಣ ಪರಾಭವಗೊಂಡಿದ್ರು.
ಇಂದು ಬದಲಾದ ರಾಜಕೀಯ ಸನ್ನಿವೇಶದಲ್ಲಿ, ವಿ.ಸೋಮಣ್ಣರ ಕೈ ಬಿಡದ ಬಿಜೆಪಿ ಹೈಕಮಾಂಡ್ ನಾಯಕರು, ಅವರಿಗೆ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಿದ್ರು. ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್ನ ಮಾಜಿ ಸಂಸದ, ಒಕ್ಕಲಿಗ ಸಮುದಾಯಕ್ಕೆ ಸೇರಿದ ಎಸ್.ಪಿ. ಮುದ್ದುಹನುಮೇಗೌಡರನ್ನು ಎದುರಿಸದ ವಿ.ಸೋಮಣ್ಣ, ಬರೋಬ್ಬರಿ 1,75,594 ಮತಗಳ ಅಂತರದಿಂದ ಲೋಕಸಭೆಗೆ ಪ್ರವೇಶ ಪಡೆದಿದ್ದು, ರಾಷ್ಟ್ರ ರಾಜಕಾರಣದಲ್ಲಿ ಪುನರ್ಜನ್ಮ ಪಡೆದಿದ್ದಾರೆ.
- ವಿಶ್ವೇಶ್ವರ ಹೆಗಡೆ ಕಾಗೇರಿ :- 2023 ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ವಿಧಾನಸಭಾ ಕ್ಷೇತ್ರದಿಂದ 7 ನೇ ಬಾರಿಗೆ ಆಯ್ಕೆ ಬಯಸಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ 9 ಸಾವಿರ ಮತಗಳ ಅಂತರದಿಂದ ಮೊದಲ ಬಾರಿಗೆ ಪರಾಭವಗೊಂಡಿದ್ರು. ಬಳಿಕ ಅವರು ರಾಷ್ಟ್ರ ರಾಜಕಾರಣದಲ್ಲಿ ಅವಕಾಶ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ರು. ಅದೇ ರೀತಿಯಲ್ಲಿ ಹಾಲಿ ಸಂಸದರಾಗಿದ್ದ ಅನಂತ್ಕುಮಾರ್ ಹೆಗಡೆಗೆ ಕೊಕ್ ಕೊಟ್ಟ ಬಿಜೆಪಿ ಹೈಕಮಾಂಡ್ ನಾಯಕರು, ವಿಶ್ವೇಶ್ವರ ಹೆಗಡೆ ಕಾಗೇರಿಗೆ ಮಣೆ ಹಾಕಿದ್ರು. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಬ್ರಾಹ್ಮಣ ಸಮುದಾಯದ ಕಾಗೇರಿ, ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳಿಗಿಂತ ಅತಿ ಹೆಚ್ಚು ಅಂತರ ಅಂದರೆ ಬರೋಬ್ಬರಿ 3,37,428 ಮತಗಳ ಅಂತರದಿಂದ ಕಾಂಗ್ರೆಸ್ನ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರನ್ನು ಮಣಿಸಿ ರಾಷ್ಟ್ರ ರಾಜಕಾರಣದಲ್ಲಿ ಪುನರ್ಜನ್ಮ ಪಡೆದಿದ್ದಾರೆ.
- ಡಾ.ಕೆ.ಸುಧಾಕರ್ :- 2023 ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು, ಕಾಂಗ್ರೆಸ್ನ ಅಭ್ಯರ್ಥಿ ಪ್ರದೀಪ್ ಈಶ್ವರ್ ವಿರುದ್ಧ 10 ಸಾವಿರ ಮತಗಳ ಅಂತರದಿಂದ ಸೋಲುಂಡಿದ್ದ ಡಾ.ಕೆ.ಸುಧಾಕರ್, ಇದೀಗ ರಾಜಕೀಯವಾಗಿ ಪುನರ್ಜನ್ಮ ಪಡೆದಿದ್ದಾರೆ. ಪ್ರಬಲ ವಿರೋಧದ ನಡುವೆಯೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ ಸುಧಾಕರ್, ಕಾಂಗ್ರೆಸ್ನ ರಕ್ಷಾ ರಾಮಯ್ಯರನ್ನು ಬರೋಬ್ಬರಿ 1,63,460 ಮತಗಳ ಅಂತರದಿಂದ ಹಿಂದಿಕ್ಕಿ, ಮೊದಲ ಬಾರಿಗೆ ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿ ಕೊಡುವ ಮೂಲಕ ರಾಜಕೀಯವಾಗಿ ಪುನರ್ಜನ್ಮ ಪಡೆದಿದ್ದಾರೆ.
ಹೀಗೆ ಐವರು ಬಿಜೆಪಿ ನಾಯಕರುಗಳು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮರುಜನ್ಮ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.