ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ನೇತೃತ್ವದಲ್ಲಿ ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಹೊಸ ತಂಡವನ್ನು ಪ್ರಕಟಿಸಲಾಗಿದೆ. ಮುಂಬರುವ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಅನುಭವಿ ಹಾಗೂ ಯುವ ನಾಯಕರಿಗೆ ಸಮಾನ ಅವಕಾಶ ನೀಡುವ ರೀತಿಯಲ್ಲಿ ಬಿಜೆಪಿ ತನ್ನ ಹೊಸ ತಂಡವನ್ನು ರಚಿಸಿಕೊಂಡಿದೆ.

ಹೊಸ ಪಟ್ಟಿಯಲ್ಲಿ 13 ರಾಷ್ಟ್ರೀಯ ಉಪಾಧ್ಯಕ್ಷರು, 8 ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, 16 ರಾಷ್ಟ್ರೀಯ ಕಾರ್ಯದರ್ಶಿಗಳು ಸೇರಿದಂತೆ ಹಲವು ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಈ ಬಾರಿ ಮಹಿಳೆಯರಿಗೂ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗಿದೆ.

ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ, ಹಿರಿಯ ನಾಯಕ ರಾಮ್ ಮಾಧವ್ ಹಾಗೂ ಕರ್ನಾಟಕದ ರಾಜ್ಯಸಭಾ ಸದಸ್ಯ ಪ್ರೊ. ಎಂ. ನಾಗರಾಜ ಅವರಿಗೆ ರಾಷ್ಟ್ರೀಯ ಉಪಾಧ್ಯಕ್ಷರ ಜವಾಬ್ದಾರಿ ನೀಡಲಾಗಿದೆ. ಇನ್ನು ಬಿ.ಎಲ್. ಸಂತೋಷ್ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿದಿದ್ದಾರೆ.

ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು, ತ್ರಿಪುರದ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರಿಗೂ ಇದೇ ಜವಾಬ್ದಾರಿ ನೀಡಲಾಗಿದೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಪಕ್ಷದ ರಾಷ್ಟ್ರೀಯ ಖಜಾಂಚಿಯಾಗಿ ನೇಮಕ ಮಾಡಲಾಗಿದೆ.

ಬಿಜೆಪಿ ಯುವ ಮೋರ್ಚಾದಲ್ಲೂ ಬದಲಾವಣೆ ಮಾಡಲಾಗಿದ್ದು, ಸಂಸದ ತೇಜಸ್ವಿ ಸೂರ್ಯ ಅವರ ಸ್ಥಾನಕ್ಕೆ ಗುಜರಾತ್ ಮೂಲದ ಡಾ. ಹೇಮಾಂಗ್ ಜೋಶಿ ಅವರನ್ನು ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಇದೇ ವೇಳೆ, ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದಲ್ಲೂ ಬದಲಾವಣೆ ಮಾಡಲಾಗಿದ್ದು, ಈ ಹಿಂದೆ ಐಟಿ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ಪ್ರಮುಖರಾಗಿದ್ದ ಅಮಿತ್ ಮಾಳವೀಯ ಅವರ ಹೆಸರು ಹೊಸ ಪಟ್ಟಿಯಲ್ಲಿ ತೆಗೆದು ಹಾಕಲಾಗಿದ್ದು, ದೀಪಕ್ ಮಹಾಸ್ಕರೆ ಅವರಿಗೆ ಸಾಮಾಜಿಕ ಜಾಲತಾಣ ಸಂಚಾಲಕರ ಜವಾಬ್ದಾರಿ ನೀಡಲಾಗಿದೆ.







