ರಾಜ್ಯ ರಾಜಧಾನಿ ಬೆಂಗಳೂರಿನ ( Banglore ) ಹೃದಯ ಭಾಗ ಮೆಜೆಸ್ಟಿಕ್ ಬಸ್ ನಿಲ್ದಾಣದ ಅಭಿವೃದ್ಧಿಗೆ ಮತ್ತು ಆಧುನೀಕರಣಕ್ಕೆ ಬಜೆಟ್ನಲ್ಲಿ ಮಹತ್ವದ ಘೋಷಣೆ ಮಾಡಲಾಗಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ವಾಣಿಜ್ಯ ಸಂಕೀರ್ಣದೊಂದಿಗೆ ಸಾರಿಗೆ ಹಬ್ ಆಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಂಗಳೂರು: ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣದ ಜಾಗವನ್ನು ಪ್ರೊಜೆಕ್ಟ್ ಮೆಜೆಸ್ಟಿಕ್ (Project Majestic) ಯೋಜನೆಯ ಅಡಿ ಸರ್ಕಾರಿ ಖಾಸಗಿ ಸಹ ಭಾಗಿತ್ವದ (PPP Model) ಆಧಾರದ ಮೇಲೆ ಪುನರ್ ಅಭಿವೃದ್ಧಿಪಡಿಸಿ ವಾಣಿಜ್ಯ ಸಂಕೀರ್ಣದೊಂದಿಗೆ ಸಾರಿಗೆ ಹಬ್ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಬಜೆಟ್ನಲ್ಲಿ ಘೋಷಣೆ ಮಾಡಿದರು. ಇದರೊಂದಿಗೆ, ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಕಾಯಕಲ್ಪ ನೀಡಿ ಆಧುನೀಕರಣಗೊಳಿಸಲು ಸರ್ಕಾರ ಮುಂದಾದಂತಾಗಿದೆ.

ಬೆಂಗಳೂರು ಮಾತ್ರವಲ್ಲದೆ, ರಾಜ್ಯದ ಇತರ ಪ್ರಮುಖ ನಗರಗಳ ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲೂ ಬಜೆಟ್ನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಮೈಸೂರಿನ ಬನ್ನಿಮಂಟಪದಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣವನ್ನು ಒಟ್ಟಾರೆ 120 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದರು. ರಾಜ್ಯದ ವಿವಿಧ ಸಾರಿಗೆ ನಿಗಮಗಳಲ್ಲಿ 1000 ಹೊಸ ಡೀಸೆಲ್ ಬಸ್ಸುಗಳನ್ನು ಜಿಸಿಸಿ ಆಧಾರದಲ್ಲಿ ಸೇರ್ಪಡೆಗೊಳಿಸಲಾಗುವುದು ಎಂದು ಬಜೆಟ್ನಲ್ಲಿ ತಿಳಿಸಲಾಗಿದೆ.






