ತಮಿಳುನಾಡು ವಿಧಾನಸಭೆ ಚುನಾವಣೆಯ ಬಳಿಕ ರಾಜ್ಯ ರಾಜಕೀಯದಲ್ಲಿ ತೀವ್ರ ಚಟುವಟಿಕೆಗಳು ಆರಂಭವಾಗಿದ್ದು, ಇದೀಗ ‘ರಿಸಾರ್ಟ್ ಪಾಲಿಟಿಕ್ಸ್’ ಮತ್ತೆ ಚರ್ಚೆಗೆ ಬಂದಿದೆ. ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲ ಒಗ್ಗೂಡಿಸಲು ಪ್ರಯತ್ನಿಸುತ್ತಿರುವ ನಡುವೆ, ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ತಮಿಳುನಾಡಿನ 234 ಸದಸ್ಯರ ವಿಧಾನಸಭೆಯಲ್ಲಿ ಟಿವಿಕೆ 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ, ಸರಳ ಬಹುಮತಕ್ಕೆ ಇನ್ನೂ ಕೆಲವು ಸ್ಥಾನಗಳ ಅವಶ್ಯಕತೆ ಇದೆ. ಈ ಹಿನ್ನೆಲೆ ಕಾಂಗ್ರೆಸ್ ತನ್ನ ಐದು ಶಾಸಕರ ಬೆಂಬಲವನ್ನು ವಿಜಯ್ ಪಕ್ಷಕ್ಕೆ ನೀಡಿರುವುದಾಗಿ ವರದಿಯಾಗಿದೆ. ಇದನ್ನೇ ಗಮನದಲ್ಲಿಟ್ಟುಕೊಂಡು ಶಾಸಕರ ಖರೀದಿ ಅಥವಾ ಪಕ್ಷಾಂತರದ ಸಾಧ್ಯತೆಯನ್ನು ತಡೆಯಲು ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿನ ಖಾಸಗಿ ರಿಸಾರ್ಟ್ಗೆ ಸ್ಥಳಾಂತರಿಸಲಾಗಿದೆ ಎನ್ನಲಾಗುತ್ತಿದೆ. ಆದರೆ ಕಾಂಗ್ರೆಸ್ ಅಥವಾ ಪಕ್ಷದ ಹಿರಿಯ ನಾಯಕರು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ. ಕೆಲವು ರಾಷ್ಟ್ರೀಯ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಈ ಬೆಳವಣಿಗೆಗೆ ಸಂಬಂಧಿಸಿದ ವರದಿಗಳು ಹರಿದಾಡುತ್ತಿವೆ.

ಇದರ ನಡುವೆ ಎಐಎಡಿಎಂಕೆಯೂ ತನ್ನ ಶಾಸಕರನ್ನು ಪುದುಚೇರಿಯ ರಿಸಾರ್ಟ್ಗೆ ಕರೆದೊಯ್ದಿದ್ದು, ತಮಿಳುನಾಡಿನಲ್ಲಿ ರಾಜಕೀಯ ಅನಿಶ್ಚಿತತೆ ಹೆಚ್ಚಾಗಿದೆ. ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚನೆಗೆ ಮುಂದಾಗಿರುವ ಸಂದರ್ಭದಲ್ಲೇ ಈ ಎಲ್ಲಾ ರಾಜಕೀಯ ಬೆಳವಣಿಗೆಗಳು ಕುತೂಹಲ ಮೂಡಿಸಿವೆ.ರಾಜ್ಯಪಾಲರು ಇನ್ನೂ ಸರ್ಕಾರ ರಚನೆ ಕುರಿತ ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ಈ ನಡುವೆ ಕಾಂಗ್ರೆಸ್-ಡಿಎಂಕೆ ಮೈತ್ರಿ ಭಂಗ ಹಾಗೂ ಟಿವಿಕೆ ಬೆಂಬಲದ ಬೆಳವಣಿಗೆಗಳು ತಮಿಳುನಾಡಿನ ರಾಜಕೀಯ ಸಮೀಕರಣವನ್ನೇ ಬದಲಾಯಿಸುವ ಸೂಚನೆ ನೀಡುತ್ತಿವೆ.






