ಹರಿಯಾಣ : ಮೂರು ಅಂತಸ್ಥಿನ ರೈಸ್ ಮಿಲ್ ಕಟ್ಟಡ ಕುಸಿದು ನಾಲ್ವರು ಸಾವನ್ನಪ್ಪಿದ ಘಟನೆಯು ಹರಿಯಾಣದ ಕರ್ನಾಲ್ ಜಿಲ್ಲೆಯಲ್ಲಿ ಸಂಭವಿಸಿದೆ. ಈ ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕರ್ನಲ್ ಜಿಲ್ಲೆಯ ತಾರೋರಿ ಪಟ್ಟಣದ ಶಿವಶಕ್ತಿ ಅಕ್ಕಿ ಗಿರಣಿಯಲ್ಲಿ ಬೆಳಗ್ಗಿನ ಜಾವ ಮೂರು ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. 200 ಕಾರ್ಮಿಕರು ಮಲಗಿದ್ದ ಸಂದರ್ಭದಲ್ಲಿ ಕಟ್ಟಡದ ಮೇಲಿನ ಮಹಡಿಯ ಛಾವಣಿ ಕುಸಿದಿದ್ದು ಪರಿಣಾಮ ನಾಲ್ವರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.
ಕರ್ನಲ್ ಪೊಲೀಸ್ ಸೂಪರಿಂಟೆಂಡೆಂಟ್ ಶಶಾಂಕ್ ಕುಮಾರ್ ಸಾವನ್ ನೀಡಿರುವ ಮಾಹಿತಿಯ ಪ್ರಕಾರ, ಮೃತಪಟ್ಟವರೆಲ್ಲರೂ ವಲಸೆ ಕಾರ್ಮಿಕರು ಎನ್ನಲಾಗಿದೆ. ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆಯಲಾಗಿದೆ. ಗಾಯಗೊಂಡವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ .