ನವದೆಹಲಿ : ಬಿಹಾರದ ಪಾಟಲಿಪುತ್ರ ರೈಲು ನಿಲ್ದಾಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತೆರಳುತ್ತಿದ್ದ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಿದ್ದಾರೆ.

ರೈಲುಗಳ ಸಂಖ್ಯೆ ಕಡಿಮೆ, ಸಮಯಕ್ಕೆ ಸರಿಯಾಗಿ ರೈಲುಗಳು ಬಾರದ ಹಿನ್ನೆಲೆಯಲ್ಲಿ ಕೋಪಗೊಂಡ ಸಾವಿರಾರು ಅಭ್ಯರ್ಥಿಗಳು ಹಳಿಗಳಿಗೆ ಇಳಿದು ರೈಲು ಸಂಚಾರಕ್ಕೆ ಸಂಪೂರ್ಣವಾಗಿ ತಡೆಯೊಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳ ಹೋರಾಟ ವಿಕೋಪಕ್ಕೆ ತೆರಳಿ, ಕೆಲವರು ರೈಲುಗಳನ್ನು ಧ್ವಂಸಗೊಳಿಸಿ, ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು, ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ, ಗಾಳಿಯಲ್ಲಿ ಗುಂಡು ಹಾರಿಸಿ, ಲಾಠಿಚಾರ್ಜ್ ನಡೆಸುವ ಮೂಲಕ ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಟ್ಟಿದ್ದಾರೆ.

ಈ ಘಟನೆಯಲ್ಲಿ ಐಜಿಪಿ ಸೇರಿದಂತೆ ಹಲವಾರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. ಪಾಟ್ನಾದಲ್ಲಿ ಬಿಹಾರ ಪೊಲೀಸ್ ಇಲಾಖೆಯ ನೇಮಕಾತಿ ಪರೀಕ್ಷೆಗೆ ಹಾಜರಾಗಲು ಸಾವಿರಾರು ಅಭ್ಯರ್ಥಿಗಳು ತಯಾರಿ ನಡೆಸುತ್ತಿದ್ದರು. ಪರೀಕ್ಷೆಯನ್ನು ಎರಡು ಹಂತಗಳಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಜೂನ್ 13 ರ ಶನಿವಾರ ತಡರಾತ್ರಿಯಿಂದಲೇ ಪರೀಕ್ಷಾ ಕೇಂದ್ರಗಳನ್ನು ತಲುಪಲು ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ನಿಲ್ದಾಣದಲ್ಲಿ ಜಮಾಯಿಸಿದ್ದರು. ರೈಲ್ವೆ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ರೈಲುಗಳ ವ್ಯವಸ್ಥೆ ಮಾಡಿರಲಿಲ್ಲ, ಇದರಿಂದಾಗಿ ನಿಲ್ದಾಣದಲ್ಲಿ ಭಾರಿ ಜನಸಂದಣಿ ಉಂಟಾಗಿದೆ ಎಂದು ಅಭ್ಯರ್ಥಿಗಳು ಆರೋಪಿಸಿದ್ದಾರೆ.
ಇದನ್ನೂ ಓದಿ : ಮೋದಿ-ಟ್ರಂಪ್ ಭೇಟಿಯತ್ತ ವಿಶ್ವದ ಚಿತ್ತ ; ಫ್ರಾನ್ಸ್ನಲ್ಲಿ ಮಹತ್ವದ ರಾಜತಾಂತ್ರಿಕ ಬೆಳವಣಿಗೆ
ನಾವು ಕಾಯುತ್ತಿದ್ದ ರೈಲು ನಿರಂತರವಾಗಿ ವಿಳಂಬವಾಗುತ್ತಿತ್ತು. ಪಾಟಲಿಪುತ್ರದಿಂದ ಕಟಿಹಾರ್ಗೆ ತೆರಳುವ ವಿಶೇಷ ರೈಲು ಹತ್ತುವಾಗ ಗದ್ದಲ, ತಳ್ಳಾಟ ನೂಕಾಟ ಉಂಟಾಗಿ ಪರಿಸ್ಥಿತಿ ಕೈ ಮೀರಿ ಹೋಗಿತ್ತು. ಜನಸಂದಣಿಯಿಂದ ಕೋಪಗೊಂಡ ಅಭ್ಯರ್ಥಿಗಳು ರೈಲಿನ ಮುಂದೆ ಕುಳಿತು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇನ್ನೂ ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ವಿವಿಧ ಠಾಣೆಗಳ ಪೊಲೀಸರು ಹಾಗೂ ರೈಲ್ವೆ ಅಧಿಕಾರಿಗಳು ಪರಿಸ್ಥಿತಿಯ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಅಲ್ಲದೆ ದಾನಾಪುರದ ಉಪವಿಭಾಗಾಧಿಕಾರಿ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಇಬ್ಬರು ಸ್ಥಳಕ್ಕೆ ಆಗಮಿಸಿ ಅಭ್ಯರ್ಥಿಗಳನ್ನು ಸಮಾಧಾನಪಡಿಸಲು ಪ್ರಯತ್ನಿಸಿದ್ದಾರೆ. ಇದಕ್ಕೂ ತಣ್ಣಗಾಗದ ವಿದ್ಯಾರ್ಥಿಗಳು ರೈಲಿಗೆ ತಡೆಯೊಡ್ಡಲು ಮುಂದಾಗುತ್ತಾರೆ. ಇದು ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಲು ಕಾರಣವಾಗುತ್ತದೆ.
ಪರಿಸ್ಥಿತಿಯನ್ನು ನಿಯಂತ್ರಿಸಲು, ಪೊಲೀಸರು ಅಶ್ರುವಾಯು ಸಿಂಪಡಿಸಿ, ಎಚ್ಚರಿಕೆಯಾಗಿ ಗಾಳಿಯಲ್ಲಿ ಗುಂಡು ಹಾರಿಸಿದರು ಮತ್ತು ಗುಂಪನ್ನು ಚದುರಿಸಲು ಲಾಠಿ ಚಾರ್ಜ್ ಕೂಡ ಮಾಡಿದ್ದಾರೆ.

ಗಲಭೆಯ ಸಂದರ್ಭದಲ್ಲಿ ಐಜಿ ಜಿತೇಂದ್ರ ರಾಣಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪಾಟ್ನಾ ಜಿಲ್ಲೆಯ ರೂಪಾಸ್ಪುರ ಪೊಲೀಸ್ ಠಾಣೆಯ ಉಸ್ತುವಾರಿ ಕೂಡ ಸ್ವಲ್ಪ ಗಾಯಗೊಂಡಿದ್ದಾರೆ. ಐಜಿ ಜಿತೇಂದ್ರ ರಾಣಾ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಠಾಣೆಯಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ.
ರೈಲು ನಿಲ್ದಾಣದಲ್ಲಿನ ಸ್ಥಿತಿ ಕಂಡು ಬಲಪ್ರಯೋಗ ಮಾಡಿ ಗುಂಪನ್ನು ಚದುರಿಸಲಾಯಿತು, ಪರಿಸ್ಥಿತಿ ಈಗ ಸಂಪೂರ್ಣವಾಗಿ ಶಾಂತಿಯುತವಾಗಿದೆ ಮತ್ತು ನಿಯಂತ್ರಣದಲ್ಲಿದೆ ಎಂದು ಪಾಟ್ನಾ ಜಿಲ್ಲಾಧಿಕಾರಿ ಡಾ. ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ.






