ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸಂಸ್ಥೆಗಳಿಗೆ ಹೊಸದಾಗಿ ಆಯ್ಕೆಯಾದ 51,000ಕ್ಕೂ ಅಧಿಕ ಅಭ್ಯರ್ಥಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ನಡೆಯುತ್ತಿರುವ 20ನೇ ‘ರೋಜ್ಗಾರ್ ಮೇಳ’ದಲ್ಲಿ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.

ದೇಶಾದ್ಯಂತ ಒಟ್ಟು 45 ಸ್ಥಳಗಳಲ್ಲಿ ಈ ಬೃಹತ್ ಕಾರ್ಯಕ್ರಮ ನಡೆಯುತ್ತಿದ್ದು, ಪ್ರಧಾನಮಂತ್ರಿಯವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನೂತನ ನೌಕರರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೇಂದ್ರ ಸರ್ಕಾರದ ಕಂದಾಯ ಇಲಾಖೆ, ರೈಲ್ವೆ ಸಚಿವಾಲಯ, ಗೃಹ ವ್ಯವಹಾರಗಳ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ ಹಾಗೂ ರಕ್ಷಣಾ ಸಚಿವಾಲಯ ಸೇರಿದಂತೆ ಹಲವು ಪ್ರಮುಖ ವಿಭಾಗಗಳಿಗೆ ಈ ನೂತನ ಅಭ್ಯರ್ಥಿಗಳು ಸೇರ್ಪಡೆಗೊಳ್ಳಲಿದ್ದಾರೆ. ಪ್ರಧಾನಮಂತ್ರಿಯವರ ಈ ಮಹತ್ವಾಕಾಂಕ್ಷೆಯ ಯೋಜನೆ ಮೂಲಕ ಇಂದಿನ ಮೇಳದೊಂದಿಗೆ ಇದುವರೆಗೆ ಒಟ್ಟು 12.75 ಲಕ್ಷಕ್ಕೂ ಹೆಚ್ಚು ಯುವಕ-ಯುವತಿಯರಿಗೆ ಸರ್ಕಾರಿ ಉದ್ಯೋಗಗಳ ನೇಮಕಾತಿ ಪತ್ರಗಳನ್ನು ನೀಡಿದಂತಾಗುತ್ತದೆ.

ಈ ಅಭಿಯಾನದ ಭಾಗವಾಗಿ ಬಿಹಾರದ ಪಾಟ್ನಾದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದು, ಬಿಹಾರ ಸರ್ಕಾರದ ಸಚಿವ ರಾಮ್ ಕೃಪಾಲ್ ಯಾದವ್ ಹಾಗೂ ಶಾಸಕರು ಸಾಥ್ ನೀಡಲಿದ್ದಾರೆ. ಇತ್ತ ಮುಂಬೈನ ಬಾಂಬೆ ಹಾಸ್ಪಿಟಲ್ ಟ್ರಸ್ಟ್ನ ಬಿರ್ಲಾ ಮಾತೋಶ್ರೀ ಸಭಾಂಗಣದಲ್ಲಿ ಕೇಂದ್ರ ಕಂದಾಯ ಇಲಾಖೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವೆ ರಕ್ಷಾ ನಿಖಿಲ್ ಖಡ್ಸೆ ಉಪಸ್ಥಿತರಿರಲಿದ್ದಾರೆ.

ಕೇಂದ್ರ ಸರ್ಕಾರವು ದೇಶದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದರ ಜೊತೆಗೆ ಮಹಿಳಾ ಸಬಲೀಕರಣ ಹಾಗೂ ಲಿಂಗ-ಸಮಾನತೆಯ ಬೆಳವಣಿಗೆಗೂ ಒತ್ತು ನೀಡುತ್ತಿದ್ದು, ನೈಪುಣ್ಯ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದೆ. ಇದೇ ವೇಳೆ ಉದ್ಯೋಗಾಕಾಂಕ್ಷಿಗಳಿಗೆ ವೃತ್ತಿ ಮಾರ್ಗದರ್ಶನ ಹಾಗೂ ಸೇವೆಗಳನ್ನು ಒದಗಿಸಲು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ‘ರಾಷ್ಟ್ರೀಯ ವೃತ್ತಿ ಸೇವೆ’ ಪೋರ್ಟಲ್ ಅನ್ನು ಯಶಸ್ವಿಯಾಗಿ ನಡೆಸುತ್ತಿದ್ದರೆ, ಐಟಿ ವಲಯದ ಉದ್ಯೋಗಾಕಾಂಕ್ಷಿಗಳ ಕೌಶಲ್ಯ ಹೆಚ್ಚಿಸಲು ಮಾಹಿತಿ ತಂತ್ರಜ್ಞಾನ ಸಚಿವಾಲಯವು ‘ಫ್ಯೂಚರ್ಸ್ಕಿಲ್ಸ್ ಪ್ರೈಮ್’ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.






