ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಮತ್ತು ಶಹಬಾಜ್ ಅಹ್ಮದ್ ಭರ್ಜರಿ ಜೊತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 4 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ.
ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ರಾಜಸ್ಥಾನ್ ರಾಯಲ್ಸ್ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 169 ರನ್ ಗಳಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 5 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಆರ್ ಸಿಬಿ ತಂಡ ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ಅನುಜ್ ರಾವತ್ ಮೊದಲ ವಿಕೆಟ್ ಗೆ 55 ರನ್ ಪೇರಿಸಿ ಉತ್ತಮ ಆರಂಭ ಒದಗಿಸಿದರು. ಈ ಹಂತದಲ್ಲಿ ದಾಳಿಗಿಳಿದ ಮಾಜಿ ಆರ್ ಸಿಬಿ ಆಟಗಾರ ಯಜುರ್ವೆಂದ್ರ ಚಾಹಲ್ ಮಾರಕ ದಾಳಿಗೆ ತತ್ತರಿಸಿ 5 ವಿಕೆಟ್ ಕಳೆದುಕೊಂಡು ಕಂಗಲಾಯಿತು.
ಈ ಹಂತದಲ್ಲಿ 6ನೇ ವಿಕೆಟ್ ಗೆ ಜೊತೆಯಾದ ದಿನೇಶ್ ಕಾರ್ತಿಕ್ ಮತ್ತು ಶಹಬಾಜ್ ಅಹ್ಮದ್ 77 ರನ್ ಜೊತೆಯಾಟ ನಿಭಾಯಿಸಿ ತಂಡವನ್ನು ಆಧರಿಸಿದರು. ಶಹಬಾಜ್ 26 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ಸೇರಿದ 45 ರನ್ ಬಾರಿಸಿ ಔಟಾದರೆ, ದಿನೇಶ್ ಕಾರ್ತಿಕ್ 23 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 44 ರನ್ ಬಾರಿಸಿ ಔಟಾಗದೇ ಉಳಿದರು.
ರಾಜಸ್ಥಾನ್ ಪರ ಯಜುರ್ವೆಂದ್ರ ಚಾಹಲ್ ಮತ್ತು ಟ್ರೆಂಟ್ ಬೌಲ್ಟ್ ತಲಾ 2 ವಿಕೆಟ್ ಪಡೆದರು.