ಬೆಳಗಾವಿ: ಮೀಸಲಾತಿ ಹೆಚ್ಚಳಕ್ಕೆ ಕಾಂಗ್ರೆಸ್ಸನ ಪೂರ್ಣ ಬೆಂಬಲವಿದ್ದು, ರಾಜ್ಯ ಸರ್ಕಾರ ಸರ್ವಪಕ್ಷ ಸಭೆಯನ್ನ ಕರೆದು ಕೇಂದ್ರ ಸರ್ಕಾರದ ಬಳಿ ನಿಯೋಗ ತೆಗೆದುಕೊಂಡು ಹೋಗುವುದಾದರೆ ನಾವು ಬರುವುದಕ್ಕೆ ಸಿದ್ಧರಿದ್ದೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸಭಾ ಕಲಾಪದಲ್ಲಿ ಮೀಸಲಾತಿ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿಲ್ಲ. ಬಿಜೆಪಿ ಯಾವಾಗಲಾದರೂ ಮೀಸಲಾತಿ ಬೇಕು ಎಂದು ಹೋರಾಟ ಮಾಡಿದೆ? ಹಾಗೂ ಮಂಡಲ್ ಕಮಿಷನ್ ವರದಿಯನ್ನು ವಿರೋಧ ಮಾಡಿದವರು ಯಾರು? ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಸಂವಿಧಾನಕ್ಕೆ 73 ಹಾಗೂ 74ನೇ ತಿದ್ದುಪಡಿ ತಂದು ಹಿಂದುಳಿದವರು, ಮಹಿಳೆಯರು ಮತ್ತು ಅಲ್ಪಸಂಖ್ಯಾತರಿಗೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮೀಸಲಾತಿ ನೀಡಿದಾಗ ಅದನ್ನು ವಿರೋಧ ಮಾಡಿದವರು ಯಾರು? ಎಂದು ಪ್ರಶ್ನಿಸಿದರು.
ಆದರೆ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕು ಎಂಬುದಕ್ಕೆ ನಾವು ಬದ್ಧರಾಗಿದ್ದೇವೆ. ಇದೇ ಕಾರಣಕ್ಕೆ ನಾವು ನಾಗಮೋಹನ್ ದಾಸ್ ಅವರ ಸಮಿತಿ ರಚನೆ ಮಾಡಿದ್ದು. ಈ ವರ್ಗದ ಜನರಿಗೆ ಮೀಸಲಾತಿ ನೀಡಲೇಬೇಕು ಆದರೆ ಇದು ಸುಪ್ರೀಂ ಕೋರ್ಟ್ ನ ತೀರ್ಪಿನ ಉಲ್ಲಂಘನೆಯಾಗುತ್ತದೆ. ಮೀಸಲಾತಿ ಹೆಚ್ಚಳ ಊರ್ಜಿತವಾಗಬೇಕಾದರೆ ಸಂಸತ್ತಿನಲ್ಲಿ ಸಂವಿಧಾನ ತಿದ್ದುಪಡಿ ಆಗಬೇಕು. ಸಂವಿಧಾನದ 9ನೇ ಶೇಡ್ಯೂಲ್ ಗೆ ಸೇರಿಸಬೇಕು. ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮಾಡಿದ ಕೂಡಲೇ, ಕಾನೂನು ತಂದ ಕೂಡಲೇ ಇದು ಸಂವಿಧಾನಬದ್ಧವಾಗಲ್ಲ ಎಂದರು.

ಅಲ್ಲದೇ ನಮ್ಮದು ಡಬ್ಬಲ್ ಇಂಜಿನ್ ಸರ್ಕಾರ ಎಂದು ಹೇಳುವ ಬಿಜೆಪಿ ನಾಯಕರೊಂದಿಗೆ ನಾವು ದೆಹಲಿಗೆ ಬರುತ್ತೇವೆ. ನಾವು ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸುವಂತೆ ಒತ್ತಾಯ ಮಾಡೋಣ. ಮೀಸಲಾತಿ ಹೆಚ್ಚಳಕ್ಕೆ ಕಾಂಗ್ರೆಸ್ನ ಪೂರ್ಣ ಬೆಂಬಲವಿದ್ದು, ನೀವು ಸರ್ವಪಕ್ಷ ಸಭೆ ಕರೆದು ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗುವುದಾದರೆ ನಾವು ಸಿದ್ಧರಿದ್ದೇವೆ. ಮೀಸಲಾತಿ ಹೆಚ್ಚಳ ಆಗಬೇಕು ಎಂಬುದು ನಮ್ಮ ಕಳಕಳಿ. ನಾವು ಮೀಸಲಾತಿ ಪರವಾಗಿದ್ದೇವೆ ಎಂಬುದನ್ನು ಮತ್ತೊಮ್ಮೆ ಹೇಳಲು ಬಯಸುತ್ತೇನೆ. ಅಲ್ಲದೇ ಈಗ ಸಂಸತ್ ಅಧಿವೇಶನ ನಡೆಯುತ್ತಿದ್ದು, ಅಲ್ಲಿ ಸಂವಿಧಾನ ತಿದ್ದುಪಡಿ ಮಸೂದೆ ಪಾಸ್ ಮಾಡದೆ ಹೋದರೆ ಮೀಸಲಾತಿ ಹೆಚ್ಚಳಕ್ಕೆ ಸಂವಿಧಾನಾತ್ಮಕ ರಕ್ಷಣೆ ಸಿಗುವುದಿಲ್ಲ. ಕೇಂದ್ರ ಸರ್ಕಾರ ಇದಕ್ಕೆ ಒಪ್ಪದೇ ಹೋದರೆ ಸರ್ವ ಪಕ್ಷಗಳ ನಿಯೋಗವನ್ನು ತೆಗೆದುಕೊಂಡು ಹೋಗಿ ನಾವು ನಿಮ್ಮೊಂದಿಗೆ ಬರುತ್ತೇವೆ. ಈ ಅಧಿವೇಶನದ ಸಮಯದಲ್ಲೇ ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸುವ ಕೆಲಸ ಆಗಲಿ ಎಂದರು.






