ಬೆಂಗಳೂರಿನಲ್ಲಿ ಶಿವಕುಮಾರ್ ಸ್ವಾಮೀಜಿ ಅವರ ಪುತ್ಥಳಿಯನ್ನು ವಿರೂಪಗೊಳಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀಕೃಷ್ಣ ಎಂಬಾತ ಕ್ರೈಸ್ತ ಧರ್ಮದ ಪ್ರಭಾವಕ್ಕೆ ಒಳಗಾಗಿದ್ದು, ಯೇಸು ಕ್ರಿಸ್ತನ ಕನಸಿನಿಂದಾಗಿ ಈ ಕೃತ್ಯ ಎಸಗಿದೆ ಎಂದು ಹೇಳಿಕೆ ನೀಡಿದ್ದಾನೆ.

ಬೆಂಗಳೂರಿನ ಗಿರಿನಗರದ ವೀರಭದ್ರನಗರ ಬಸ್ ನಿಲ್ದಾಣ ಹತ್ತಿರದ ಶಿವಕುಮಾರ್ ಸ್ವಾಮೀಜಿಯರ ಪುತ್ಥಳಿಯನ್ನು ವಿರೂಪಗೊಳಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯು ಐದು ವರ್ಷಗಳ ಹಿಂದೆ ಪ್ರತಿಷ್ಠಾಪಿಸಿತ್ತು.
ನವೆಂಬರ್ 30ರ ತಡರಾತ್ರಿ 1:30ರ ಸುಮಾರಿಗೆ ಶಿವಕುಮಾರ್ ಸ್ವಾಮೀಜಿ ಅವರ ಪುತ್ಥಳಿ ವಿರೂಪಗೊಳಿಸಿರುವುದನ್ನು ಖಂಡಿಸಿ ಸ್ಥಳೀಯರು ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ಸದಸ್ಯರು ಪ್ರತಿಭಟನೆ ನಡೆಸಿದ್ದರು.
ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಗಿರಿನಗರ ಠಾಣೆ ಪೊಲೀಸರು, ದೂರು ಸ್ವೀಕರಿಸಿದ ಬಳಿಕ ಸ್ಥಳ ಪರಿಶೀಲನೆ ನಡೆಸಿದರು. ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಆರೋಪಿ ಶ್ರೀಕೃಷ್ಣನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶ್ರೀಕೃಷ್ಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದನು ಎನ್ನಲಾಗಿದೆ. ಆತನ ಆರೋಗ್ಯ ತಪಾಸಣೆ ನಡೆಸಲಾಗಿದೆ ಕ್ರೈಸ್ತ ಧರ್ಮದ ಪ್ರಭಾವಕ್ಕೆ ಒಳಗಾಗಿ ಮೂರು ವರ್ಷಗಳಿಂದ ಆ ಧರ್ಮವನ್ನು ಪಾಲಿಸುತ್ತಿದ್ದನು. ಆರೋಪಿ ವಿರುದ್ಧ ಬಿಎನ್ಎಸ್ 324 (4) ಸೆಕ್ಷನ್ ಅಡಿಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.