ಚುನಾವಣೆಗೆ ಎರಡೇ ವಾರಗಳು ಬಾಕಿ ಇರುವಾಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಮ್ಮ ಪಕ್ಷದ ಚುನಾವಣಾ ಏಜಂಟರುಗಳಿಗೆ ಹಾಗೂ ಅಭ್ಯರ್ಥಿ, ಮುಖಂಡರುಗಳಿಗೆ ಬರೆದಿರುವ ಪತ್ರ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಯಾವ್ಯಾವ ಮತಗಟ್ಟೆಗಳನ್ನು ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಎಂದು ಘೋಷಿಸಬೇಕು? ಯಾವ ಭಾಗಗಳಲ್ಲಿ ಕೇಂದ್ರ ಸೇನಾ ಪಡೆಗಳು, ಅರೆಸೇನಾ ತುಕಡಿಗಳನ್ನು ನಿಯೋಜಿಸಬೇಕು? ಯಾವ್ಯಾವ ಮತಗಟ್ಟೆಗಳಿಗೆ ವೆಬ್ ಕ್ಯಾಸ್ಟಿಂಗ್ ಮತ್ತು ವೀಡಿಯೋ ರೆಕಾರ್ಡಿಂಗ್ ಸೇವೆ ಅಗತ್ಯವಿದೆ ಎಂಬುದನ್ನು ಪಟ್ಟಿ ಮಾಡಿ ಕೂಡಲೇ ಪಕ್ಷದ ಐಟಿ ಸೆಲ್ ಗೆ ಮೇಲ್ ಮಾಡುವಂತೆ ಶೋಭಾ ಪತ್ರದಲ್ಲಿ ಹೇಳಿದ್ದಾರೆ.
ಈ ಪತ್ರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ಹೊರ ಹಾಕಿದ್ದು, “ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ?” ಎಂದು ಪ್ರಶ್ನಿಸಿದ್ದಾರೆ.
“ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ? ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ? ತಮ್ಮ ಪಕ್ಷದ ಪರವಾಗಿಲ್ಲದ ಮತದಾರರು ಇರುವ ಮತಗಟ್ಟೆಗಳಲ್ಲಿ ಭದ್ರತೆಯ ನೆಪದಲ್ಲಿ ಕೇಂದ್ರ ಸೇನಾಪಡೆಗಳನ್ನು ನಿಯೋಜಿಸಿ ಮತದಾರರನ್ನು ಬೆದರಿಸಿ ಅವರು ಮತದಾನ ಮಾಡದಂತೆ ತಡೆಯುವುದು ಈ ಪತ್ರದ ದುರುದ್ದೇಶವಾಗಿದೆ” ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಚುನಾವಣಾ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮತ್ತು ವಿಡಿಯೋ ರೆಕಾರ್ಡಿಂಗ್ ಮಾಡುವ ಹೊಣೆ ಚುನಾವಣಾ ಆಯೋಗದಲ್ಲವೇ? ಇದನ್ನು ನಡೆಸಲು ರಾಜಕೀಯ ಪಕ್ಷಕ್ಕೆ ಅನುಮತಿ ಕೊಟ್ಟವರು ಯಾರು? ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯ, “ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಈ ಪತ್ರ ಬರೆದಿರುವುದನ್ನು ನೋಡಿದರೆ ಕೇಂದ್ರ ಸರ್ಕಾರವೇ ಈ ಅಕ್ರಮ ಚಟುವಟಿಕೆಯಲ್ಲಿ ಷಾಮೀಲಾಗುರುವುದು ಸ್ಪಷ್ಟವಾಗಿದೆ. ಕೇಂದ್ರ ಚುನಾವಣಾ ಆಯುಕ್ತರು ತಕ್ಷಣ ಮಧ್ಯೆಪ್ರವೇಶಿಸಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ವಿಚಾರಣೆಗೊಳಪಡಿಸಿ ಅವರು ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ನಿಷೇಧಿಸಬೇಕು. ಅವರು ಪಕ್ಷದ ನಾಯಕರು ಮತ್ತು ಅಭ್ಯರ್ಥಿಗಳಿಂದ ಪಡೆದಿರುವ ಮಾಹಿತಿಯನ್ನು ವಶಕ್ಕೆ ಪಡೆಯಬೇಕು” ಎಂದು ಆಗ್ರಹಿಸಿದ್ದಾರೆ.
ಅದಾಗ್ಯೂ, ಶೋಭಾ ಬರೆದಿರುವ ಪತ್ರವನ್ನು ಸಿಎಂ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮರ್ಥಿಸಿದ್ದಾರೆ. ಕಾಂಗ್ರೆಸ್ ಪುಂಡಾಟಿಕೆ ತಡೆಯಲು ನಾವು ನಮ್ಮ ಕರ್ತವ್ಯ ಮಾಡುತ್ತಿದ್ದೇವೆ. ಇದರಲ್ಲೇನು ತಪ್ಪು ಎಂದು ಪ್ರಶ್ನೆ ಮಾಡಿದ್ದಾರೆ.
ಶೋಭಾ ಕರಂದ್ಲಾಜೆ ಕೂಡಾ ತಮ್ಮ ಪತ್ರವನ್ನು ಸಮರ್ಥಿಸಿಕೊಂಡಿದ್ದು, ಸೂಕ್ಷ್ಮ ಅತಿಸೂಕ್ಷ್ಮ ಬೂತ್ಗಳನ್ನು ಆಯೋಗ ಪಟ್ಟಿ ಮಾಡುತ್ತದೆ. ವರುಣಾ, ಕನಕಪುರ ಸೇರಿ ಬೇರೆ ಬೇರೆ ಜಿಲ್ಲೆಗಳಲ್ಲಿ ಸೂಕ್ಷ್ಮ ಬೂತ್ಗಳಿವೆ. ಬಿಜೆಪಿ ಪ್ರಬಲವಲ್ಲದ ಕಡೆ ನಮ್ಮ ಕಾರ್ಯಕರ್ತರಿಗೆ ಕೆಲಸ ಮಾಡಲು ಬಿಡುವುದಿಲ್ಲ. ಹೀಗಾಗಿ ಇಂತಹ ಬೂತ್ಗಳ ಮಾಹಿತಿ ಕೊಡಲು ಮತ್ತು ಭದ್ರತೆ ಹೆಚ್ಚಿಸಲು ಮನವಿ ಮಾಡಿದೆ. ಹಿಂದಿನ ಚುನಾವಣೆಯಲ್ಲಿ ಮನವಿ ಮಾಡಿದ್ದೆವು. ಈಗಲೂ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.