ಗುಜರಾತ್-ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಎಎಪಿ ವಿರುದ್ದ ಹರಿಹಾಯ್ದಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಹೆಚ್ಚಿನ ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷ ಕಾಂಗ್ರೆಸ್ ಮತಗಳನ್ನು ಕಬಳಿಸಿರುವುದರಿಂದ ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂದು ಆರೋಪಿಸಿದ್ದಾರೆ.
ನನಗಿದ್ದ ಮಾಹಿತಿ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಇದೆ ಮತ್ತು ಗುಜರಾತ್ ನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬುದಾಗಿತ್ತು. ಗುಜರಾತ್ ನಲ್ಲಿ ಬಿಜೆಪಿ ಗೆದ್ದಿರುವುದರಲ್ಲಿ ಆಶ್ಚರ್ಯ ಇಲ್ಲ, ಆಮ್ ಆದ್ಮಿ ಪಕ್ಷದವರು ಸ್ಪರ್ಧೆ ಮಾಡಿ, ನಮ್ಮ ಮತಗಳನ್ನು ಪಡೆದುಕೊಂಡಿದ್ದಾರೆ, ಬಹುತೇಕ ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷ ನಮ್ಮ ಮತಗಳನ್ನೇ ಕಬಳಿಸಿದೆ ಎಂದು ಕಿಡಿಕಾರಿದ್ದಾರೆ.

ಇದರಿಂದ ಗುಜರಾತ್ ನಲ್ಲಿ ಹಿನ್ನಡೆಯಾಗಿದೆ ಆದರೆ ಹಿಮಾಚಲ ಪ್ರದೇಶದಲ್ಲಿ ಈ ರೀತಿ ಆಗಿಲ್ಲ. ಕಾಂಗ್ರೆಸ್ ಪಕ್ಷ ಮುನ್ನಡೆಯಲ್ಲಿದೆ, ಹಾಗೆಯೇ ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಒಂದು ರಾಜ್ಯದ ಚುನಾವಣಾ ಫಲಿತಾಂಶ ಇನ್ನೊಂದು ರಾಜ್ಯದ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರಲ್ಲ. ಹಾಗೆ ಯೋಚಿಸುವುದಾದರೆ ದೆಹಲಿಯ ಪಾಲಿಕೆ ಚುನಾವಣೆಯ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪ್ರಭಾವ ಬೀರುತ್ತಾ? ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರದ ಚುನಾವಣೆಯ ಫಲಿತಾಂಶ ಬೇರೆ ಕಡೆ ಪ್ರಭಾವ ಬೀರುತ್ತದಾ? ಆಯಾ ರಾಜ್ಯದ ಸಮಸ್ಯೆಗಳು ಮತ್ತು ಸ್ಥಳೀಯ ವಿಚಾರಗಳ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ ಎಂದು ಹೇಳಿದ್ದಾರೆ.
ನಮ್ಮ ರಾಜ್ಯದಲ್ಲಿ ಅತೀ ಭ್ರಷ್ಟ ಸರ್ಕಾರವಿದೆ, ಇಲ್ಲಿ ಕಾಂಗ್ರೆಸ್ ಪಕ್ಷ ಸಂಘಟನಾ ದೃಷ್ಟಿಯಿಂದ ಹೆಚ್ಚು ಶಕ್ತಿಶಾಲಿಯಾಗಿದೆ. ಹಾಗಾಗಿ ಬೇರೆ ರಾಜ್ಯಗಳ ಫಲಿತಾಂಶ ಇಲ್ಲಿನ ಚುನಾವಣೆಯ ಮೇಲೆ ಯಾವ ಪ್ರಭಾವ ಬೀರಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದಲ್ಲಿ ಜೆಡಿಎಸ್ನೊಂದಿಗೆ ಬಿಜೆಪಿ ತಂತ್ರಗಾರಿಕೆ ಮಾಡಬಹುದು. ಆದರೆ ಅದು ನಡೆಯಲ್ಲ. ಕರ್ನಾಟಕದ ಆಡಳಿತ ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ಗುಜರಾತ್ನಲ್ಲಿ 40% ಸರ್ಕಾರ ಇತ್ತು ಎಂದು ಯಾರಾದರೂ ಹೇಳಿದ್ರಾ? ಕರ್ನಾಟಕದ್ದು ಹೇಳಿದ್ರಾ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಅಷ್ಟು ದುಡ್ಡ ಖರ್ಚು ಮಾಡಿದರೂ ಎಎಪಿ 6 ಸ್ಥಾನ ಪಡೆದಿದ್ದು, ಎಎಪಿಯಿಂದಾಗಿ ಮತ ವಿಭಜನೆ ಆಗಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸುಮ್ಮನೆ ಇದ್ದರು ಗೆಲ್ಲುತ್ತೆ. ನಾವು ಏನೂ ತಂತ್ರಗಾರಿಕೆ ಮಾಡುವುದೆ ಬೇಡ, ಮೋದಿ ಹವಾ ಎಲ್ಲೂ ಇಲ್ಲ. ಹವಾ ಇದ್ದಿದ್ದರೆ ದೆಹಲಿಯಲ್ಲೇ ಯಾಕೆ ಸೋಲ್ತಿದ್ದರು ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದದ ಕುರಿತಂತೆ ಮಾತನಾಡಿದ ಸಿದ್ದರಾಮಯ್ಯ, ಮಹಾರಾಷ್ಟ್ರದವರಿಗೆ ಪ್ರಧಾನಿಯಿಂದ ಬುದ್ದಿ ಹೇಳಿಸುವ ಧೈರ್ಯ ಕರ್ನಾಟಕದ ಬಿಜೆಪಿಗೆ ಇಲ್ಲ. ಕರ್ನಾಟಕದ ಬಿಜೆಪಿ ನಾಯಕರು ಹೇಡಿಗಳು. ಎರಡು ಕಡೆಗಳಲ್ಲಿ ಬಿಜೆಪಿ ಸರ್ಕಾರ ಇದ್ದರೂ, ಗಡಿಯಲ್ಲಿ ಏಕೆ ಗಲಾಟೆ ನಡೆಯುತ್ತಿದೆ? ಎಂದು ಕಿಡಿಕಾರಿದ್ದಾರೆ.
ಇಬ್ಬರು ಮಾತಾಡಿಕೊಂಡೆ ಈ ಪುಂಡಾಟಿಕೆ ನಡೆಸಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವಂತೆ ಮಾಡುತ್ತಿದ್ದಾರಾ? ಎಂಬ ಬಗ್ಗೆ ಅನುಮಾನ ವ್ಯಕ್ತಪಡಿಸಿದರು. ಅಲ್ಲದೇ ಗಡಿ ವಿವಾದದ ಬಗ್ಗೆ ಒಳ್ಳೆಯ ಲಾಯರ್ ಇಟ್ಟು ವಾದ ಮಾಡಿಸಬೇಕು. ಸಿಎಂ, ಪ್ರಧಾನಿಗಳ ಬಳಿಗೆ ಹೋಗಿ ನೈಜ ಸ್ಥಿತಿ ವಿವರಿಸಿ ಪರಿಸ್ಥಿತಿ ನಿಯಂತ್ರಿಸಬೇಕು ಎಂದ ಅವರು, ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದದಲ್ಲಿ ಮಹಾಜನ್ ವರದಿ ಅಂತಿಮವಾಗಿದ್ದು, ಬೆಳಗಾವಿ ನಮ್ಮದ್ದು. ಒಂದಿಂಚೂ ಜಾಗವನ್ನ ಯಾರಿಗೂ ಬಿಟ್ಟು ಕೊಡುವ ಪ್ರಶ್ನೆ ಇಲ್ಲ ಎಂದು ಪ್ರತಪಾದಿಸಿದ್ದಾರೆ.