ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಉಂಟಾದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ನಂತರ, ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅವರನ್ನು ನೇಮಕ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಈ ನಿರ್ಧಾರವನ್ನು ಕಾಂಗ್ರೆಸ್ ನಾಯಕರು ಟೀಕಿಸಿದ್ದಾರೆ.

ಕರ್ನಾಟಕದ ಸಂಸದರೊಬ್ಬರು ದೇಶದ ಶಿಕ್ಷಣ ಸಚಿವರಾದರೆಂದು ನಾವೆಲ್ಲರೂ ಹೆಮ್ಮೆ ಪಡಬೇಕಾಗಿತ್ತು, ಆದರೆ ನರೇಂದ್ರ ಮೋದಿ ಅವರು ಮಹಿಳೆಯ ಅತ್ಯಾಚಾರಿಗಳನ್ನು ಸಮರ್ಥಿಸಿದ್ದ ಸಂಸದ ಪ್ರಹ್ಲಾದ್ ಜೋಶಿ ಅವರನ್ನು ಶಿಕ್ಷಣ ಸಚಿವನನ್ನಾಗಿ ಮಾಡಿ ಕನ್ನಡಿಗರೆಲ್ಲರೂ ತಲೆತಗ್ಗಿಸುವ ಹಾಗೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ನಿರ್ಗಮಿತ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗಿಂತ ಪ್ರಹ್ಲಾದ್ ಜೋಷಿ ಅವರು ಯಾವುದೇ ರೀತಿ ಭಿನ್ನರಲ್ಲ, ಇವರಿಬ್ಬರೂ ಸೈದ್ಧಾಂತಿಕವಾಗಿ ಅವಳಿ-ಜವಳಿಗಳು. ಇಬ್ಬರೂ ಸಂಘ ಪರಿವಾರದ ಎಬಿವಿಪಿಯಿಂದ ಪಕ್ಷಕ್ಕೆ ಬಂದವರು. ಮಹಿಳೆಯರು, ದಲಿತರು, ಬಡವರು, ಹಿಂದುಳಿದ ಜಾತಿಗಳು ಮತ್ತು ಮುಸ್ಲಿಂ – ಕ್ರಿಶ್ಚಿಯನರ ಬಗ್ಗೆ ಆರ್.ಎಸ್.ಎಸ್ ಹೊಂದಿರುವ ಅಭಿಪ್ರಾಯವನ್ನೇ ಹೊಂದಿದವರು. ಇದಕ್ಕಾಗಿಯೇ ಪ್ರಧಾನ್ ಅವರ ಸ್ಥಾನಕ್ಕೆ ಜೋಷಿ ಅವರನ್ನು ತಂದು ಕೂರಿಸಲಾಗಿದೆ. ಇದೊಂದು ರೀತಿ ಊದುವುದನ್ನು ಕೊಟ್ಟು ಬಾರಿಸುವುದನ್ನು ಕೊಂಡು ಬಂದಂತೆ. ಬದಲಾಗಿದ್ದು ಪಾತ್ರಧಾರಿ ಅಷ್ಟೆ, ಸೂತ್ರಧಾರಿಗಳಾದ ಆರ್.ಎಸ್.ಎಸ್ ನ ನಿರ್ದೇಶನದಂತೆ ಇವರೂ ನಡೆದುಕೊಳ್ಳಬೇಕಾಗುತ್ತದೆ.

ಗುಜರಾತ್ ಗಲಭೆಯ ಕಾಲದಲ್ಲಿ ಬಿಲ್ಕಿಸ್ ಭಾನು ಎಂಬ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರಿಗಳನ್ನು 2022ರಲ್ಲಿ ಗುಜರಾತ್ ಸರ್ಕಾರ ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿದ್ದನ್ನು ಪ್ರಹ್ಲಾದ ಜೋಷಿ ಅವರು ಸಮರ್ಥಿಸಿ ಅತ್ಯಾಚಾರಿಗಳ ಪರವಾಗಿ ಮಾತನಾಡಿದ್ದರು. ಇಂತಹವರು ಶಿಕ್ಷಣ ಸಚಿವರಾದರೆ ದೇಶದ ಶಿಕ್ಷಣ ವ್ಯವಸ್ಥೆಯ ಗತಿ ಏನಾಗಬಹುದು ಎನ್ನುವುದು ನಮ್ಮೆಲ್ಲರ ಈಗಿನ ಆತಂಕ.

ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಯಲ್ಲಿ ಪ್ರಹ್ಲಾದ್ ಜೋಷಿ ಅವರ ಮುಖವಾಡವನ್ನು ಕಿತ್ತೊಗೆದು ದೇಶದ ಮುಂದೆ ನಿಲ್ಲಿಸಿದ್ದಾರೆ. ಸದನದಲ್ಲಿ ಅವರ ಬಾಯಿ ಮುಚ್ಚಿಸಬಹುದು, ಆದರೆ ದೇಶದ ಕೋಟ್ಯಂತರ ಜನರ ಬಾಯಿ ಮುಚ್ಚುವುದು ಸಾಧ್ಯ ಇಲ್ಲ. ಧರ್ಮೇಂದ್ರ ಪ್ರಧಾನ್ ಹಾದಿಯಲ್ಲಿಯೇ ಜೋಷಿ ಅವರು ಹೊರಡುವುದಕ್ಕೆ ಬಹಳ ದಿನಗಳು ಬೇಕಾಗಿಲ್ಲ. ಪ್ರಧಾನಿ ನರೇಂದ್ರ ಮೋದಿಯವರಿಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಬಗ್ಗೆ ಒಂದಿಷ್ಟು ಕಾಳಜಿ ಹೊಂದಿದ್ದರೆ ತಕ್ಷಣ ಶಿಕ್ಷಣ ಖಾತೆಯನ್ನು ಜೋಷಿ ಅವರಿಂದ ಕಿತ್ತುಕೊಂಡು, ಯಾರಾದರೂ ಅರ್ಹರಿದ್ದರೆ ಅಂತವರಿಗೆ ಈ ಮಹತ್ವದ ಖಾತೆಯ ಹೊಣೆ ವಹಿಸಿ ಕೊಡಬೇಕು ಎಂದು ನಾನು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ಕೇಂದ್ರಕ್ಕೆ ಸೂಚಿಸಿದ್ದಾರೆ.







