ಭಾರತ್ ಜೋಡೋ ಯಾತ್ರೆಯ ಯಶಸ್ಸು ಮತ್ತು ಇದಕ್ಕೆ ಸಿಗುತ್ತಿರುವ ಜನ ಮನ್ನಣೆಯ ಗಮನವನ್ನು ಮತ್ತೆ ಬೇರೆಡೆಗೆ ಸೆಳೆಯಲು ಬಿಜೆಪಿ ತನ್ನ ಸಾಂಪ್ರದಾಯಿಕವಾದ ಸನಾತನ ಸುಳ್ಳು ಪಾಂಡಿತ್ಯಕ್ಕೆ ಮೊರೆ ಹೋಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ತಮಗೆ ವಹಿಸಿದ ಖಾತೆಯನ್ನು ಸಮರ್ಥವಾಗಿ ನಿರ್ವಹಿಸಲಾಗದೆ ನಾಡಿನ ಜನರನ್ನು ಮಳೆ-ಪ್ರವಾಹದ ಪ್ರಪಾತದಲ್ಲಿ ಮುಳುಗಿಸಿದ ಸಚಿವ ಆರ್.ಅಶೋಕ್ ಅವರ ಬಾಯಲ್ಲಿ ಹಳೆ ಸುಳ್ಳನ್ನು ಹೊಸದಾಗಿ ಹೇಳಿಸಿದೆ ಎಂದು ಟೀಕಿಸಿದ್ದಾರೆ.
ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಎಫ್ಐ ಮೇಲಿನ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿತ್ತು ಎನ್ನುವ ಆರೋಪದ ಬಗ್ಗೆ ನಾನೇ ನಾಲ್ಕು ಬಾರಿ ಸರ್ಕಾರಕ್ಕೆ ಪತ್ರ ಬರೆದು, ನಮ್ಮ ಸರ್ಕಾರದ ಅವಧಿಯಲ್ಲಿ ಯಾವ ಪಿಎಫ್ಐ ಕಾರ್ಯಕರ್ತರ ವಿರುದ್ಧದ ಪ್ರಕರಣವನ್ನು ಹಿಂದಕ್ಕೆ ಪಡೆಯಲಾಗಿತ್ತು ಎನ್ನುವ ಬಗ್ಗೆ ಬಿಜೆಪಿ ಸರ್ಕಾರಕ್ಕೆ ಉತ್ತರ ಕೇಳಿದ್ದೆ.

ಆದರೆ, ನನಗೆ ಬಿಜೆಪಿ ಸರ್ಕಾರವೇ ಕೊಟ್ಟಿರುವ ಉತ್ತರದಲ್ಲಿ ಎಲ್ಲೂ ಪಿಎಫ್ಐ ಮೇಲಿನ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವ ಉಲ್ಲೇಖಗಳೇ ಇಲ್ಲ. ಇದನ್ನೇ ನಾನು ನಾಲ್ಕು ದಿನಗಳ ಹಿಂದೆ ಬಿಡುಗಡೆ ಮಾಡಿದ್ದ ಪತ್ರಿಕಾ ಹೇಳಿಕೆಯಲ್ಲೂ ತಿಳಿಸಿದ್ದೆ ಎಂದಿದ್ದಾರೆ.
ಆ ಹೇಳಿಕೆಯಲ್ಲೇ ನಾನು ಶಿವಮೊಗ್ಗ, ಹಾಸನದಲ್ಲಿ “ಫರ್ದಾ ಏ ಫರ್ದಾ” ಲೇಖನ ವಿರೋಧಿಸಿ ನಡೆದಿದ್ದ ಪ್ರತಿಭಟನೆಗಳನ್ನೂ ಉಲ್ಲೇಖಿಸಿ ಈ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿದ್ದನ್ನು ಹೇಳಿದ್ದೆ. ಈ ಪ್ರಕರಣಗಳಲ್ಲಿ ಪಿಎಫ್ಐ ಕಾರ್ಯಕರ್ತರು ಇದ್ದರು ಎನ್ನುವ ಬಗ್ಗೆ ಬಿಜೆಪಿ ಸರ್ಕಾರವೇ ನನಗೆ ಕೊಟ್ಟ ಉತ್ತರದಲ್ಲಿ ಉಲ್ಲೇಖಗಳಿಲ್ಲ.
ಬಿಜೆಪಿ ಸರ್ಕಾರ ನನಗೆ ನೀಡಿರುವ ಉತ್ತರದಲ್ಲಿ ನಮ್ಮ ಸರ್ಕಾರ ರೈತರು, ಕಾರ್ಮಿಕರು, ಪೌರ ಕಾರ್ಮಿಕರು, ಕಬ್ಬು ಬೆಳೆಗಾರರು, ಕಮ್ಮುನಿಸ್ಟ್ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವ ಬಗ್ಗೆ ಉಲ್ಲೇಖಗಳಿವೆ.

ಯಾವುದೇ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳು ಒಂದೇ ಸಮುದಾಯಕ್ಕೆ, ಒಂದೇ ಕೋಮಿಗೆ ಸೇರಿದವರು ಎನ್ನುವ ಒಂದೇ ಕಾರಣದಿಂದ ಎಲ್ಲರನ್ನೂ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಎಂದು ಬಿಂಬಿಸುವುದು, ಪಿಎಫ್ಐಗೂ ತಮಗೂ ಸಂಬಂಧವೇ ಇಲ್ಲ ಎನ್ನುತ್ತಿದ್ದ ಆರೋಪಿಗಳನ್ನೂ ಪಿಎಫ್ಐ ಸಂಘಟನೆಗೆ ಜಮೆ ಮಾಡುವ ಷಡ್ಯಂತ್ರಕ್ಕೆ ಸಚಿವ ಆರ್.ಅಶೋಕ್ ಅವರನ್ನು ಬಿಜೆಪಿ ಮುಂದೆ ಬಿಟ್ಟಿದೆ ಎಂದು ಕಿಡಿಕಾರಿದ್ದಾರೆ.
ಸಚಿವ ಆರ್.ಅಶೋಕ್ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿರುವ ಆರೋಪಿಗಳು ಪಿಎಫ್ಐ ಕಾರ್ಯಕರ್ತರಾಗಿದ್ದರು ಎನ್ನುವುದಕ್ಕೆ ಯಾವುದೇ ದಾಖಲೆಗಳನ್ನು ಒದಗಿಸಿಲ್ಲ. ಪಿಎಫ್ಐ ಸದಸ್ಯತ್ವದ ದಾಖಲೆಗಳನ್ನೂ ನೀಡಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಸರ್ಕಾರ ನನಗೆ ಕೊಟ್ಟಿರುವ ಉತ್ತರದಲ್ಲಿ ಇವುಗಳ ಪ್ರಸ್ತಾಪವೇ ಇಲ್ಲ ಎಂದಿದ್ದಾರೆ.
ತನ್ನ ತಟ್ಟೆಯಲ್ಲಿರುವ ಸತ್ತ ಹಗ್ಗೆಣವನ್ನು ಪಕ್ಕದವರ ತಟ್ಟೆಗೆ ಬಿಸಾಡುವ ಪಾಂಡಿತ್ಯವನ್ನು ಬಿಜೆಪಿ ಪ್ರದರ್ಶಿಸಿದೆ. ಇದಕ್ಕೆ ಬಿಜೆಪಿ ಶಾಸಕ ಬಸವಗೌಡ ಯತ್ನಾಳ್ ಅವರ ಹೇಳಿಕೆಯೇ ಸಾಕ್ಷಿ. “ಪಿಎಫ್ಐ ಕಾಂಗ್ರೆಸ್ ನ ಓಟಿನ ಬ್ಯಾಂಕನ್ನು ಛಿದ್ರ ಮಾಡುತ್ತಿತ್ತು” ಎಂದು ಯತ್ನಾಳ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಸತ್ಯ ತಾನೇ? ಎಂದು ಪ್ರಶ್ನಿಸಿದ್ದಾರೆ.






