ನಾಯಿ ಹಾಗೂ ಮನುಷ್ಯನ ಸಂಬಂಧದ ನಡುವಿನ ಕಥಾಹಂದರ ಹೊಂದಿರುವ ಡವ್ ಮಾಸ್ಟರ್ ಚಿತ್ರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸಾಥ್ ನೀಡಿದ್ದಾರೆ.
ಇತ್ತೀಚಿಗೆ ನಗರದ ಗಾಂಧಿ ಭವನದಲ್ಲಿ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ನಡೆಯಿತ್ತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಡವ್ ಮಾಸ್ಟರ್ ಚಿತ್ರ ನಾಯಿ ಹಾಗೂ ಮನುಷ್ಯನ ಸಂಬಂಧದ ನಡುವಿನ ಕಥಾಹಂದರ ಹೊಂದಿರುವ ಚಿತ್ರ ಎಂದು ತಿಳಿದು ಸಂತೋಷವಾಯಿತು. ಪ್ರಾಣಿಗಳಲ್ಲೇ ಹೆಚ್ಚು ನಿಯತ್ತಿನ ಪ್ರಾಣಿ ನಾಯಿ ಎನ್ನುತ್ತೇವೆ. ಆತ್ಮೀಯರಾದ ಚಾಂದ್ ಪಾಷ ಅವರ ಮಗ ರೋಷನ್ ಈ ಚಿತ್ರ ನಿರ್ಮಾಣ ಮಾಡಿರುವ ವಿಷಯ ತಿಳಿದು ಖುಷಿಯಾಯಿತು. ಇಡೀ ತಂಡಕ್ಕೆ ಒಳ್ಳೆಯದಾಗಲಿ. ಎಲ್ಲರೂ ಈ ಚಿತ್ರ ನೋಡುವ ಮೂಲಕ ಪ್ರೋತ್ಸಾಹಿಸಿ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ನಿರ್ಮಾಪಕ ಚಾಂದ್ ಪಾಷಾ ಮಾತನಾಡಿ ನಿರ್ದೇಶಕ ಆರ್ಯ ಹೇಳಿದ ಕಥೆ ಇಷ್ಟವಾಯಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆವು. ನಾನು ಇಪ್ಪತ್ತೈದು ವರ್ಷಗಳಿಂದ ಚಿತ್ರರಂಗದಲ್ಲಿ ವಿತರಕನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಈಗ ಚಿತ್ರ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ನನ್ನ ಮಗ ರೋಷನ್ ನೋಡಿಕೊಳ್ಳುತ್ತಿದ್ದಾನೆ. ಈ ಸಮಾರಂಭಕ್ಕೆ ಆಗಮಿಸಿರುವ ಸಿದ್ದರಾಮಯ್ಯ ಅವರು ಸೇರಿದಂತೆ ಎಲ್ಲಾ ಗಣ್ಯರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ನಿರ್ದೇಶಕ ಆರ್ಯ ಮಾತನಾಡಿ ನನ್ನ ಕಥೆ ಇಷ್ಟಪಟ್ಟು ನಿರ್ಮಾಣ ಮಾಡಿದ ನಿರ್ಮಾಪಕರಿಗೆ ಹಾಗೂ ನನ್ನ ಇಡೀ ತಂಡಕ್ಕೆ ಧನ್ಯವಾದ. ಸಿದ್ದರಾಮಯ್ಯ ಅವರಿಂದ ನಮ್ಮ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿಸಬೇಕೆಂಬುದು ನನ್ನ ಆಸೆಯಾಗಿತ್ತು. ಅದು ಈಡೇರಿದೆ. ಅವರಿಗೆ ವಿಶೇಷ ಧನ್ಯವಾದ ಎಂದಿದ್ದಾರೆ.

ನಟ ತಬಲನಾಣಿ ಮಾತನಾಡಿ ನನ್ನ ಅಭಿನಯದ ಚಿತ್ರವೊಂದಕ್ಕೆ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಆರ್ಯ ಈ ಚಿತ್ರದ ಕಥೆ ಹೇಳಿದಾಗ ಇಷ್ಟವಾಯಿತು. ನಾಯಿ ಹಾಗೂ ನನ್ನ ನಡುವಿನ ಬಾಂಧವ್ಯದ ಸನ್ನಿವೇಶಗಳನ್ನು ನಿರ್ದೇಶಕರು ಮನಮುಟ್ಟುವಂತೆ ತೋರಿಸಿದ್ದಾರೆ. ರಾಕಿ(ನಾಯಿ) ನನಗಿಂತ ಚೆನ್ನಾಗಿ ನಟಿಸಿದೆ ಅಂತ ಹೇಳಬಹುದು ಎಂದು ಹೇಳಿದ್ದಾರೆ.
ಚಿತ್ರದಲ್ಲಿ ತಬಲಾ ನಾಣಿ ಶಕೀಲ, ಕುರಿ ಪ್ರತಾಪ್, ಮಿತ್ರ, ನವೀನ್ ಪಡೀಲ್, ಪಂಕಜ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಆರ್ಯ ಆಕ್ಷನ್ ಕಟ್ ಹೇಳಿದ್ದು ರೋಷನ್ ಬಂಡವಾಳ ಹೂಡಿದ್ದಾರೆ, ಶಕೀಲ್ ಅಹ್ಮದ್ ಸಂಗೀತ ಸಂಯೀಜಿಸಿದ್ದು ಕಿರಣ್ ಕುಮಾರ್ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಸಮಾರಂಭದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಧಾನ ಪರಿಷತ್ ಸದಸ್ಯ ಸಲೀಂ ಅಹಮದ್, ಶಾಸಕ ಭೈರತಿ ಸುರೇಶ್, ನಾರಾಯಣ ಸ್ವಾಮಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಎಸ್ ಎ ಚಿನ್ನೇಗೌಡ, ಕೆ.ವಿ.ಚಂದ್ರಶೇಖರ್, ಹಾಲಿ ಅಧ್ಯಕ್ಷರಾದ ಭಾ.ಮ.ಹರೀಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ನಿರ್ಮಾಪಕರಾದ ಸಿದ್ದರಾಜು, ಭಾ.ಮ.ಗಿರೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

