ಕರ್ನಾಟಕ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಸಮಯ ಕೇಳಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯದಲ್ಲಿ ಅಧಿಕಾರ ಬದಲಾವಣೆಗೆ ವೇದಿಕೆ ಸಜ್ಜಾಗುತ್ತಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೇ ಮುಖ್ಯಮಂತ್ರಿ ಸ್ಥಾನ ಹಂಚಿಕೆ ಕುರಿತ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಕಾಲಕಾಲಕ್ಕೆ ಕೇಳಿಬರುತ್ತಿವೆ. ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಅಧಿಕಾರ ಹಂಚಿಕೆ ಬಗ್ಗೆ ಒಳಒಪ್ಪಂದವಿದೆ ಎಂಬ ಊಹಾಪೋಹಗಳು ಆಗಾಗ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿವೆ. ಆದರೆ ಕಾಂಗ್ರೆಸ್ ನಾಯಕರು ಇದನ್ನು ಬಹಿರಂಗವಾಗಿ ಒಪ್ಪಿಕೊಂಡಿಲ್ಲ.

ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಸರ್ಕಾರದ ಒಳಗಿನ ಅಸಮಾಧಾನ, ಕೆಲವು ಸಚಿವರ ಹೇಳಿಕೆಗಳು ಹಾಗೂ ನಾಯಕತ್ವದ ಬಗ್ಗೆ ಕೇಳಿಬರುತ್ತಿರುವ ಅಭಿಪ್ರಾಯಗಳು ದೆಹಲಿ ರಾಜಕೀಯಕ್ಕೂ ತಲುಪಿವೆ ಎನ್ನಲಾಗುತ್ತಿದೆ. ಇದೇ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಸಮಯ ಕೋರಿದ್ದಾರೆ ಎಂಬ ಮಾಹಿತಿ ಪಕ್ಷದ ಒಳವಲಯದಲ್ಲಿ ಹರಿದಾಡುತ್ತಿದೆ.ಆದರೆ ಮುಖ್ಯಮಂತ್ರಿ ಕಚೇರಿಯಿಂದಾಗಲಿ, ಕಾಂಗ್ರೆಸ್ ಹೈಕಮಾಂಡ್ನಿಂದಾಗಲಿ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಸಿದ್ದರಾಮಯ್ಯ ದೆಹಲಿ ಭೇಟಿಯ ಉದ್ದೇಶ ಸರ್ಕಾರದ ಆಡಳಿತಾತ್ಮಕ ವಿಚಾರಗಳಿಗೋ ಅಥವಾ ರಾಜಕೀಯ ಬೆಳವಣಿಗೆಗಳಿಗೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.ಇನ್ನೊಂದೆಡೆ, ಕಾಂಗ್ರೆಸ್ನ ಕೆಲವು ನಾಯಕರು “ಸರ್ಕಾರ ಸ್ಥಿರವಾಗಿದೆ, ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ” ಎಂದು ಹೇಳುತ್ತಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮಾತ್ರ ಕಾಂಗ್ರೆಸ್ ಒಳಗಿನ ಬೆಳವಣಿಗೆಗಳನ್ನು ಟೀಕಿಸುತ್ತಿದ್ದಾರೆ.ರಾಜ್ಯ ರಾಜಕೀಯದಲ್ಲಿ 2028ರ ವಿಧಾನಸಭೆ ಚುನಾವಣೆಯತ್ತ ರಾಜಕೀಯ ಪಕ್ಷಗಳು ಈಗಾಗಲೇ ತಂತ್ರ ರೂಪಿಸಲು ಆರಂಭಿಸಿವೆ.

ಇದೇ ಹಿನ್ನೆಲೆಯಲ್ಲಿ ಕಾಂಗ್ರೆಸ್ ಒಳಗಿನ ಶಕ್ತಿ ಪ್ರದರ್ಶನ, ನಾಯಕತ್ವ ಚರ್ಚೆಗಳು ಹಾಗೂ ದೆಹಲಿ ಭೇಟಿಗಳು ಹೆಚ್ಚುತ್ತಿರುವುದು ಗಮನಾರ್ಹವಾಗಿದೆ.ಸದ್ಯ ಸಿದ್ದರಾಮಯ್ಯ ಹೈಕಮಾಂಡ್ ಭೇಟಿಯ ಕುರಿತ ರಾಜಕೀಯ ಚರ್ಚೆಗಳು ತೀವ್ರಗೊಂಡಿದ್ದು, ಮುಂದಿನ ಕೆಲವು ದಿನಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ನ ನಡೆ ರಾಜ್ಯ ರಾಜಕೀಯದಲ್ಲಿ ಮಹತ್ವದ ತಿರುವು ನೀಡುವ ಸಾಧ್ಯತೆ ಇದೆ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ.






