ಕರೋನ ಸೋಂಕು ತೀವ್ರತೆ ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆಯು ಕೂಡ ಹೇರಳವಾಗುತ್ತಿರುವುದನ್ನು ಕಂಡು ಪ್ರಧಾನಿ ನರೇಂದ್ರ ಮೋದಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಪತ್ರ ಬರೆದಿದ್ದಾರೆ.
ಕರೋನ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ನೆರವಿಗೆ ಧಾವಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಗುರುವಾರ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅವರು, ಕರೋನದಂತ ದುರಂತದ ಸಂದರ್ಭದಲ್ಲಿ ದೇಶ ಈ ಮಕ್ಕಳಿಗೆ ಉತ್ತಮ ಭವಿಷ್ಯದ ಭರವಸೆ ನೀಡಬೇಕಾಗಿದೆ. ಕರೋನದಿಂದ ಅನಾಥವಾಗಿರುವ ಮಕ್ಕಳಿಗೆ ನವೋದಯ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡಲು ಒತ್ತಾಯ ಮಾಡಿದ್ದಾರೆ.
“ತಂದೆ, ತಾಯಿ ಅಥವಾ ಇಬ್ಬರನ್ನೂ ಕಳೆದುಕೊಂಡಿರುವ ಅನೇಕ ನಿದರ್ಶನಗಳಿವೆ. ಈಗ ಅಂತಹ ಮಕ್ಕಳ ಜೊತೆಗೆ ದೇಶ ನಿಲ್ಲಬೇಕಾಗಿದೆ. ಗ್ರಾಮೀಣ ಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ತಮ್ಮ ಪತಿ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸಿದ್ದರು. ದೇಶದಾದ್ಯಂತ ಇಂಥ 661 ಶಾಲೆಗಳಿವೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇನ್ನೊಂದೆಡೆ ಕರೋನದಿಂದ ಪೋಷಕರನ್ನು ಕಳೆದುಕೊಳ್ಳುತ್ತಿರುವರ ಸಂಖ್ಯೆ ಹೆಚ್ಚಾಗಿದೆ. ಕೆಲವು ಮಕ್ಕಳ ಕಳ್ಳಸಾಗಣೆ ಮಾಡುವವರು ಇದನ್ನೇ ಬಂಡವಾಳ ಮಾಡಿಕೊಂಡು ಮಕ್ಕಳನ್ನು ದತ್ತು ತೆಗೆದುಕೊಳ್ಳುತ್ತೇವೆ ಎನ್ನುವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.