ಸೌಜನ್ಯಾ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ನಾಳೆ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಮಹೇಶ್ ಶೆಟ್ಟಿ ಹೇಳಿದ್ದಾರೆ. ಪ್ರತಿಭಟನೆ ರದ್ದಾಗಿರುವ ವದಂತಿಯನ್ನು ನಿರಾಕರಿಸಿದ ಮಹೇಶ್ ಶೆಟ್ಟಿ ತಿಮರೋಡಿ ಯಾವುದೇ ಕಾರಣಕ್ಕೂ ಪ್ರತಿಭಟನೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುಮಾರು 11 ವರ್ಷಗಳ ಹಿಂದೆ ಅಮಾನುಷವಾಗಿ ಕೊಲೆಗೀಡಾದ ಸೌಜನ್ಯಾಗೆ ನ್ಯಾಯ ಸಿಗಬೇಕೆಂಬ ಕೂಗು ರಾಜ್ಯದ ಎಲ್ಲಡೆ ಕೇಳಿಬರುತ್ತಿದೆ. ಈ ಕಾರಣಕ್ಕಾಗಿ ನಾಳೆ (ಸೆಪ್ಟೆಂಬರ್ 3) ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು ಲಕ್ಷಾಂತರ ಮಂದಿ ಭಾಗವಹಿಸಿ ನ್ಯಾಯಕ್ಕಾಗಿ ಆಗ್ರಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ..
ಈ ಮಧ್ಯೆ ನಾಳೆಯ ಸಭೆ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ರದ್ದಾಗಿದೆ ಎಂಬ ಅಪಪ್ರಚಾರ ನಡೆಯುತ್ತಿದೆ. ಇದಕ್ಕೆ ಸ್ಪಷ್ಟನೆ ನೀಡಿರುವ ಮಹೇಶ್ ಶೆಟ್ಟಿ ತಿಮರೋಡಿ, ಯಾವುದೇ ಕಾರಣಕ್ಕೂ ನಾಳೆಯ ಸಭೆ ರದ್ದಾಗಿಲ್ಲ. ಕೆಲವರು ಜನರ ದಾರಿ ತಪ್ಪಿಸಲು ಇಂತಹ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಬೃಹತ್ ಪ್ರತಿಭಟನಾ ಸಭೆ ನಡೆಯಲಿದ್ದು, ಎಲ್ಲರೂ ಆಗಮಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಸೌಜನ್ಯಾ ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ನಡೆಯುವ ಈ ಪ್ರತಿಭಟನೆಯಲ್ಲಿ ಸ್ಥಳೀಯ ಒಕ್ಕಲಿಗ ಕಾವೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಬಾಲಕೃಷ್ಣ, ಹಿಂದೂ ಸಂಘಟನೆಯ ನಾಯಕ ಪ್ರಮೋದ್ ಮುತಾಲಿಕ್ ಮತ್ತಿತರರು ಭಾಗವಹಿಸಲಿದ್ದಾರೆ.
ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ಬೆಳ್ತಂಗಡಿ ಪ್ರಜಾಪ್ರಭುತ್ವ ವೇದಿಕೆ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಈ ಪ್ರತಿಭಟನೆ ಆಯೋಜಿಸಲಾಗಿದೆ. ಈ ಪ್ರಯುಕ್ತ ಜಾಥಾವನ್ನೂ ಆಯೋಜಿಸಲಾಗಿದೆ.